ಅನ್ಯ ಭಾಷಿಕರು ಕನ್ನಡ ಕಲಿತು ಮಾತನಾಡುವಂತಾಗಬೇಕು : ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ವಾಸಿಸುವ ಎಲ್ಲರೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸುವ ವಾತಾವರಣವನ್ನು ಸೃಷ್ಟಿಸಬೇಕು. ಇದು ಕನ್ನಡಿಗರಾದ ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ತಾವು ಯಾವಾಗಲೂ ಕನ್ನಡದ ಪರವಾಗಿ ಎನ್ನುವ ಸಂದೇಶ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮನ್ವಯ- ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸುವರ್ಣ ಸಂಭ್ರಮ ಕರ್ನಾಟಕ 50 "ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ" ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದಲ್ಲಿ ಯಾವ ಭಾಷೆಯನ್ನಾದರೂ ಬಳಸಿ ಬದುಕಬಹುದು ಎಂಬ ವಾತಾವರಣ ನಿರ್ಮಾಣವಾಗಿದೆ. ಆದರೇ ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ ಹಾಗೂ ಅಗ್ರಭಾಷೆ ಹಾಗಾಗಿ ಅನ್ಯರಾಜ್ಯ, ವಿದೇಶದಿಂದ ಬಂದಂತವರು ಕನ್ನಡವನ್ನು ಕಡ್ಡಾಯವಾಗಿ ಕಲಿತು ಕನ್ನಡದಲ್ಲೇ ವ್ಯವಹರಿಸಬೇಕು. ಕನ್ನಡವು ಕೆಲವೇ ಜನರದ್ದಾಗದೆ ಏಳು ಕೋಟಿ ಕನ್ನಡಿಗರ ಉಸಿರಾಗಬೇಕು. ಕನ್ನಡವನ್ನು ಕಲಿಯಲು ಮರೆಯಬಾರದು ಕನ್ನಡ ಮಾತನಾಡುವುದನ್ನು ಬಿಡಬಾರದು ಎನ್ನುವುದನ್ನು ಪಾಲಿಸಬೇಕು ಎಂದರು.
ಕರ್ನಾಟಕದಲ್ಲಿ ಬದುಕನ್ನು ಕಟ್ಟಿಕೊಂಡವರು ಅನ್ಯ ಭಾಷಿಗರು ಕನ್ನಡವನ್ನು ಮಾತನಾಡುವವರಾಗಬೇಕು. ಕನ್ನಡಿಗರು ಯಾವುದೇ ಭಾಷೆಯನ್ನು ದ್ವೇಷಿಸುವುದಿಲ್ಲ. ಎಲ್ಲಾ ಭಾಷೆಯನ್ನು ಕಲಿಯಬೇಕು ಆದರೇ ಕನ್ನಡವನ್ನು ಹೆಚ್ಚಾಗಿ ಬಳಸಬೇಕು. ಬೇರೆ ರಾಜ್ಯದ ಜನರಂತೆ ನಾವು ನಮ್ಮ ತಾಯಿ ಭಾಷೆ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕನ್ನಡ ನಾಡಿನಲ್ಲಿ ಹುಟ್ಟಿದ ನಾವು, ಕನ್ನಡ ನಾಡು ನುಡಿಗೆ ನಮ್ಮದೇ ಅದ ಕೊಡುಗೆಯನ್ನು ನೀಡಿ, ಬೆಳೆಸಬೇಕು ಎಂದು ಹೇಳಿದರು.
ದೇವರಾಜ ಅರಸು ಅವರು 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ನಾಮಕರಣ ಕಳೆದ ವರ್ಷಕ್ಕೆ 50 ವರ್ಷ ಪೂರೈಸಿದ್ದು, ಹಿಂದಿನ ಸರ್ಕಾರ ಸಂಭ್ರಮಾಚರಣೆಯನ್ನು ಮಾಡಬೇಕಿತ್ತು. ಕಾರಣಾಂತರಗಳಿಂದ ನಡೆಯದ ಕಾರಣ ಈಗ ನಮ್ಮ ಸರ್ಕಾರ ಸಂಭ್ರಮಾಚರಣೆ ಮಾಡಬೇಕೆಂದು 2023-24 ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಿ ಇಂದು ಕನ್ನಡ ಜನೋತ್ಸವವಾಗಿ ಮಾಡಲಾಗುತ್ತಿದೆ ಎಂದರು.
ಕನ್ನಡದ ಸಾಹಿತ್ಯ ಹಾಗೂ ಸಂಸ್ಕೃತಿಯ ಪರಂಪರೆಯು ದೊಡ್ಡದು, ಸಾಂಸ್ಕೃತಿಕ ನಾಯಕನಾದ ಬಸವಣ್ಣನವರಿಂದ ಕುವೆಂಪು, ಕಾರಂತರಂತಹ ಮಹಾನ್ ಸಾಹಿತಿಗಳು ಕೊಡುಗೆ ನೀಡಿದ್ದಾರೆ ಎಂದರು.
ಜಾತಿ ವ್ಯವಸ್ಥೆ, ಧರ್ಮಾಧಾರಿತ ಪ್ರಾಬಲ್ಯವನ್ನು ಹೋಗಲಾಡಿಸಲು ನಮ್ಮ ನಾಡಿನ ಹಿರಿಯರು ಕಾಲ-ಕಾಲಕ್ಕೆ ಸಂಸ್ಕೃತಿಯ ಬಗ್ಗೆ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಇಂದಿನ ಕವಿಗಳು ಮತ್ತು ಸಾಹಿತಿಗಳು ತಮ್ಮ ಸಾಹಿತ್ಯದ ಶ್ರೀಮಂತ ಬೇರನ್ನು ಹೆಚ್ಚಿನ ಜನರಿಗೆ ತಲುಪಿಸಿ, ಸಾಹಿತ್ಯ ಹಾಗೂ ಸಂಸ್ಕೃತಿಯಲ್ಲಿ ಅಭಿವೃದ್ಧಿಯ ಬೆಳಕು ತರಬೇಕು ಎಂದು ಕರೆ ನೀಡಿದರು.











Click it and Unblock the Notifications