ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿ ಫಾರಂ ಇಲ್ಲದೆ ನಾಮಪತ್ರ ಸಲ್ಲಿಸಿದ ಬಿಜೆಪಿ ಆಕಾಂಕ್ಷಿ
ವಿಧಾನ ಪರಿಷತ್ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಗೊಂದಲ ಮೂಡಿದೆ. ಇತ್ತ ಬಿಜೆಪಿ ಆಕಾಂಕ್ಷಿ ಬಿ ಫಾರಂ ಇಲ್ಲದೆ ಬುಧವಾರ ನಾಮಪತ್ರ ಸಲ್ಲಿಸಿದರೆ, ಅತ್ತ ಜೆಡಿಎಸ್ ಪಕ್ಷದ ವತಿಯಿಂದ ಕೆ.ವಿವೇಕಾನಂದ ಅವರಿಗೆ ಬಿ ಫಾರಂ ನೀಡಲಾಗಿದೆ.
ಒಟ್ಟು ಆರು ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಐದು-ಒಂದರಂತೆ ಬಿಜೆಪಿ-ಜೆಡಿಎಸ್ ನಡುವೆ ಟಿಕೆಟ್ ಹಂಚಿಕೆ ಆಗಿತ್ತು. ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಡಾ.ಈ.ಸಿ.ನಿಂಗರಾಜ್ ಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಆದರೀಗ ಜೆಡಿಎಸ್ ತನ್ನ ಅಭ್ಯರ್ಥಿಗೆ ಟಿಕೆಟ್ ನೀಡಿರುವುದರಿಂದ ಬಿಜೆಪಿ ಅಡಕತ್ತರಿಯಲ್ಲಿ ಸಿಲುಕಿಕೊಂಡಿದೆ.

ಇತ್ತ ಜೆಡಿಎಸ್ನ ಮತ್ತೊಬ್ಬ ಟಿಕೆಟ್ ಆಕಾಂಕ್ಷಿ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರಿಗೆ ನಿರಾಸೆಯಾಗಿದ್ದು, ಅವರು ಬಂಡಾಯವೆದ್ದಿದ್ದಾರೆ. ಮೈಸೂರಿನಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಜೊತೆಗೆ ಸ್ವಾಭಿಮಾನಿ ಶಿಕ್ಷಕರ ವೇದಿಕೆ ಪರವಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ಘೋಷಣೆ ಮಾಡಿರುವುದರಿಂದ ಬಿಜೆಪಿ ಆಕಾಂಕ್ಷಿ ಡಾ.ಈ.ಸಿ.ನಿಂಗರಾಜ್ ಗೌಡ ಅವರಿಗೆ ಭಾರಿ ನಿರಾಸೆಯಾಗಿದೆ.
ಕಾಂಗ್ರೆಸ್ಗೆ ಅನುಕೂಲವೇ?
ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರ ತಮಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ನಿರಾಳರಾಗಿದ್ದು, ಮೈತ್ರಿ ಅಭ್ಯರ್ಥಿಯ ಆಯ್ಕೆ ತಮಗೆ ಗೆಲುವು ತಂದು ಕೊಡುತ್ತದೆ ಎನ್ನುವ ವಿಶ್ವಾಸದಲ್ಲಿ ಇದ್ದಾರೆ.
ನಾಮಪತ್ರ ಸಲ್ಲಿಸಿದ ನಿಂಗರಾಜ ಗೌಡ
ಹಲವು ಗೊಂದಲಗಳ ನಡುವೆಯೂ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಈ.ಸಿ.ನಿಂಗರಾಜ ಗೌಡ ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, "ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದರಿಂದ ನಾಮಪತ್ರ ಸಲ್ಲಿಸಿದ್ದೇನೆ. ಬಿ ಫಾರಂ ಕೊಡುತ್ತೇನೆಂದು ಬಿಜೆಪಿ ನಾಯಕರು ಹೇಳಿದ್ದಾರೆ. ಗುರುವಾರ ಮುಖಂಡರೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದರು.
ಕೆ.ವಿವೇಕಾನಂದ ನಾಮಪತ್ರ ಸಲ್ಲಿಕೆ
ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೆ.ವಿವೇಕಾನಂದ ಜೆಡಿಎಸ್ ಬಿ ಫಾರಂ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ಅವರಿಂದ ವಿವೇಕಾನಂದ ಬಿ ಫಾರಂ ಪಡೆದರು.












Click it and Unblock the Notifications