ಪಿರಿಯಾಪಟ್ಟಣ ಮಾಜಿ-ಹಾಲಿ ಶಾಸಕರ ಕಿತ್ತಾಟ: ಸಿದ್ದರಾಮಯ್ಯಗೆ ದೂರು
ಮೈಸೂರು, ಜನವರಿ 01: ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ನಾಯಕರ ಕಿತ್ತಾಟ ತಾರಕಕ್ಕೇರಿದ್ದು, ಜೆಡಿಎಸ್ ಶಾಸಕ ಕೆ.ಮಹದೇವ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ದೂರು ನೀಡಿದ್ದಾರೆ.
ತಾಲೂಕಿನ 300ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ನೇತೃತ್ವದಲ್ಲಿ ಮೈಸೂರಿನಲ್ಲಿ ಸಮನ್ವಯ ಸಮಿತಿಯ ಅಧ್ಯಕ್ಷರಾದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಶಾಸಕ ಕೆ.ಮಹದೇವ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವಂತೆ ಮನವಿ ಮಾಡಿದ್ದಾರೆ.
ಶಾಸಕ ಕೆ.ಮಹದೇವ್ ಸರ್ಕಾರಿ ಅಧಿಕಾರಿಯೊಬ್ಬರ ಜೊತೆ ಸಂಭಾಷಣೆ ವೇಳೆ ಮಾಜಿ ಶಾಸಕ ವೆಂಕಟೇಶ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಈ ವೇಳೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕಿನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು ಅತೀ ಶೀಘ್ರದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಾಂಗೆಸ್ ವರಿಷ್ಟರು ಹಾಗೂ ಜೆಡಿಎಸ್ ನ ವರಿಷ್ಟರಾದ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಆಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್ ಕಾರ್ಯಕರ್ತರು ಸಭೆ ನಡೆಸಿ ಶಾಸಕ ಕೆ.ಮಹದೇವ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಜೆಡಿಎಸ್ ಕಾರ್ಯರ್ತರು ಕೂಡ ಮಾಜಿ ಶಾಸಕ ಕಾಂಗ್ರೆಸ್ ನ ಕೆ.ವೆಂಕಟೇಶ್ ಈ ಹಿಂದೆ ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಪ್ರಚೋದನಾಕಾರಿ ಭಾಷಣ ಮಾಡಿದ್ದನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ. ಇದೀಗ ಮಾಜಿ ಮತ್ತು ಹಾಲಿ ಶಾಸಕರ ಕಿತ್ತಾಟ ಸಿದ್ದರಾಮಯ್ಯ ಅಂಗಳಕ್ಕೆ ಬಂದು ಬಿದ್ದಿದ್ದು ಅವರು ಹೇಗೆ ಬಗೆಹರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.












Click it and Unblock the Notifications