ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮತ್ತಷ್ಟು ವಿಳಂಬ!
ಮೈಸೂರು, ಫೆ.24 : ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಸಂಪುಟದ ಕೆಲವು ಸಚಿವರ ಹೆಸರುಗಳನ್ನು ಸೇರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಮೊದಲ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಮೈಸೂರಿನಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಚುನಾವಣಾ ಸಮಿತಿಯೊಂದಿಗೆ ಮೊದಲ ಹಂತದ ಸಭೆ ನಡೆದಿದ್ದು, ಹಾಲಿ ಸಂಸದರು ಸೇರಿದಂತೆ ಪೈಪೋಟಿ ಕಡಿಮೆ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯ ಕುರಿತು ಚರ್ಚೆ ನಡೆಸಲಾಗಿದೆ.

ಇನ್ನೊಂದು ಸುತ್ತಿನಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ನಂತರ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕೆಲವು ಸಚಿವರು ಉತ್ಸಾಹ ತೋರಿಸಿದ್ದಾರೆ. ಅವರ ಹೆಸರುಗಳನ್ನು ಹೈಕಮಾಂಡ್ ನಾಯಕರಿಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದರು. [ಟಿಕೆಟ್ ಹಂಚಿಕೆ ಕಸರತ್ತು ಎಲ್ಲಿಗೆ ಬಂತು]
ಸಚಿವರು ಮತ್ತು ವಿಧಾನಪರಿಷತ್ ಸದಸ್ಯರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ನಾವು ಹೈಕಮಾಂಡ್ ನಾಯಕರಿಗೆ ಸಲ್ಲಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು. [ಕಾಂಗ್ರೆಸ್ ಸಂಭಾವ್ಯ ಪಟ್ಟಿ]
ಗೌಡರು ಸ್ಪರ್ಧಿಸಲಿ ಬಿಡಿ : ಮೈಸೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಸದಾನಂದ ಗೌಡ ಸ್ಪರ್ಧಿಸುವ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅವರನ್ನು ಸ್ಪರ್ಧಿಸದಂತೆ ತಡೆಯಲು ನಾವ್ಯಾರು, ಸ್ಪರ್ಧಿಸಲಿ ಬಿಡಿ. ಯಾರಿಗೆ ಮತ ನೀಡಬೇಕೆಂದು ಜನರು ನಿರ್ಧರಿಸುತ್ತಾರೆ ಎಂದು ಹೇಳಿದರು.
ಆಂತರಿಕ ಚುನಾವಣೆ ಮುಗಿದ ಬಳಿಕ ಪಟ್ಟಿ : ಕಾಂಗ್ರೆಸ್ ಮೂಲಗಳ ಪ್ರಕಾರ ತೀವ್ರ ಪೈಪೋಟಿ ಎದುರಾಗಿರುವ ಬೆಂಗಳೂರು ಉತ್ತರ ಮತ್ತು ಮಂಗಳೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಾಗಿ ನಡೆಯುವ ಆಂತರಿಕ ಚುನಾವಣೆ ಮಾರ್ಚ್ 10ರೊಳಗೆ ಅಂತಿಮಗೊಳ್ಳುವ ಸಾಧ್ಯತೆ ಇದೆ. ನಂತರ ಸಭೆ ಸೇರಲಿರುವ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ. [ಅಭ್ಯರ್ಥಿ ಆಯ್ಕೆಗಾಗಿ ಆಂತರಿಕ ಚುನಾವಣೆ]












Click it and Unblock the Notifications