ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರೋಧಿಸಿ ಕಾಂಗ್ರೆಸ್ ಹೋರಾಟ
ಕರ್ನಾಟಕದಲ್ಲಿ ಮತ್ತೆ ಪಾದಯಾತ್ರೆ ಪರ್ವ ಶುರುವಾಗಿದೆ. ಬಿಜೆಪಿ ವಿರುದ್ಧ ಪಾದಯಾತ್ರೆ ಮಾಡಿಯೇ ಅಧಿಕಾರಕ್ಕೇರಿದ ಕಾಂಗ್ರೆಸ್ಗೆ ಈಗ ವಿರೋಧ ಪಕ್ಷಗಳ ಪಾದಯಾತ್ರೆಯ ಬಿಸಿ ತಟ್ಟಿದೆ. ಮುಡಾ ಹಗರಣದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಮಾಡುತ್ತಿದ್ದು, ಇದನ್ನು ವಿರೋಧಿಸಿ ಕಾಂಗ್ರೆಸ್ ಕೂಡ ಪ್ರತಿಭಟನೆ ಮಾಡುತ್ತಿದೆ.
ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್ ರಾಜಕೀಯ ಹುನ್ನಾರದ ಪಾದಯಾತ್ರೆ ನಡೆಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೇತೃತ್ವದಲ್ಲಿ ಮೈಸೂರಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಪೊಲೀಸರು ಅದನ್ನು ವಿಫಲಗೊಳಿಸಿದ್ದಾರೆ.

ಪ್ರತಿಭಟನಾಕಾರರು ಜಿಲ್ಲಾ ಪಂಚಾಯತ್ ಕಚೇರಿ ಎದುರಿನಿಂದ ಬಿಜೆಪಿ ಕಚೇರಿಯ ಕಡೆಗೆ ಹೊರಟಾಗ ಬ್ಯಾರಿಕೇಡ್ ಹಾಕುವ ಮೂಲಕ ಪೊಲೀಸರು ತಡೆದರು. ಈ ವೇಳೆ ಕೆಲವರು ಘೋಷಣೆಗಳನ್ನು ಕೂಗುತ್ತಾ ಬ್ಯಾರಿಕೇಡ್ ತಳ್ಳುವುದಕ್ಕೆ ಮುಂದಾದರು. ಆದರೆ ಪೊಲೀಸರು ಅವರನ್ನು ಹಿಂದಕ್ಕೆ ತಳ್ಳಿದರು. ಪೊಲೀಸರು ಮುತ್ತಿಗೆಗೆ ಅವಕಾಶ ನೀಡದ ಕಾರಣ ಪೊಲೀಸರ ವಶಕ್ಕೊಳಗಾಗದೆ ವಾಪಸ್ ನ್ಯಾಯಾಲಯದ ಎದುರಿನ ಗಾಂಧಿಪುತ್ಥಳಿ ಬಳಿ ಬಂದು ಧರಣಿ ನಡೆಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, "ಮುಡಾದಲ್ಲಿ ನಡೆದಿರುವ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಾಕಾರಣ ತೇಜೋವಧೆ ಮಾಡುವ ಕೆಲಸ ಮಾಡಲಾಗುತ್ತಿದೆ. ಇಡಿ, ಸಿಬಿಐ, ಐಟಿಯನ್ನು ದುರ್ಬಳಕೆ ಮಾಡಿಕೊಂಡು ಸಿಎಂ ಸ್ಥಾನದಿಂದ ಕೆಳಗಿಳಿಸುವ ಹುನ್ನಾರ ಮಾಡಲಾಗುತ್ತಿದೆ" ಎಂದು ಕಿಡಿಕಾರಿದರು.
"ಸಾಮಾಜಿಕ ನ್ಯಾಯಕ್ಕೆ ತಕ್ಕಂತೆ ಅಭಿವೃದ್ಧಿ ಮಾಡುತ್ತಿರುವ ಹಿಂದುಳಿದ ವರ್ಗಗಳ ನಾಯಕನ ಬಗ್ಗೆ ಬಿಜೆಪಿ-ಜೆಡಿಎಸ್ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಇದೇ ರೀತಿ ಅನಗತ್ಯವಾಗಿ ಅಪಪ್ರಚಾರ ಮಾಡಿದರೆ ಅಹಿಂದ ಸಂಘಟನೆ ಸುಮ್ಮನೇ ಕೂರುವುದಿಲ್ಲ" ಎಂದು ಎಚ್ಚರಿಕೆ ನೀಡಿದರು.
ಮಹಾರಾಜ ಕಾಲೇಜು ಮೈದಾನದ ಬಳಿಯ ಏಕಲವ್ಯ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ಭಿತ್ತಿ ಫಲಕಗಳನ್ನು ಹಿಡಿದು ದಾರಿಯುದ್ದಕ್ಕೂ ಬಿಜೆಪಿ-ಜೆಡಿಎಸ್ ನಾಯಕರಿಗೆ ಧಿಕ್ಕಾರ, ಸಿಎಂ ಹೆಸರಿಗೆ ಮಸಿ ಬಳಿಯುತ್ತಿರುವ ಬಿಜೆಪಿ ಮುಖಂಡರಿಗೆ ಧಿಕ್ಕಾರ, ಸಾಮಾಜಿಕ ನ್ಯಾಯದ ಸಿದ್ದರಾಮಯ್ಯರಿಗೆ ಜಯವಾಗಲಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು.












Click it and Unblock the Notifications