ಮಾ.15 ರಂದು ಚಾಮರಾಜನಗರದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ
ಮೈಸೂರು, ಮಾರ್ಚ್ 14: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಾಳೆ ಶುಕ್ರವಾರ (ಮಾ.15) ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಪರಿವರ್ತನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದೆ. ಕಾರ್ಯಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿ. ಕೆಶಿವಕುಮಾರ್, ದಿನೇಶ್ ಗುಂಡೂರಾವ್ , ಎಚ್.ಕೆ.ಪಾಟೀಲ್, ಪುಟ್ಟರಂಗ ಶೆಟ್ಟಿ, ವಿಷ್ಣುನಾಥ್, ಹೆಚ್.ಸಿ.ಮಹದೇವಪ್ಪ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದರು.
ಸಮಾವೇಶದಲ್ಲಿ 20 ಸಾವಿರ ಜನ ಸೇರುವ ನಿರೀಕ್ಷೆಯಿದ್ದು, 16 ರಂದು ಮೈಸೂರು-ಕೊಡಗು ಅಭ್ಯರ್ಥಿಗಳು ಯಾರೆಂದು ನಿರ್ಧಾರವಾಗಲಿದೆ ಎಂದು ಯತೀಂದ್ರ ಹೇಳಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಆದ ಹಿನ್ನಲೆಯಲ್ಲಿ ಎಚ್.ಸಿ.ಮಹದೇವಪ್ಪರ ಮನಸ್ಸಿಗೆ ನೋವಾಗಿದೆ. ಅವರ ಮತ್ತು ನನ್ನ ಭಾಂಧವ್ಯ ಉತ್ತಮವಾಗಿದೆ. ನಾಳೆ ಕಾಂಗ್ರೆಸ್ ಪರಿವರ್ತನಾ ಸಮಾವೇಶಕ್ಕೆ ಎಚ್.ಸಿ.ಮಹದೇವಪ್ಪ ಕೂಡ ಆಗಮಿಸುತ್ತಿದ್ದಾರೆ. ನಾಳೆ ಮಾಧ್ಯಮಗಳ ಎಲ್ಲಾ ಗೊಂದಲಗಳಿಗೆ ಉತ್ತರ ಸಿಗಲಿದೆ ಎಂದು ಯತೀಂದ್ರ ತಿಳಿಸಿದರು.
ಬೋಸ್ ರವರು ನಮ್ಮ ಜೊತೆ ಕಳೆದ ಚುನಾವಣೆ ಪ್ರಚಾರದಲ್ಲಿದ್ದರು ಎಂದ ಯತೀಂದ್ರ, ಸಿದ್ದರಾಮಯ್ಯ ಮೈಸೂರು ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಆದರೆ ತಂದೆಯವರೇ ಈ ಹಿಂದೆಯೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಲ್ಲ ಎಂದರು.












Click it and Unblock the Notifications