ಮೇಕೆದಾಟು ವಿಚಾರವಾಗಿ ಪ್ರತಾಪ ಸಿಂಹಗೆ ತಿರುಗೇಟು ನೀಡಿದ ಕಾಂಗ್ರೆಸ್ ವಕ್ತಾರ
ಮೈಸೂರು, ಆಗಸ್ಟ್ 02: "ರಾಮನಗರ ಜಿಲ್ಲೆಯ ಮೇಕೆದಾಟು ಅಣೆಕಟ್ಟು ಯೋಜನೆಗೆ ಬಿಜೆಪಿ ಸರ್ಕಾರದ ಕೊಡುಗೆ ಶೂನ್ಯವಾಗಿದ್ದು, ನೀವು ಡೋಂಗಿ ಹೊಡಿಬೇಡಿ,'' ಎಂದು ಸಂಸದ ಪ್ರತಾಪ ಸಿಂಹಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಲೇವಡಿ ಮಾಡಿದ್ದಾರೆ.
ಮೈಸೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂ. ಲಕ್ಷ್ಮಣ್, "ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಕಾವೇರಿ ಮತ್ತು ಅರ್ಕಾವತಿ ನದಿಗಳು ಸೇರುವ ಸ್ಥಳದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ. ಕಳೆದ 2013ರಲ್ಲಿ ಕಾಂಗ್ರೆಸ್ ಸರ್ಕಾರದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಮೇಕೆದಾಟು ಯೋಜನೆಗೆ ಅನುಮೋದನೆ ನೀಡಿದ್ದರು.''
12 ಸಾವಿರ ಎಕರೆ ಜಾಗದಲ್ಲಿ ಮೇಕೆದಾಟು ಯೋಜನೆ ನಿರ್ಮಾಣವಾಗಲಿದ್ದು, ಮೇಕೆದಾಟು ಅಣೆಕಟ್ಟು ಯೋಜನೆಯಿಂದ ನಮ್ಮ ರಾಜ್ಯದಲ್ಲಿ ಕುಡಿಯುವ ನೀರಿಗೆ ಮಾತ್ರ ಪ್ರಯೋಜನ ಆಗಲಿದೆ. ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಕೊಡುಗೆಯಾಗಿದೆ, ಎಂದು ತಿಳಿಸಿದರು.

"ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಡಿಪಿಆರ್ ಮಾಡಿಸಿದ್ದು ನಾವೇ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಅವರ ಕೊಡುಗೆ ಇಲ್ಲವೇ? ನಿಮ್ಮ ಕೊಡುಗೆ ಇರುವುದನ್ನು ಸಾಬೀತು ಮಾಡಿದರೆ ನಾನು ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ. ನಿಮ್ಮ ಹೇಳಿಕೆ ಸುಳ್ಳು ಎಂದು ಸಾಬೀತಾದರೆ ಇನ್ನು ಮುಂದೆ ನಿಮ್ಮನ್ನು ಸುಳ್ಳುಗಾರ ಎಂದೇ ಕರೆಯುತ್ತೇನೆ. ಬಿಜೆಪಿಯವರು ಬರೀ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇವರಿಗೆ ರಾಜ್ಯದ ಬಗ್ಗೆ ಕಿಂಚಿತ್ತು ಕಾಳಜಿಯಿಲ್ಲ,'' ಎಂದು ಎಂ. ಲಕ್ಷ್ಮಣ್ ವಾಗ್ದಾಳಿ ನಡೆಸಿದರು.
ಇದೇ ವೇಳೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ಕಿಡಿಕಾರಿದ ಅವರು, "ಅವನನ್ನು ಐಪಿಎಸ್ ಹುದ್ದೆಗೆ ರಾಜಿನಾಮೆ ಕೊಡಿಸಿದಿರಿ, ಅವನನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷನನ್ನಾಗಿ ಮಾಡಿದಿರಿ. ಈಗ ನೀವೇ ಮೇಕೆದಾಟು ಅಣೆಕಟ್ಟು ವಿಚಾರವಾಗಿ ಪ್ರತಿಭಟನೆ ಮಾಡಿಸ್ತಿದ್ದೀರಿ.''
"ಇಲ್ಲಿ ಚಿಕ್ಕಮಗಳೂರಿನಲ್ಲಿ ಸಿಂಗಂ ಅಂತ ಬಿಂಬಿಸಿಕೊಳ್ಳುತ್ತಿದ್ದ. ಆದರೆ ಈಗ ತಮಿಳುನಾಡಿನಲ್ಲಿ ಅದೇ ಸಿಂಗಂನನ್ನು ನಾಲ್ಕನೇ ಸ್ಥಾನಕ್ಕೆ ಕಳ್ಸಿದ್ದಾರೆ. ಮೇಕೆದಾಟು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ,'' ಎಂದು ಗಂಭೀರ ಆರೋಪ ಮಾಡಿದರು.

ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ವಿಚಾರದಲ್ಲೂ ಸಂಸದ ಪ್ರತಾಪ್ ಸಿಂಹ ಸುಳ್ಳು ಹೇಳುತ್ತಿದ್ದಾರೆ. ಈ ಕಾಮಗಾರಿಯಲ್ಲಿ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪನವರ ಪಾತ್ರವಿದೆ. ಮಹದೇವಪ್ಪನವರ ಪಾತ್ರ ಇಲ್ಲದಿದ್ದರೆ ನಾನು ಪ್ರತಾಪ್ ಸಿಂಹಗೆ ಶರಣಾಗುತ್ತೇನೆ. ಸ್ಮಾರ್ಟ್ ಸಿಟಿ ಯೋಜನೆ ವಿಚಾರದಲ್ಲೂ ಪ್ರತಾಪ್ ಸಿಂಹ ಸುಳ್ಳು ಹೇಳಿಕೊಂಡು ತಿರುಗಾಡ್ತಿದ್ದಾರೆ ಎಂದ ಅವರು, ಯಾರ ಕಿವಿಗೆ ಹೂವು ಮುಡಿಸಲು ಹೊರಟಿದ್ದೀರಾ? ನಿಮ್ಮ ಕೊಡುಗೆ ಶೂನ್ಯ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವ್ಯಂಗ್ಯವಾಡಿದರು.
ಅಣ್ಣಾಮಲೈ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಆಗಸ್ಟ್ 5ರಂದು ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಕರ್ನಾಟಕ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದೆ. ನಾವು ಒಂದೇ ಪಕ್ಷದಲ್ಲಿದ್ದರೂ ಈ ನಿರ್ಧಾರ ವಿರೋಧಿಸುತ್ತೇವೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ""ಯಾರೇ ಅಡ್ಡಿ ಬಂದರೂ, ಉಪವಾಸ, ಊಟ ಮಾಡಿದರೂ ಮೇಕೆದಾಟು ಅಣೆಕಟ್ಟು ಯೋಜನೆ ನಿಲ್ಲುವುದಿಲ್ಲ ಎಂದು ಸೂಚ್ಯವಾಗಿ ಹೇಳಿದ್ದಾರೆ.
ಕಾವೇರಿ ನದಿಗೆ ರಾಮನಗರ ಜಿಲ್ಲೆಯ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ರಾಜಕಾರಣಿಗಳು ವಿರೋಧಿಸುತ್ತಿದ್ದಾರೆ.
ಕುಡಿಯುವ ನೀರಿನ ಉದ್ದೇಶದ ಮೇಕೆದಾಟು ಯೋಜನೆಯನ್ನು ನಿಲ್ಲಿಸಲು ರಾಜ್ಯಕ್ಕೆ ಯಾವುದೇ ಸಕಾರಣಗಳಿಲ್ಲ. ಯೋಜನೆ ಜಾರಿಗೆ ಅಗತ್ಯವಿರುವ ಎಲ್ಲಾ ಒಪ್ಪಿಗೆಯನ್ನು ಕೇಂದ್ರ ಸರ್ಕಾರದಿಂದ ಪಡೆಯಲು ಶಕ್ತಿ ಮೀರಿ ಪ್ರಯತ್ನಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.












Click it and Unblock the Notifications