ಶಿಕಾರಿಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲು?
ಮೈಸೂರು, ಆ.22 : ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಗಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬಿಕೆ ಇಲ್ಲ. ಶಿಕಾರಿಪುರದಲ್ಲಿ ಯಾವ ಪಕ್ಷವಾದರೂ ಗೆಲ್ಲಬಹುದು. ಆದರೆ, ಚಿಕ್ಕೋಡಿ, ಬಳ್ಳಾರಿ ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಡಿ.ಕೆ.ಶಿವಕುಮಾರ್ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿ ಅವರ ಪ್ರಭಾವದಿಂದ ಗೆದ್ದುಬರುತ್ತೇವೆ ಎಂದು ಹೇಳಿದರು.

ಶಿಕಾರಿಪುರದಲ್ಲಿ ಯಾವ ಪಕ್ಷದ ಅಭ್ಯರ್ಥಿಯಾದರೂ ಗೆಲ್ಲಬಹುದು ಎಂದು ಹೇಳಿದ ಸಿಎಂ, ನಮಗೆ ಜೆಡಿಎಸ್ ಅಭ್ಯರ್ಥಿ ಬೆಂಬಲ ನೀಡಿದ್ದಾರೆ. ಯಾವ ಪಕ್ಷದ ಅಭ್ಯರ್ಥಿ ಗೆದ್ದರೂ ಗೆಲುವಿನ ಅಂತರ ತುಂಬಾ ಕಡಿಮೆ ಇರುತ್ತದೆ ಎಂದು ಸಿದ್ದರಾಮಯ್ಯ ವಿಶ್ಲೇಷಿಸಿದರು. [ಉಪ ಚುನಾವಣೆಯಲ್ಲಿ ಶೇ 76ರಷ್ಟು ಮತದಾನ]
ಯಾವ ಸಚಿವರನ್ನು ಕೈ ಬಿಡಲ್ಲ : ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಮಾತ್ರ ತುಂಬಲಾಗುತ್ತದೆ. ಯಾವ ಸಚಿವರನ್ನು ಸಂಪುಟದಿಂದ ಕೈ ಬಿಡುವುದಿಲ್ಲ. ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಸಂಪುಟ ವಿಸ್ತರಣೆ ಬಗ್ಗೆ ಗಮನಹರಿಸಲಾಗುತ್ತದೆ ಎಂದರು.
ಜೆಡಿಎಸ್ ಶಾಸಕರು ಬಂದಿಲ್ಲ : ಜೆಡಿಎಸ್ ಪಕ್ಷದ ಹಲವು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತನ್ನು ತಳ್ಳಿಹಾಕಿದ ಸಿದ್ದರಾಮಯ್ಯ ಅವರು, ಜೆಡಿಎಸ್ ಪಕ್ಷದ ಯಾವ ಶಾಸಕರು ಕಾಂಗ್ರೆಸ್ ಸೇರುತ್ತೇನೆ ಎಂದು ನನ್ನ ಬಳಿ ಬಂದಿಲ್ಲ. ಯಾವ ಶಾಸಕರ ಜೊತೆ ನಾನು ಮಾತುಕತೆ ನಡೆಸಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ಅಂದಹಾಗೆ ಮೂರು ಕ್ಷೇತ್ರಗಳ ಚುನಾವಣಾ ಫಲಿತಾಂಶ ಆ.25ರ ಸೋಮವಾರ ಪ್ರಕಟಗೊಳ್ಳಲಿದೆ. ಫಲಿತಾಂಶದ ತಾಜಾ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ನೋಡುತ್ತಿರಿ.












Click it and Unblock the Notifications