Somanna vs Siddaramaiah: ಸೋಮಣ್ಣ ಕಾರಿಗೆ ಮುತ್ತಿಗೆ ಹಾಕಿ ಸಿದ್ದು ಪರ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳ ಗೆಲುವಿಗೆ ಆಯಾ ಪಕ್ಷದ ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಭಾರೀ ಕುತೂಹಲ ಮೂಡಿಸಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಕಾರಿಗೆ ಮುತ್ತಿಗೆ ಹಾಕಿ, ಮಾಜಿ ಸಿಎಂ ಸಿದ್ದರಾಮಯ್ಯ ಪರ ಘೋಷಣೆ ಕೂಗಿದ್ದಾರೆ.

ಭಾನುವಾರ, ಏಪ್ರಿಲ್ 23ರಂದು ವರುಣಾದ ಭೂಗತಹಳ್ಳಿಯಲ್ಲಿ ವಿ ಸೋಮಣ್ಣ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದಲ್ಲದೇ, ಅವರ ಎದುರೇ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಸ್ಪರ್ಧಿಸುತ್ತಿದ್ದು, ಅವರ ಎದುರಾಳಿಯಾಗಿ ವಿ. ಸೋಮಣ್ಣ ಅವರು ಅಖಾಡಕ್ಕೆ ಇಳಿದಿದ್ದಾರೆ. ಇದರಿಂದ ಕೋಪಗೊಂಡಿರುವ ಸಿದ್ದರಾಮಯ್ಯ ಬೆಂಬಲಿಗರು ವಿ. ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ.
ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರದಲ್ಲಿ ಒಂದಾಗಿರುವ ವರುಣಾದ ಭೂಗತಹಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡುತ್ತಿದ್ದ ಬಿಜೆಪಿ ವಿ. ಸೋಮಣ್ಣ ಕಾರಿಗೆ ಸಿದ್ದರಾಮಯ್ಯ ಬೆಂಬಲಿಗರ ಘೇರಾವ್ ಹಾಕಿದರು. ಈ ವೇಳೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ವಿ. ಸೋಮಣ್ಣ ಹಾಗೂ ಸಿದ್ದರಾಮಯ್ಯ ಬೆಂಬಲಿಗರು ತಮ್ಮ ತಮ್ಮ ನಾಯಕರ ಪರ ಜೈಕಾರ ಕೂಗಿದಾಗ ವಾಗ್ವಾದ ಉಂಟಾಗಿದೆ. ನಂತರ ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ. ಸುಮಾರು ಐದಿನೈದು ನಿಮಿಷಗಳ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣವಿತ್ತು.

ವರುಣಾದಲ್ಲಿ ವಿ. ಸೋಮಣ್ಣ ಭರ್ಜರಿ ಪ್ರಚಾರ
ವರುಣಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ವಿ. ಸೋಮಣ್ಣ ಭಾನುವಾರ ಬೆಳಿಗ್ಗೆ ಭೂಗತಹಳ್ಳಿ ಹಾಗೂ ವಾಜಮಂಗಲದ ಮತದಾರರನ್ನು ಭೇಟಿ ಮಾಡಿ ಬಸವೇಶ್ವರ ಪುತ್ಥಳಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆಯನ್ನು ಮಾಡಿ ಮತಯಾಚನೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವರುಣಾ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವನೂರು ಪ್ರತಾಪ್ ಹಾಗೂ ಶರತ್ ಉಪಸ್ಥಿತರಿದ್ದರು.
ಚುನಾವಣೆಗಾಗಿ ಮತಯಾಚನೆಯ ಸಂದರ್ಭದಲ್ಲಿ ಗ್ರಾಮಸ್ಥರು ಪಕ್ಷಾತೀತವಾಗಿ ಅಪಾರ ಸಂಖ್ಯೆಯಲ್ಲಿ ಸೇರುವ ಮೂಲಕ ವಿ. ಸೋಮಣ್ಣ ಪರ ಘೋಷಣೆ ಕೂಗಿದರು.












Click it and Unblock the Notifications