ಕೊರೊನಾ ಲಾಕ್ ಡೌನ್: ಸರಳವಾಗಿ ಬಸವ ಜಯಂತಿ ಆಚರಣೆ
ಮೈಸೂರು, ಏಪ್ರಿಲ್ 26: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ ಇರುವುದರಿಂದ ಬಸವ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.
ಮೈಸೂರು ಜಿಲ್ಲಾಡಳಿತದಿಂದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿಯನ್ನು ಆಯೋಜನೆ ಮಾಡಲಾಗಿತ್ತು. ಬಸವೇಶ್ವರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಬಸವ ಜಯಂತಿ; ಸಮಾಜ ಸುಧಾಕರಣೆಯ ಆಶಯ ಪಾಲಿಸೋಣ
ಲಾಕ್ಡೌನ್ ನಿಯಮ ಸಡಿಲಿಕೆ ವಿಚಾರದಲ್ಲಿ ಇನ್ನೂ ತೀರ್ಮಾನ ಆಗಿಲ್ಲ, ಮೈಸೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಲಾಕ್ಡೌನ್ ಸಡಿಲಿಕೆ ಮಾಡುವ ಬಗ್ಗೆ ಇನ್ನಷ್ಟೇ ಚರ್ಚೆ ಆಗಬೇಕಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.
ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಾಗುತ್ತಿಲ್ಲ ಎಂದು ಶಾಸಕರು ಹೇಳಿದ್ದರು, ಆ ಕಾರಣಕ್ಕಾಗಿ ಮಾರುಕಟ್ಟೆ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ ಎಂದರು.
ಏಕಾಏಕಿ ಬೇರೆ ಕಡೆ ಹೋಗಿ ವ್ಯಾಪಾರ ಮಾಡಿ ಅಂತ ಹೇಳಲು ಸಾಧ್ಯವಿಲ್ಲ, ಸ್ಥಳಾಂತರ ಆಗುವ ಜಾಗದಲ್ಲಿ ಮೂಲಸೌಕರ್ಯ ಒದಗಿಸಬೇಕೆಂದು ಮೈಸೂರಿನಲ್ಲಿ ಎಸ್.ಟಿ ಸೋಮಶೇಖರ್ ಹೇಳಿದರು.
ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಎಚ್.ವಿಶ್ವನಾಥ್, ಎಂ.ಕೆ.ಸೋಮಶೇಖರ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.