ಹೆಚ್ಚಿದ ಕೊರೊನಾತಂಕ: ಮೈಸೂರಿಗೆ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಸಿ.ಬಿ ರಿಷ್ಯಂತ್
ಮೈಸೂರು, ಮಾರ್ಚ್ 18: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆತಂಕ ಶುರುವಾಗಿರುವ ಬೆನ್ನಲ್ಲೇ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.
ಈ ನಡುವೆ ಹೊರ ರಾಜ್ಯದಿಂದ ಬರುವ ಪ್ರವಾಸಿಗರ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕೇರಳದಿಂದ ಮೈಸೂರಿಗೆ ಆಗಮಿಸುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರ ಸಿ.ಬಿ ರಿಷ್ಯಂತ್ ತಿಳಿಸಿದರು.
ಕೊಡಗಿನಲ್ಲಿ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ""ಕೇರಳದಲ್ಲಿ ರೂಪಾಂತರಗೊಂಡಿರುವ ಕೊರೊನಾ ಪತ್ತೆಯಾಗಿರುವುದು ಹಾಗೂ ಕೊರೊನಾ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರಿಗರ ಸುರಕ್ಷತೆ ದೃಷ್ಟಿಯಿಂದ ಮೈಸೂರಿಗೆ ಬರುವ ಪ್ರವಾಸಿಗರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ'' ಎಂದರು.
""ಕೇರಳದಿಂದ ಮೈಸೂರಿಗೆ ಆಗಮಿಸುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಒಂದು ವೇಳೆ ಕೇರಳದಲ್ಲಿ ಟೆಸ್ಟ್ ಮಾಡಿಸಿಕೊಳ್ಳದಿದ್ದರೆ, ಸ್ಥಳದಲ್ಲಿಯೇ ರ್ಯಾಪಿಡ್ ಟೆಸ್ಟ್ ನಡೆಸಲಾಗುವುದು. ಕೊರೊನಾ ತಡೆಗೆ ಸಂಬಂಧಿಸಿದಂತೆ ವಯನಾಡ್ ಎಸ್ಪಿ ಅರವಿಂದ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಆರ್.ಟಿ-ಪಿಸಿಆರ್ ಪರೀಕ್ಷೆ ಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಲಾಗಿದೆ'' ಎಂದು ತಿಳಿಸಿದರು.
""ಅಲ್ಲದೇ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ ಮತ್ತು ಬೆಂಗಳೂರಿನಿಂದ ಬರುವವವರಿಗೆ ಯಾವುದೇ ನಿರ್ಬಂಧಗಳು ಇಲ್ಲ. ಮೈಸೂರಿಗೆ ಮಹಾರಾಷ್ಟ್ರದಿಂದ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆ ಇದೆ. ಮಹಾರಾಷ್ಟ್ರದಿಂದ ಬರುವ ಪ್ರವಾಸಿಗರಲ್ಲಿ ಸೋಂಕಿತರು ಇದ್ದಾರೆಯೇ ಎಂದು ಪತ್ತೆ ಹಚ್ಚುವ ಕಾರ್ಯ ಆಯಾ ಗಡಿ ಭಾಗದಲ್ಲಿ ನಡೆಯುತ್ತಿದೆ'' ಎಂದರು.