ಮೈಸೂರಿನಲ್ಲಿ ಮರಣ ಪ್ರಮಾಣ ಕಡಿಮೆ ಮಾಡಬೇಕು; ಡಾ. ಕೆ. ಸುಧಾಕರ್
ಮೈಸೂರು, ಏಪ್ರಿಲ್ 22; "ಮೈಸೂರಿನಲ್ಲಿ ಮರಣ ಪ್ರಮಾಣ ಶೇ 4ರಷ್ಟಿದೆ. ಬಹುಪಾಲು ಮರಣಗಳು ರೋಗಿಗಳು ತಡವಾಗಿ ಆಸ್ಪತ್ರೆಗೆ ಬಂದಿರುವುದರಿಂದ ಸಂಭವಿಸಿದೆ. ಹೃದಯ ಸಮಸ್ಯೆ ಮೊದಲಾದ ಬೇರೆ ಸಮಸ್ಯೆಗಳಿಂದಲೂ ಸಾವಾಗಿದೆ. ಮೈಸೂರಿನಲ್ಲಿ ಆರೋಗ್ಯ ಸೌಲಭ್ಯಗಳು ಉತ್ತಮವಾಗಿದ್ದು, ಮರಣ ಪ್ರಮಾಣ ನಿಯಂತ್ರಿಸಬೇಕಿದೆ" ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಗುರುವಾರ ಸಚಿವರು ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿ, "ರಾಜ್ಯ ಸರ್ಕಾರ ಅತ್ಯಂತ ಸೂಕ್ತವಾದ ಕೋವಿಡ್ ಮಾರ್ಗಸೂಚಿ ರೂಪಿಸಿದೆ. ಆದರೆ ಇದು ಏಕಾಏಕಿಯಾದ ನಿರ್ಧಾರವಲ್ಲ. ನಿಯಮಪಾಲನೆಗೆ ಜನರು ಸಹಕರಿಸಬೇಕು" ಎಂದು ಮನವಿ ಮಾಡಿದರು.
"ಸರ್ಕಾರಕ್ಕೆ ಜೀವನಕ್ಕಿಂತ ಜೀವ ಮುಖ್ಯ ಎಂಬ ಚಿಂತನೆ ಇದೆ. ಕೂಲಿ ಕಾರ್ಮಿಕರು, ಕೃಷಿ ಚಟುವಟಿಕೆ, ಕೈಗಾರಿಕೆ, ಕಚೇರಿಯಲ್ಲಿ ಕೆಲಸ ಮಾಡುವವರಿಗೆ ತೊಂದರೆ ಮಾಡಿಲ್ಲ. ಗುಂಪುಗೂಡುವುದನ್ನು ಹಾಗೂ ಸಾಂಕ್ರಾಮಿಕ ಹರಡಲು ಕಾರಣವಾಗುವ ಚಟುವಟಿಕೆಗಳನ್ನು ಮಾತ್ರ ನಿರ್ಬಂಧಿಸಲಾಗಿದೆ" ಎಂದು ಸ್ಪಷ್ಟಪಡಿಸಿದರು.

"ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಿದೆ. ಪರೀಕ್ಷೆ, ಸಂಪರ್ಕ ಪತ್ತೆ, ಲಸಿಕೆ ಅಭಿಯಾನ ಉತ್ತಮವಾಗಿ ನಡೆಯುತ್ತಿದೆ. ಈವರೆಗೆ 7 ಲಕ್ಷ ಜನರಿಗೆ ಲಸಿಕೆ ನೀಡಿದ್ದು, ಇನ್ನೂ ಹೆಚ್ಚಿನವರಿಗೆ ನೀಡಲು ಸೂಚಿಸಲಾಗಿದೆ" ಎಂದು ಸಚಿವರು ತಿಳಿಸಿದರು.
"ಔಷಧ ಲಭ್ಯತೆ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ, ವಾರ್ ರೂಮ್ ನಿಂದ ಹಾಸಿಗೆ ಲಭ್ಯತೆ ಬಗ್ಗೆ ರಿಯಲ್ ಟೈಮ್ ಮಾಹಿತಿ, ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಕೋವಿಡ್ ಅರಿವು ಮೂಡಿಸಲು ತೀರ್ಮಾನಿಸಲಾಗಿದೆ" ಎಂದು ಸಚಿವರು ವಿವರಿಸಿದರು.
"ಮೈಸೂರು ಜಿಲ್ಲೆಯಲ್ಲಿ ಒಂದೆರಡು ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ನಡಿ ಇರಲಿಲ್ಲ. ಈಗ ಮತ್ತೆ ಆಸ್ಪತ್ರೆಗಳು ನೋಂದಾಯಿಸಿಕೊಂಡಿವೆ. ಇನ್ನು ಶೇ.50 ರಷ್ಟು ಹಾಸಿಗೆ ಕೋವಿಡ್ಗೆ ಮೀಸಲಿಡಲಾಗುತ್ತದೆ. ಆಸ್ಪತ್ರೆಗಳು ಕೊಡದಿದ್ದರೆ ಸರ್ಕಾರವೇ ಪಡೆಯಲಿದೆ" ಎಂದರು.












Click it and Unblock the Notifications