ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ: ಕೈ ನಾಯಕರ ಜೊತೆ ಆರೋಪಿಗಳ ನಂಟು ಅಂಗೈ ಹುಣ್ಣಿನಷ್ಟೇ ಸ್ಪಷ್ಟ-ಸಿ.ಟಿ ರವಿ
ಮೈಸೂರು, ಜುಲೈ 12: ತಿ.ನರಸೀಪುರ ಹಿಂದೂ ಕಾರ್ಯಕರ್ತ ಹಾಗೂ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಇದೊಂದು ಪೂರ್ವಯೋಜಿತ ಕೃತ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆರೋಪಿಸಿದ್ದಾರೆ.
ತಿ.ನರಸೀಪುರಕ್ಕೆ ಭೇಟಿ ನೀಡಿದ ಸಿ.ಟಿ ರವಿ ಕೊಲೆಯಾದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕುಟುಂಬ ಹಾಗೂ ಸ್ಥಳೀಯರೊಂದಿಗೆ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳಿಗೆ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ಇರುವುದು ಅಂಗೈ ಹುಣ್ಣಿನಷ್ಟೇ ಸ್ಪಷ್ಟ. ಆರೋಪಿಗಳು ಚುನಾವಣೆ ವೇಳೆ ಕಾಂಗ್ರೆಸ್ ಪರ ಕೆಲಸ ಮಾಡಿದವರು ಎನ್ನುವುದು ಕೂಡ ಸ್ಪಷ್ಟ. ಹೀಗಾಗಿ ಪ್ರಕರಣ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ವೇಣುಗೋಪಾಲ್ ಮರಣೋತ್ತರ ಪರೀಕ್ಷೆ ವರದಿ ಪ್ರಕಾರ ಆಯುಧಗಳಿಂದ 30ಕ್ಕೂ ಹೆಚ್ಚು ಕಡೆ ಚುಚ್ಚಿದ್ದಾರೆ. ಆತ ಹನುಮ ಜಯಂತಿ ನೇತೃತ್ವ ವಹಿಸಿದ್ದ ಎಂಬ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಷಡ್ಯಂತ್ರ ಕಂಡು ಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ 16-17 ಜನರ ಮೇಲೆ ಹಲ್ಲೆ ಹಾಗೂ ಹತ್ಯೆ ಘಟನೆಗಳು ನಡೆದಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಈ ರಾಜ್ಯವನ್ನು ಅರಾಜಕತೆಗೆ ಕೊಂಡೊಯ್ಯುತ್ತಿದೆ. ಹಿಂದೂ ಚಟುವಟಿಕೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರನ್ನು ಮುಗಿಸುವ, ಭಯ ಹುಟ್ಟಿಸುವ ಮಾನಸಿಕತೆ ಸೃಷ್ಟಿಯಾಗಿದೆ ಎಂದು ಸಿ.ಟಿ ಗಂಭೀರ ಆರೋಪ ಮಾಡಿದರು.
ವೇಣುಗೋಪಾಲ್ ಕೊಲೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬನಾದ ಹ್ಯಾರಿಸ್ಗೆ ಕ್ಲೀನ್ ಚಿಟ್ ನೀಡುವ ಪ್ರಯತ್ನ ನಡೆದಿದೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹ್ಯಾರಿಸ್ ಪಾತ್ರ ಇಲ್ಲವೆಂಬ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಹ್ಯಾರಿಸ್ ಸುಮ್ಮನೆ ಇದ್ದ ಎಂಬ ಸುದ್ದಿ ಪ್ಲಾಂಟ್ ಮಾಡಲಾಗುತ್ತಿದೆ. ಪ್ರತ್ಯಕ್ಷ ಸಾಕ್ಷಿಗಳ ಪ್ರಕಾರ ಆತನ ಪಾತ್ರ ಬಹಳ ಇದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರತ್ಯಕ್ಷ ಸಾಕ್ಷಿನಾ? ನೀವು ಹೇಗೆ ಕ್ಲೀನ್ ಚಿಟ್ ಕೊಡುತ್ತೀರಿ ಎಂದು ಪ್ರಶ್ನಿಸಿದರು.

ಇನ್ನೊಂದೆಡೆ ಆರೋಪಿಗಳಲ್ಲಿ ಬಿಜೆಪಿ ಕಾರ್ಯಕರ್ತನು ಇದ್ದ ಎಂಬ ಸುದ್ದಿಯನ್ನು ಪ್ಲಾಂಟ್ ಮಾಡಲಾಗುತ್ತಿದೆ. ಆದರೆ ಅವರ ಅಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು ಎಂಬುದನ್ನು ಮರೆಮಾಚಲಾಗುತ್ತಿದೆ. ಯಾರು ಕೊಲೆ ಮಾಡಿದ್ದರೂ ಅವರನ್ನು ಬಿಡಬಾರದು. ಆತ ಡ್ರಗ್ಸ್ ಸರಬರಾಜು ಮಾಡುವ ಕೇಸ್ನಲ್ಲೂ ಇದ್ದ ಎಂಬ ಮಾಹಿತಿ ಇದೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಸಿ.ಟಿ ರವಿ ಒತ್ತಾಯಿಸಿದರು.












Click it and Unblock the Notifications