ಮೈಸೂರು ದಸರಾ; ಇನ್ನೆರಡು ದಿನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಪಟ್ಟಿ ಪ್ರಕಟ
ಮೈಸೂರು, ಅಕ್ಟೋಬರ್ 2: ಉಸ್ತುವಾರಿ ಸಚಿವನಾಗಿ ಮೊದಲ ಬಾರಿಗೆ ಮೈಸೂರು ದಸರಾ ಆಚರಣೆಯಲ್ಲಿ ಭಾಗಿಯಾಗುತ್ತಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ಕೋವಿಡ್ 19ರ ಈ ಸಂದರ್ಭದಲ್ಲಿ ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಲೇಬೇಕು. ಇಲ್ಲದಿದ್ದರೆ ದಂಡ ಹಾಕುವುದು ಅನಿವಾರ್ಯವಾಗಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.
ದಸರಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಹಾಗೂ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ 2 ಸಾವಿರ ಮಂದಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಕೇಳಿಕೊಂಡಿದ್ದೇವೆ. ಅಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಜಿಲ್ಲಾಡಳಿತ ಸೇರಿದಂತೆ ಸರ್ಕಾರ ಕೋವಿಡ್ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.
ಮೈಸೂರು ದಸರಾ: ಅರಮನೆಗೆ ಆಗಮಿಸಿದ ಗಜಪಡೆಗೆ ಸಂಭ್ರಮದ ಸ್ವಾಗತ!
ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಇನ್ನೆರಡು ದಿನದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದೂ ಹೇಳಿದರು.
ಜಿಲ್ಲಾಧಿಕಾರಿ ಶರತ್ ಅವರ ವರ್ಗಾವಣೆಗೆ ಸಂಬಂಧಪಟ್ಟಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ನನ್ನ ಗಮನಕ್ಕೆ ತಂದುಕೊಂಡೇ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ. ಶರತ್ ಅವರು ಸಿಎಟಿ ಮೊರೆ ಹೋಗಿರುವ ವಿಚಾರವಾಗಿ ಮನವೊಲಿಸುವ ಪ್ರಯತ್ನವನ್ನು ಮಾಡಲಾಗುವುದು ಎಂದರು.