ಪಿಎಂ ಸಂಚರಿಸುವ ರಸ್ತೆಗಳಲ್ಲಿ ದಸರಾ ಮಾದರಿ ದೀಪಾಲಂಕಾರ: ಸಚಿವ ಸೋಮಶೇಖರ್
ಮೈಸೂರು, ಜೂ. 15: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಂಗುವ ಹೋಟೆಲ್, ಸಂಚರಿಸುವ ರಸ್ತೆಗಳಲ್ಲಿ ಕೈಗೊಳ್ಳಬೇಕಿರುವ ಭದ್ರತೆ, ರಸ್ತೆಗಳ ಸ್ಥಿತಿಗತಿಗಳನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ವೀಕ್ಷಣೆ ಮಾಡಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಧಾನಮಂತ್ರಿಗಳು ಮೈಸೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಪಾದಚಾರಿ ಮಾರ್ಗಗಳ ದುರಸ್ತಿ, ರಸ್ತೆಗಳ ಡಾಂಬರೀಕರಣಕ್ಕೆ 15 ಕೋಟಿ ರೂ. ವೆಚ್ಚವಾಗಲಿದೆ ಎಂದು ಪಾಲಿಕೆ ಅಂದಾಜು ಮಾಡಲಾಗಿದ್ದು, 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ವಿಶ್ವಯೋಗ ದಿನ; ಮೈಸೂರು ಅರಮನೆ ಪ್ರವೇಶಿಸಲು ಕೋವಿಡ್ ಲಸಿಕೆ ಕಡ್ಡಾಯ
ವಾಹನಗಳ ಪಾರ್ಕಿಂಗ್ ಸ್ಥಳಗಳ ಗುರುತಿಸುವಿಕೆ
15 ರಸ್ತೆಗಳ ಡಾಂಬರೀಕರಣ, ಪಾದಚಾರಿ ಮಾರ್ಗ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಮಂಗಳವಾರ ಮಳೆಯಾದ ಹಿನ್ನೆಲೆಯಲ್ಲಿ ಎರಡು ರಸ್ತೆಗಳ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆ ನಿಂತ ಕೂಡಲೇ ಆ ರಸ್ತೆಗಳ ಕಾಮಗಾರಿ ಮುಕ್ತಾಯವಾಗಲಿದೆ ಎಂದು ಹೇಳಿದರು. ಬೀದಿದೀಪಗಳ ವ್ಯವಸ್ಥೆ, ದಸರಾ ವೇಳೆ ದೀಪಾಲಂಕರ ಮಾಡುವಂತೆ ಪ್ರಧಾನಮಂತ್ರಿಗಳು ಭೇಟಿ ನೀಡುವ ಅರಮನೆ, ಅವರು ಸಂಚರಿಸುವ ರಸ್ತೆಗಳಲ್ಲಿ ದೀಪಾಲಂಕಾರ ಮಾಡಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಾಹನಗಳ ಪಾರ್ಕಿಂಗ್ ಸ್ಥಳಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಗುರುತಿಸಲಿದ್ದಾರೆ ಎಂದರು. ಇದೇ ವೇಳೆ ಸಂಸದರಾದ ಪ್ರತಾಪ್ ಸಿಂಹ, ಶಾಸಕರುಗಳಾದ ನಾಗೇಂದ್ರ, ರಾಮದಾಸ್, ಮೇಯರ್ ಸುನಂದಾ ಪಾಲನೇತ್ರಾ ಸೇರಿದಂತೆ ಹಲವು ಅಧಿಕಾರಿಗಳು ಜೊತೆಯಲ್ಲಿದ್ದರು.
ಕಲಾವಿದನ ಕಮಾಲ್! ಚಹಾದಲ್ಲಿ ಅರಳಿದ 'ಚಹಾವಾಲ' ಮೋದಿ
ಸಂವಾದ ಕಾರ್ಯಕ್ರಮ ವೀಕ್ಷಿಸಲು 60 ಸಾವಿರ ಜನರಿಗೆ ವ್ಯವಸ್ಥೆ
ಕಳೆದ ಮೂರು ವರ್ಷಗಳಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ. ಎಷ್ಟು ಜನರೊಂದಿಗೆ ಸಂವಾದ ನಡೆಸಬೇಕು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ನೀಡುವ ನಿರ್ದೇಶನದಂತೆ ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಂವಾದ ಕಾರ್ಯಕ್ರಮ ವೀಕ್ಷಿಸಲು 60 ಸಾವಿರ ಜನರಿಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಕಡೆ 30 ಸಾವಿರ, ಎರಡು ಕಡೆಗಳಲ್ಲಿ ತಲಾ 15 ಸಾವಿರ ಜನರು ಕಾರ್ಯಕ್ರಮ ವೀಕ್ಷಿಸಬಹುದಾಗಿದೆ ಎಂದರು.
ಪ್ರಧಾನಮಂತ್ರಿ ಜೊತೆ ಯಾರು ವೇದಿಕೆ ಹಂಚಿಕೊಳ್ಳಬೇಕು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಲಿದ್ದು ಅದರಂತೆ ಪಾಲನೆ ಮಾಡಲಾಗುವುದು. ಸುತ್ತೂರು ಮಠ, ಚಾಮುಂಡಿ ಬೆಟ್ಟ ವೀಕ್ಷಣೆ ಮಾಡುವಂತೆ ಪ್ರಧಾನಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮೋದಿ ಆಗಮನ ಹಿನ್ನೆಲೆ: ಸ್ಥಳ ಪರಿಶೀಲಿಸಿದ ಆಯುಷ್
ಈ ವರ್ಷ ಮೈಸೂರಿನಲ್ಲಿ ಆಚರಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಮೋದಿಯವರು ಆಗಮಿಸುತ್ತಿದ್ದು, ಇದು ತುಂಬಾ ಸಂತೋಷದ ವಿಷಯವಾಗಿದೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಆಯುಷ್ ಮಂತ್ರಾಲಯದ ನಿರ್ದೇಶಕರಾದ ವಿಕ್ರಂ ಸಿಂಗ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೈಸೂರು ಸಾಂಸ್ಕೃತಿಕ ಪರಂಪರೆಗೆ ಹೆಸರುವಾಸಿಯಾಗಿದೆ. ಯೋಗಕ್ಕೆ ಮೈಸೂರು ಸಾಕಷ್ಟು ಕೊಡುಗೆ ನೀಡಿದೆ. ಸಾಕಷ್ಟು ಯೋಗ ತಜ್ಣರು ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದೇಶಿ ಪ್ರಜೆಗಳು ಮೈಸೂರಿಗೆ ಆಗಮಿಸಿ ಯೋಗ ಕಲಿಯುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದ ಪ್ರಧಾನಿಯವರು ಯೋಗ ದಿನಾಚರಣೆಗೆ ಮೈಸೂರಿಗೆ ಆಗಮಿಸುತ್ತಿದ್ದು ಇದು ಮೈಸೂರಿನ ಗರಿಮೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.
ಯೋಗ ದಿನಾಚರಣೆ ಕಾರ್ಯಕ್ರಮ ನೇರ ಪ್ರಸಾರ
ಮೈಸೂರಿನ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಭಾರತ ಸರ್ಕಾರ ಹಾಗೂ ಆಯುಷ್ ಮಂತ್ರಾಲಯದಿಂದ ಆಯೋಜಿಸಲಾಗುತ್ತಿದೆ. ಯೋಗ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯವಶ್ಯಕ. ಯೋಗವನ್ನು ಸಾಮರಸ್ಯಕ್ಕಾಗಿ ಹಾಗೂ ಮನಃಶಾಂತಿಗಾಗಿ ಮಾಡಬೇಕು. ಮೈಸೂರಿನಲ್ಲಿ ಜೂನ್ 20 ಮತ್ತು 21 ರಂದು ಯೋಗ ವಸ್ತುಪ್ರದರ್ಶನವನ್ನು ಸಹ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಏರ್ಪಡಿಸಲಾಗುತ್ತದೆ. ಈ ವಸ್ತು ಪ್ರದರ್ಶನದಲ್ಲಿ ಡಿಜಿಟಲ್ ಎಕ್ಸಿಬಿಷನ್ ಹಾಗೂ ಸ್ಟಾಲ್ ಎಕ್ಸಿಬಿಷನ್ ಎಂದು ಎರಡು ಭಾಗಗಳಲ್ಲಿ ಇರುತ್ತದೆ ಎಂದು ಮಾಹಿತಿ ನೀಡಿದರು.
ಕರ್ನಾಟಕದ 75 ಸ್ಥಳಗಳಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಯೋಗ ದಿನಾಚರಣೆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ ಎಂದು ತಿಳಿಸಿದರು.ಆಗತ್ಯ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ಸಭೆಯ ನಂತರ ಕೇಂದ್ರ ಆಯುಷ್ ಇಲಾಖೆಯ ಅಧಿಕಾರಿಗಳ ತಂಡವು ಅರಮನೆ ಆವರಣಕ್ಕೆ ಭೇಟಿ ನೀಡಿ ಆಗತ್ಯ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿತು.