ಕೊರೊನಾ ನಿಯಂತ್ರಣ, ದಸರಾ ಮಹೋತ್ಸವ ಆದ್ಯತೆಯ ಕೆಲಸ: ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಮೈಸೂರು, ಸೆಪ್ಟೆಂಬರ್ 29: ಬೆಂಗಳೂರು ನಂತರ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಹೀಗಾಗಿ ಮೈಸೂರಲ್ಲಿ ಕೊರೊನಾ ಟೆಸ್ಟಿಂಗ್ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಪರೀಕ್ಷೆ ಪ್ರಮಾಣ ಹೆಚ್ಚಿಸುವ ಅಗತ್ಯವಿದೆ ಎಂದು ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.
ಇಂದು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿಣಿ ಸಿಂಧೂರಿ ಅವರು, ""ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದು ಅಧಿಕಾರ ಸ್ವೀಕಾರ ಮಾಡಿದ್ದೇನೆ. ನಮ್ಮ ಮುಂದೆ ಎರಡು ವಿಚಾರ ಗಂಭೀರವಾಗಿವೆ. ಮೊದಲಿಗೆ ಕೊರೊನಾ ವೈರಸ್ ನಿಯಂತ್ರಣ ಹಾಗೂ ದಸರಾ ಮಹೋತ್ಸವ. ಇದಕ್ಕೆ ಜನರ ಸಹಕಾರ ಅಗತ್ಯವಾಗಿದ್ದು, ಕೊರೊನಾ ಲಕ್ಷಣ ಕಂಡುಬಂದಲ್ಲಿ ತಕ್ಷಣವೇ ಟೆಸ್ಟಿಂಗ್ ಮಾಡಿಸಿಕೊಳ್ಳಿ'' ಎಂದು ಮನವಿ ಮಾಡಿಕೊಂಡರು.
ಇದೇ ಮೊದಲ ಬಾರಿಗೆ ದಸರಾ ಉಸ್ತುವಾರಿ
ದಸರಾಗೆ ಸಿದ್ಧತೆ ಈಗಾಗಲೇ ಆರಂಭವಾಗಿದ್ದು, ನಾನು ಇದೇ ಮೊದಲ ಬಾರಿಗೆ ದಸರಾ ಉಸ್ತುವಾರಿ ತೆಗೆದುಕೊಳ್ಳುತ್ತಿದ್ದೇನೆ. ಈ ಹಿಂದೆ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ನಡೆದಾಗ ನಾನು ಹಾಸನ ಜಿಲ್ಲಾಧಿಕಾರಿಯಾಗಿದ್ದೆ. ಅಲ್ಲಿ ಸುಮಾರು 20-25 ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. ಆದರೆ ಇದು ನಾಡಹಬ್ಬ, ಅದರಲ್ಲೂ ಕೋವಿಡ್ ಸಮಯದಲ್ಲಿ ತುಂಬಾ ಸೂಕ್ಷ್ಮವಾಗಿ ಕೆಲಸ ಮಾಡಬೇಕು. ಈ ಎರಡು ವಿಚಾರದ ಬಗ್ಗೆ ಹೆಚ್ಚು ಗಮನಹರಿಸಿ, ತುರ್ತಾಗಿ ಅಧಿಕಾರಿಗಳ ಸಭೆ ನಡೆಸುತ್ತೇನೆ. ಮೈಸೂರು ನನಗೆ ಹೊಸದಲ್ಲ, ಮೈಸೂರಿನಲ್ಲೇ ಆಡಳಿತ ತರಬೇತಿ ಪಡೆದಿದ್ದೇನೆ. ಆದರೆ ಇಲ್ಲಿನ ಜನರ ಸಹಕಾರ ತುಂಬಾ ಅಗತ್ಯವಾಗಿದೆ ಎಂದು ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.
ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ
ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ
ಒಂದು ತಿಂಗಳ ಹಿಂದಷ್ಟೆ ಬಿ.ಶರತ್ ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದರೆ ಕಳೆದ ಒಂದು ತಿಂಗಳಿನಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಯಾವುದೇ ಯೋಜನೆ ಹಾಕಿಕೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಸಾವಿನ ಸಂಖ್ಯೆ, ಪಾಸಿಟಿವ್ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದರೂ ತಾತ್ಕಾಲಿಕವಾಗಿ ಆಸ್ಪತ್ರೆ ಅಥವಾ ಕ್ವಾರಂಟೈನ್ ಕೇಂದ್ರ ತೆರೆಯಲು ಹಿಂದಿನ ಜಿಲ್ಲಾಧಿಕಾರಿ ಶರತ್ ಮುಂದಾಗಿರಲಿಲ್ಲ.
ಕೊರೊನಾ ಏರಿಕೆ ನಡುವೆ ಅತಿ ಸರಳ ದಸರಾ ಆಚರಣೆ ಸರ್ಕಾರಕ್ಕೆ ದೊಡ್ಡ ಸವಾಲು ಕೂಡ ಆಗಿದೆ. ಆದರೆ ಇದುವರೆಗೂ ಜಿಲ್ಲಾಧಿಕಾರಿ, ದಸರಾ ಆಚರಣೆ ಕುರಿತು ತಾವು ಹಾಕಿಕೊಂಡಿರುವ ಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸದ ಹಿನ್ನೆಲೆಯಲ್ಲಿ ಶರತ್ ಅವರ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ.
ತಿರುಪತಿಯಲ್ಲಿ ಕರ್ನಾಟಕ ಭವನ ಶಂಕುಸ್ಥಾಪನೆ
ಇನ್ನೊಂದು ಮೂಲದ ಪ್ರಕಾರ ರೋಹಿಣಿ ಸಿಂಧೂರಿ ಇತ್ತೀಚೆಗೆ ತಿರುಪತಿಯಲ್ಲಿ ಕರ್ನಾಟಕ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜಗನ್ ಮೋಹನ್ ರೆಡ್ಡಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶಕಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಪಾಲ್ಗೊಂಡಿದ್ದರು. ಈ ವೇಳೆ ಜಗನ್ ಅವರು ರೋಹಿಣಿ ಅವರನ್ನು ಮೈಸೂರಿನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡುವ ಕುರಿತು ಬಿಎಸ್ ವೈ ಜೊತೆ ಚರ್ಚೆ ನಡೆಸಿದ್ದರು ಎಂದು ಸುದ್ದಿ ಮೂಲಗಳಿಂದ ತಿಳಿದು ಬಂದಿದೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಚಾಮುಂಡಿ ಬೆಟ್ಟಕ್ಕೆ ಭೇಟಿ
ರೋಹಿಣಿ ಸಿಂಧೂರಿ ಅವರೇ ಈ ಯೋಜನೆಗೆ ಸಮರ್ಥ ಅಧಿಕಾರಿ
ಇದಕ್ಕೂ ಮುನ್ನ 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಜಗನ್ ಅವರು, ರೋಹಿಣಿ ಸಿಂಧೂರಿ ಅವರನ್ನು ಆಂಧ್ರಪ್ರದೇಶಕ್ಕೆ ವರ್ಗಾಯಿಸುವಂತೆ ಕೋರಿದ್ದರು. ಜಗನ್ ಅವರ ಮಹತ್ವಾಕಾಂಕ್ಷೆಯ ಸ್ಪಂದನ ಕಾರ್ಯಕ್ರಮದ ಉಸ್ತುವಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದರು. ಜನಸಾಮಾನ್ಯರ ಸಮಸ್ಯೆಗಳ ಕುರಿತ ಅರ್ಜಿಯನ್ನು ಆನ್ಲೈನ್ ಮೂಲಕ ಪಡೆದು ಕಾಲಮಿತಿಯೊಳಗೆ ಪರಿಹರಿಸುವುದು ಸ್ಪಂದನ ಕಾರ್ಯಕ್ರಮದ ಉದ್ದೇಶವಾಗಿದೆ. ಉದ್ದೇಶಿತ ಯೋಜನೆಗಾಗಿ ಬಹಳಷ್ಟು ಬಾರಿ ಅಧಿಕಾರಿಗಳು, ಸಚಿವ ಸಂಪುಟದೊಂದಿಗೆ ಚರ್ಚೆ ನಡೆಸಿದ್ದ ಜಗನ್ ಅವರು, ರೋಹಿಣಿ ಸಿಂಧೂರಿ ಅವರೇ ಈ ಯೋಜನೆಗೆ ಸಮರ್ಥ ಅಧಿಕಾರಿ ಎಂದು ಹೇಳಿದ್ದರು ಎಂದು ತಿಳಿದುಬಂದಿದೆ. ಅವಿಭಜಿತ ಆಂಧ್ರ ಮೂಲದ ರೋಹಿಣಿ ಸಿಂಧೂರಿ ಅವರು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಮುಗಿಸಿದ್ದ ಅವರು 2009ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.
Recommended Video
ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ
ನಿರ್ಗಮಿತ ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಅವರಿಂದ, ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರ ಸ್ವೀಕರಿಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ರೋಹಿಣಿ ಸಿಂಧೂರಿ ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವರ್ಗವು ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹೂಗುಚ್ಛ ನೀಡಿ ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು.
ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರ ಸ್ವೀಕಾರ ಮಾಡುವುದಕ್ಕೂ ಮೊದಲು ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.