ಕೊರೊನಾ ಪರೀಕ್ಷೆ; ಹೆಚ್ಚುವರಿ ಸಿಬ್ಬಂದಿ ನಿಯೋಜನೆಗೆ ಮೈಸೂರು ಡಿಸಿ ಸೂಚನೆ
ಮೈಸೂರು, ಸೆಪ್ಟೆಂಬರ್ 29: ಮೈಸೂರು ಜಿಲ್ಲಾಧಿಕಾರಿಯಾಗಿ ಇಂದು ಅಧಿಕಾರ ವಹಿಸಿಕೊಂಡಿರುವ ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲಿನ ಕೊರೊನಾ ಸೋಂಕಿನ ಸ್ಥಿತಿಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬೆಂಗಳೂರು ನಂತರ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಮೈಸೂರಲ್ಲಿ ಕೊರೊನಾ ಟೆಸ್ಟಿಂಗ್ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಪರೀಕ್ಷೆ ಪ್ರಮಾಣ ಹೆಚ್ಚಿಸುವ ಅಗತ್ಯವಿದೆ ಎಂದು ಡಿಸಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು.
ಸದ್ಯಕ್ಕೆ ಕೊರೊನಾ ಸೋಂಕಿನ ಪರೀಕ್ಷೆಗೆ ಜಿಲ್ಲೆಯಲ್ಲಿ 70 ಸ್ಥಾಯಿ ತಂಡಗಳು ಹಾಗೂ 30 ಸಂಚಾರಿ ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ತಂಡಗಳ ನಿಯೋಜನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಅನುಮತಿ ಕೋರಿದರು. ಈ ಹಿನ್ನೆಲೆಯಲ್ಲಿ ಈಗಿರುವ 30 ಸಂಚಾರಿ ತಂಡಗಳ ಜೊತೆಗೆ ಇನ್ನೂ 25 ತಂಡಗಳಿಗೆ ಬೇಕಾದ ಲ್ಯಾಬ್ ಟೆಕ್ನಿಷಿಯನ್ಸ್ ಹಾಗೂ ಡೇಟಾ ಎಂಟ್ರಿ ಆಪರೇಟರ್ಗಳನ್ನು ನಿಯೋಜಿಸಿಕೊಳ್ಳಲು ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅನುಮತಿ ನೀಡಿದರು.
ಕೊರೊನಾ ನಿಯಂತ್ರಣ, ದಸರಾ ಮಹೋತ್ಸವ ಆದ್ಯತೆಯ ಕೆಲಸ: ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಮಾದರಿ ಸಂಗ್ರಹಕ್ಕೆ ಬೇಕಾದ ವಿಟಿಎಂ ಉಪಕರಣಗಳು ಬರುವುದು ತಡವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಅನುದಾನದಲ್ಲೇ 20 ಸಾವಿರ ವಿಟಿಎಂ ಉಪಕರಣಗಳನ್ನು ಖರೀದಿಸಿ ಆರೋಗ್ಯ ಇಲಾಖೆಗೆ ನೀಡುವಂತೆ ತಿಳಿಸಿದರು. ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯನ್ನು ತಗ್ಗಿಸಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ನಿಯೋಜಿಸಿರುವ ಎಲ್ಲ ನೋಡಲ್ ಅಧಿಕಾರಿಗಳ ಜೊತೆ ಶೀಘ್ರದಲ್ಲೇ ಸಭೆ ನಡೆಸಬೇಕೆಂದು ತಿಳಿಸಿದರು. ಮೈಸೂರು ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 75,755 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 4697 ಸಕ್ರಿಯ ಪ್ರಕರಣಗಳಾಗಿವೆ. 69164 ಮಂದಿ ಡಿಸ್ಚಾರ್ಜ್ ಆಗಿದ್ದು, 1894 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
Recommended Video