ಮೈಸೂರು ಐಎಎಸ್ ಕಾಳಗ: ಶಿಲ್ಪಾನಾಗ್ ಆರೋಪಕ್ಕೆ ರೋಹಿಣಿ ಸಿಂಧೂರಿ ಪ್ರತ್ಯುತ್ತರ
ಮೈಸೂರು, ಜೂನ್ 4: ತಮ್ಮ ಕಾರ್ಯವೈಖರಿ ಕುರಿತಂತೆ ಸ್ಥಳೀಯ ಜನಪ್ರತಿಧಿನಿಗಳು ಹಲವಾರು ಹೇಳಿಕೆಗಳನ್ನು ನೀಡಿದ್ದರೂ ತಲೆಕೆಡಿಸಿಕೊಳ್ಳದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಇದೀಗ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರು ಮಾಡಿರುವ ಸಾಲು ಸಾಲು ಆರೋಪಗಳಿಗೂ ಸಹಜವಾಗಿ ಸ್ಪಷ್ಟನೆ ನೀಡಿ ಸುಮ್ಮನಾಗಿದ್ದಾರೆ.
Recommended Video
ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ತಮ್ಮ ವಿರುದ್ಧ ಆರೋಪಗಳನ್ನು ಮಾಡಿ ರಾಜೀನಾಮೆ ಸಲ್ಲಿಸಿದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರೋಹಿಣಿ ಸಿಂಧೂರಿ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜಿಲ್ಲಾಡಳಿತ ಹಾಗೂ ತಮ್ಮ ಮೇಲೆ ಆರೋಪ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಿಲ್ಪಾ ನಾಗ್ ಅವರು ತಮ್ಮ ವೈಫಲ್ಯ ಮರೆಮಾಚಲು ಜಿಲ್ಲಾಡಳಿತದ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ದೂರಿದ್ದಾರೆ. ನನ್ನ ಮೇಲೆ ಹೊರಿಸಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ನಾನು ಯಾರಿಗೂ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಡಳಿತ ಏನು ಕೆಲಸ ಮಾಡುತ್ತಿಲ್ಲ ಎಂಬ ರೀತಿಯಲ್ಲಿ ಶಿಲ್ಪಾನಾಗ್ ಇತ್ತೀಚೆಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿ, ಆಯುಕ್ತೆ ಹುದ್ದೆಗೆ ರಾಜೀನಾಮೆ ನೀಡಿದ್ದರು. ನಗರದಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಜಿಲ್ಲಾಡಳಿತದಿಂದ ನಮಗೆ ನೆರವು ಸಿಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ತಮ್ಮ ವೈಫಲ್ಯವನ್ನು ಜಿಲ್ಲಾಡಳಿತದ ಮೇಲೆ ಹೊರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.