ಟೀಕಿಸಿದವರಿಗೆ ಲೆಕ್ಕಪತ್ರದ ಮೂಲಕ ತಿರುಗೇಟು ನೀಡಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಮೈಸೂರು, ಮೇ 31: ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಮೈಸೂರಿನಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಸಂಸದ ಪ್ರತಾಪ್ ಸಿಂಹ ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ.
Recommended Video
ಮೈಸೂರು ಜಿಲ್ಲೆಯ ಜನಪ್ರತಿನಿಧಿಗಳಿಂದ ಒಂದಿಲ್ಲೊಂದು ಆರೋಪಕ್ಕೆ ಗುರಿಯಾಗಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಇದೀಗ ತಮ್ಮ ವಿರುದ್ಧ ಧ್ವನಿ ಎತ್ತಿದವರಿಗೆ ಲೆಕ್ಕಪತ್ರದ ಮೂಲಕ ತಿರುಗೇಟು ನೀಡಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸಂಕಷ್ಟದ ನಡುವೆಯೇ ಜಿಲ್ಲಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಡುವೆ ತಿಕ್ಕಾಟ ಶುರುವಾಗಿತ್ತು. ದಿನದಿಂದ ದಿನಕ್ಕೆ ಜಿಲ್ಲಾಧಿಕಾರಿ ಹಾಗೂ ಸಂಸದರ ನಡುವೆ ಆರೋಪ- ಪ್ರತ್ಯಾರೋಪಗಳ ಮಾತಿನ ಸಮರ ತಾರಕಕ್ಕೇರಿತ್ತು.
ರೋಹಿಣಿ ಸಿಂಧೂರಿ ವಿರುದ್ಧ ಸಿಡಿದೆದ್ದ ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿಗಳ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇವರ ಬೆನ್ನಲ್ಲೇ ಶಾಸಕ ಸಾ.ರಾ ಮಹೇಶ್ ಸಹ ಡಿಸಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಜನಪ್ರತಿನಿಧಿಗಳು ತಮ್ಮ ಮೇಲೆ ಮಾಡಿರುವ ಆರೋಪಗಳಿಗೆಲ್ಲಾ ಸೈಲೆಂಟ್ ಆಗಿಯೇ ಉತ್ತರ ನೀಡಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕೋವಿಡ್ ನಿರ್ವಹಣೆಯಲ್ಲಿ ಮಾಡಿರುವ ಖರ್ಚು-ವೆಚ್ಚದ ಲೆಕ್ಕಪತ್ರ ಬಿಡುಗಡೆ ಮಾಡಿದ್ದು, ಆ ಮೂಲಕ ತಮ್ಮ ವಿರುದ್ಧ ಧ್ವನಿ ಎತ್ತಿದವರಿಗೆ ತಿರುಗೇಟು ನೀಡಿದ್ದಾರೆ.
ಕೊರೊನಾ ನಿಯಂತ್ರಣದತ್ತ ಗಮನ
ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನದ ಹಣದ ಲೆಕ್ಕ ನೀಡುವಂತೆ ಪ್ರತಾಪ್ ಸಿಂಹ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದ ಹಣವನ್ನು ಬಳಕೆ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿವರ ಕೊಟ್ಟಿದ್ದಾರೆ. ಅಲ್ಲದೇ ತಮ್ಮ ಗಮನ ಕೊರೊನಾ ನಿಯಂತ್ರಣದ ಕಡೆಗೆ ಮಾತ್ರ. ಯಾವುದೇ ವೈಯಕ್ತಿಕ ಆರೋಪಗಳಿಗೆ ಗಮನ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.
ನಾನು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದ ವೈಯಕ್ತಿಕ ಆರೋಪಗಳನ್ನು ಮಾಡಲಾಗುತ್ತಿದೆ. ಅದೆಲ್ಲವನ್ನು ಗಮನಕ್ಕೆ ತೆಗೆದುಕೊಳ್ಳದೆ ಕೋವಿಡ್ ನಿರ್ವಹಣೆಯಲ್ಲಿ ಗಮನಹರಿಸುತ್ತೇನೆ. ನಾನು ನನ್ನ ಕೆಲಸ ಮಾಡುತ್ತಿದ್ದೇನೆ, ವೈಯಕ್ತಿಕ ಆರೋಪಗಳಿಂದ ಜಿಲ್ಲಾಡಳಿತದ ಕೆಲಸಕ್ಕೆ ಧಕ್ಕೆ ತರಲು ಸಾಧ್ಯವಾಗದ ಕಾರಣ ಕೊರೊನಾ ನಿರ್ವಹಣೆ ಕುರಿತು ಸುಳ್ಳು ಮತ್ತು ಬೇಜವಾಬ್ದಾರಿ ಹೇಳಿಕೆಗಳು ಹೊರ ಬರುತ್ತಿವೆ ಎಂದಿದ್ದಾರೆ.
ಈ ಹೇಳಿಕೆಗಳು ಸುಳ್ಳಾಗಿದ್ದರೂ, ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳಿಂದ ಬರುತ್ತಿವೆ. ಜನರಲ್ಲಿ ಕೋವಿಡ್ ಬಗ್ಗೆ ಭಯ ಹೆಚ್ಚಾಗುತ್ತದೆ. ಅವರ ಆತ್ಮವಿಶ್ವಾಸ ಕುಗ್ಗುತ್ತದೆ. ಅಲ್ಲದೇ ಕೊರೊನಾ ವಿರುದ್ಧದ ಹೋರಾಟಕ್ಕೆ ತೊಂದರೆಯುಂಟು ಮಾಡುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ಬೇಸರ ವ್ಯಕ್ತಪಡಿಸಿದರು.