ದೌರ್ಜನ್ಯಕ್ಕೊಳಗಾದ ಹಾಗೂ ದೇವದಾಸಿ ಹೆಣ್ಣುಮಕ್ಕಳಿಗೆ ವಿವಿಗಳಲ್ಲಿ ಮೀಸಲಾತಿ
ಮೈಸೂರು, ಜುಲೈ 10: ಲೈಂಗಿಕ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ಹಾಗೂ ದೇವದಾಸಿ ಮಹಿಳೆಯರಿಗೆ ಶಿಕ್ಷಣದಲ್ಲಿ ಶೇ.1ರಷ್ಟು ಮೀಸಲಾತಿ ನೀಡಬೇಕೆಂದು ರಾಜ್ಯದ ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.
ಈ ವರ್ಷದ ಶೈಕ್ಷಣಿಕ ಅವಧಿಯಲ್ಲಿಯೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಶಿಕ್ಷಣ ಪಡೆದುಕೊಳ್ಳುವ ಹೆಣ್ಣು ಮಕ್ಕಳಿಗೆ ಮೀಸಲಾತಿ ಜಾರಿಗೊಳಿಸಬೇಕಾಗುತ್ತದೆ ಎಂದು ಉನ್ನತ ಶಿಕ್ಷಣ ಇಲಾಖೆ ಎಲ್ಲ ವಿಶ್ವವಿದ್ಯಾಲಯಗಳಿಗೂ ಆದೇಶ ನೀಡಿದೆ. ಮೈಸೂರಿನಲ್ಲಿರುವ ಒಡನಾಡಿ ಸೇವಾ ಸಂಸ್ಥೆ ಲೈಂಗಿಕ ಶೋಷಣೆ, ವರದಕ್ಷಿಣೆ ಕಿರುಕುಳ ಹಾಗೂ ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರ ಶೈಕ್ಷಣಿಕ ಅಭಿವೃದ್ಧಿಗಾಗಿ ಮೈಸೂರು ವಿವಿಯಲ್ಲಿ ಮೀಸಲಾತಿ ನೀಡುವಂತೆ ಈ ಹಿಂದೆ ಕೋರಿತ್ತು.
2011-12ರ ಶೈಕ್ಷಣಿಕ ವರ್ಷದಿಂದಲೇ ಒಡನಾಡಿ ಸೇವಾ ಸಂಸ್ಥೆಯಿಂದ ಬರುವ ವಿದ್ಯಾರ್ಥಿಗಳಿಗೆ ಮೈಸೂರು ವಿವಿ ಪ್ರವೇಶ ನೀಡುತ್ತಿದೆ. ವಿಶ್ವವಿದ್ಯಾಲಯವು ಪದವಿ ಪೂರ್ವ ಶಿಕ್ಷಣಕ್ಕೆ ಇಬ್ಬರು ಅಭ್ಯರ್ಥಿಗಳನ್ನು ಮತ್ತು ಸ್ನಾತಕೋತ್ತರ ಶಿಕ್ಷಣಕ್ಕೆ ಒಬ್ಬ ಅಭ್ಯರ್ಥಿಯನ್ನು ಸೇರಿಸಿಕೊಳ್ಳುತ್ತಿದೆ. ಈ ವಿದ್ಯಾರ್ಥಿಗಳು ಶುಲ್ಕದಲ್ಲಿ ಶೇ 50ರಷ್ಟು ರಿಯಾಯಿತಿಗೆ ಅರ್ಹರಾಗಿರುತ್ತಾರೆ.

ಮೀಸಲಾತಿಯನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂಬ ವಿಧಾನಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಎಲ್ಲ ವಿವಿಗಳಲ್ಲೂ ಈ ಯೋಜನೆ ತರಲು ಮುಂದಾಗುತ್ತಿರುವುದರಿಂದ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.












Click it and Unblock the Notifications