ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆ; ಸಾಧಕ-ಬಾಧಕ ಚರ್ಚೆ
ಮೈಸೂರು, ಏಪ್ರಿಲ್ 11; ಬೆಂಗಳೂರು ನಂತರದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯನ್ನು ವಿಸ್ತರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಚರ್ಚೆ ಆರಂಭವಾಗಿದೆ.
ಮೈಸೂರು ಜಲ್ಲಾ ಉಸ್ತುವಾರಿ ಮತ್ತು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ನೇತೃತ್ವದಲ್ಲಿ ಮೈಸೂರು ಮಹಾನಗರ ಪಾಲಿಕೆ ರಚನೆ ಸಾಧಕ- ಬಾಧಕಗಳ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಶಾಸಕರು, ಸಂಸದರು, ಪಾಲಿಕೆ ಮಹಾಪೌರರು, ಮೂಡಾ ಅಧ್ಯಕ್ಷರ ಸಮ್ಮುಖದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಜನಪ್ರತಿನಿಧಿಗಳು ಮೈಸೂರು ಮಹಾನಗರ ಪಾಲಿಕೆಗೆ ಹೊಂದಿಕೊಂಡಂತಿರುವ ಹೂಟಗಳ್ಳಿ ನಗರಸಭೆ, ಬೋಗಾದಿ, ಶ್ರೀರಾಂಪುರ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಗಳು ಹಾಗೂ ಚಾಮುಂಡಿ ಬೆಟ್ಟ, ಆಲನಹಳ್ಳಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡಿಸಿಕೊಂಡರೆ ಸೂಕ್ತ ಮೂಲಸೌಕರ್ಯ ಕಲ್ಪಿಸಿದಂತಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರು ಪಾಲಿಕೆ ವ್ಯಾಪ್ತಿಗೆ ಹೊಂದಿಕೊಂಡಂತೆ ಹಾಗೂ ಹೊರಭಾಗದಲ್ಲಿರುವ ಕೆಲವು ಗ್ರಾಮಗಳು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿವೆ. ಆದರೆ ಯೋಜನಾಬದ್ಧ ಬೆಳವಣಿಗೆ ಮೇಲೆ ಹೆಚ್ಚಿನ ನಿಯಂತ್ರಣವಿಲ್ಲದೆ ಸೂಕ್ತ ಮೂಲಸೌಕರ್ಯಗಳಿಲ್ಲದೆ ಯೋಜಿತ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಅವುಗಳನ್ನು ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳುವುದು ಸೂಕ್ತ ಎಂದರು.
ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳುವ ಭಾಗಗಳಲ್ಲಿ ಸುಮಾರು 1.54 ಲಕ್ಷ ಜನಸಂಖ್ಯೆ ಒಳಗೊಂಡಿದೆ. ಅವರೆಲ್ಲರಿಗೂ ಸೂಕ್ತ ಮೂಲ ಸೌಕರ್ಯ ಸಿಗಲಿದೆ. ಜೊತೆಗೆ ಪಾಲಿಕೆಗೂ ಉತ್ತಮ ರೀತಿಯಲ್ಲಿ ತೆರಿಗೆ ಸಂಗ್ರಹವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಭವಿಷ್ಯದಲ್ಲಿ ಮೈಸೂರು ಬೃಹತ್ ನಗರವಾಗಿ ಬೆಳಯುವುದರಿಂದ ದೂರದೃಷ್ಟಿ ಇಟ್ಟುಕೊಂಡು ಯೋಜನೆ ರೂಪಿಸಬೇಕು. ಸದರಿ ನಗರಸಭೆ, ಪಟ್ಟಣಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿಗೆ ಒಳಪಡುವ ಎಲ್ಲಾ ಗ್ರಾಮಗಳ ಮಾಹಿತಿಯನ್ನು ಸಂಗ್ರಹಿಸಿ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, "ಮೈಸೂರು ಮಹಾನಗರ ಪಾಲಿಕೆಗೆ ಒಂದು ನಗರಸಭೆ, ಮೂರು ಪಟ್ಟಣ ಪಂಚಾಯತಿ, ಮೂರು ಗ್ರಾಮ ಪಂಚಾಯತಿ ಗಳನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ಸಂಬಂಧ ಸಾಧಕ ಬಾಧಕಗಳ ಕುರಿತು ಚರ್ಚಿಸಲಾಯಿತು. ಎಲ್ಲಾ ಜನಪ್ರತಿನಿಧಿಗಳು ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ. ಪಾಲಿಕೆಗೆ ಸೇರ್ಪಡೆ ಮಾಡುವ ಕುರಿತಂತೆ ಆಡಳಿತಾಧಿಕಾರಿಗಳು ನಿರ್ಣಯ ಹೊರಡಿಸಲಿದ್ದಾರೆ" ಎಂದು ಹೇಳಿದರು.
ಸಭೆಯಲ್ಲಿ ಶಾಸಕರಾದ ನಾಗೇಂದ್ರ, ರಾಮ್ ದಾಸ್, ತನ್ವೀರ್ ಸೇಠ್, ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಪಾಲಿಕೆ ಮಹಾಪೌರರಾದ ಸುನಂದಾ ಪಾಲನೇತ್ರ, ಮೂಡಾ ಅಧ್ಯಕ್ಷರಾದ ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications