ರಮೇಶ್ ಜಾರಕಿಹೊಳಿಯಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಮೈಸೂರು, ನವೆಂಬರ್ 8: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಬೆಳ್ಳಂಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ವಿಚಾರಣೆ ನಡೆದಿದ್ದು ತೀರ್ಪು ಮಾತ್ರ ಪ್ರಕಟವಾಗಬೇಕಿಗಿದೆ ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ದೇವಿಯ ದರ್ಶನ ಪಡೆದ ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ವಿಶೇಷ ಪೂಜೆ ಸಲ್ಲಿಸಿದರು.
ಯಡಿಯೂರಪ್ಪ ಸರ್ಕಾರಕ್ಕೆ ಕೈಕೊಡಲಿದ್ದಾರೆಯೇ ಅನರ್ಹ ಶಾಸಕರು?
ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ದೇವರ ಮೊರೆ ಹೋಗಿದ್ದಾರೆ. ಚಾಮುಂಡಿ ದರ್ಶನ ಪಡೆದು ತೀರ್ಪು ಬೇಗ ಪ್ರಕಟವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ತೀರ್ಪು ಬರುವ ಸಾಧ್ಯತೆ ಇತ್ತು. ಆದರೆ ಸೋಮವಾರ ತೀರ್ಪು ಬರಬಹುದು ಎಂದು ಅಂದಾಜಿಸಲಾಗಿದೆ.
ಅನರ್ಹರಿಗೆ ಭಾರಿ ನಿರಾಸೆ
ಇಂದೇ ತೀರ್ಪು ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಅನರ್ಹರ ಶಾಸಕರಿಗೆ ಇದರಿಂದ ಭಾರೀ ನಿರಾಸೆಯಾಗಿದೆ. ಸೋಮವಾರದಿಂದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗುವ ಹಿನ್ನೆಲೆಯಲ್ಲಿ ಅನರ್ಹರು ಆತಂಕಕ್ಕೆ ಒಳಗಾಗಿದ್ದಾರೆ.
ನ್ಯಾಯಾಲಯದಿಂದ ಸುದೀರ್ಘ ವಿಚಾರಣೆ
ಪ್ರಕರಣದ ವಿಚಾರಣೆ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿದೆ. ಈಗಾಗಲೇ ಸುದೀರ್ಘ ವಿಚಾರಣೆ ನಡೆಸಿರುವ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ನ್ಯಾ. ಎನ್.ವಿ. ರಮಣ ನೇತೃತ್ವದ ಪೀಠದ ಕಲಾಪ ಪಟ್ಟಿಯಲ್ಲಿ ಅನರ್ಹ ಶಾಸಕರ ತೀರ್ಪು ಪ್ರಕಟಿಸುವ ಮಾಹಿತಿ ಇಲ್ಲ. ಹೀಗಾಗಿ ಇಂದು ತೀರ್ಪು ಪ್ರಕಟವಾಗುವುದಿಲ್ಲ.
ಇನ್ನು ಶನಿವಾರ ಮತ್ತು ಭಾನುವಾರ ನ್ಯಾಯಾಲಯಕ್ಕೆ ರಜೆ ಇರುವುದರಿಂದ ಸೋಮವಾರದವರೆಗೂ ಅನರ್ಹ ಶಾಸಕರು ಕಾಯಬೇಕಾಗಿದೆ. ಸೋಮವಾರದಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುವುದರಿಂದ ಉಪಚುನಾವಣೆಯನ್ನು ಮುಂದೂಡಿಕೆ ಮಾಡುವಂತೆ ಅನರ್ಹ ಶಾಸಕರು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಅನರ್ಹರಿಗೆ ಟಿಕೆಟ್ ನೀಡಲ್ಲ ಎಂದು ಎಲ್ಲೂ ಹೇಳಿಲ್ಲ
ಅನರ್ಹ ಶಾಸಕರು ಪಕ್ಷಕ್ಕೆ ಬಂದ ಸಂದರ್ಭದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಮತ್ತು ಅವಕಾಶಗಳನ್ನು ವರಿಷ್ಠರು ನೀಡುತ್ತಾರೆ. ಎಂದು ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡುವುದಿಲ್ಲವೆಂದು ನಾನು ಎಲ್ಲಿಯೂ ಹೇಳಿಲ್ಲ. ಅವರು ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ . ಉಪಚುನಾವಣೆಯಲ್ಲಿ ಅಥಣಿ ಕ್ಷೇತ್ರದ ಟಿಕೆಟ್ ಗಾಗಿ ನಾನು ಪಟ್ಟು ಹಿಡಿದಿಲ್ಲ, ಪಕ್ಷದ ಶಿಸ್ತಿನ ಸಿಪಾಯಿ ಆಗಿರುವ ನಾನು ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.
ಚಾಮುಂಡೇಶ್ವರಿಗೆ ಡಿಕೆ ಶಿವಕುಮಾರ್ ಅವರಿಂದ ವಿಶೇಷ ಪೂಜೆ
ಎರಡು ದಿನಗಳ ಕಾಲ ದೇವಸ್ಥಾನಗಳ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.