'ನಟ ದರ್ಶನ್ ಅವರನ್ನು ಕೆಣಕಿದರೆ ಸುಮ್ಮನಿರಲ್ಲ, ಹುಷಾರ್'
ಮೈಸೂರು, ಮಾರ್ಚ್ 31:ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ನಟ ದರ್ಶನ್ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾಯಕ ಸಮಾಜಕ್ಕೆ ಸೇರಿದ ದರ್ಶನ್ ಅವರನ್ನು ಕೆಣಕಿದರೆ ಹುಷಾರ್ ಎಂದು ಜಿಲ್ಲಾ ಕಾಯಕ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಶನ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಅವರು ಚುನಾವಣಾ ಪ್ರಚಾರ ನಡೆಸಿದ ಒಂದೇ ಕಾರಣಕ್ಕೆ ಅವರ ತೇಜೋವಧೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದು ಹೀಗೇ ಮುಂದುವರೆದರೆ ಮತದಾನದ ದಿನ ನಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಕೆ.ಆರ್.ನಗರ ತಾಲೂಕು ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರುತ್ತದೆ. ಇಲ್ಲಿ ಕಾಯಕ ಸಮಾಜಗಳ 21 ಜಾತಿಗಳು ಸಂಘಟಿತವಾಗಿವೆ. ಅಲ್ಲದೇ, ಜಿಲ್ಲೆಯಲ್ಲಿ ಮುಸ್ಲಿಮರು ಹಾಗೂ ಕಾಯಕ ಸಮಾಜದವರು 1.10 ಲಕ್ಷ ಮಂದಿ ಇದ್ದಾರೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ದರ್ಶನ್ ಬಗ್ಗೆ ಮಾತನಾಡಬೇಕು ಎಂದು ಹೇಳಿದ್ದಾರೆ.

ಅಂಬರೀಶ್ ಅವರ ಮನೆ ಕಾಯುತ್ತಿದ್ದವರು ಇಂದು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನಾದರೂ ತತ್ವ ಮತ್ತು ಸಿದ್ಧಾಂತಗಳ ಆಧಾರದ ಮೇಲೆ ಮತ ಕೇಳಬೇಕು. ಮಂಡ್ಯ ಲೋಕಸಭಾ ಕ್ಷೇತ್ರವನ್ನು 'ಸೂಕ್ಷ್ಮ ಲೋಕಸಭಾ ಕ್ಷೇತ್ರ'ವೆಂದು ಘೋಷಿಸಬೇಕು. ಹೆಚ್ಚಿನ ಪ್ಯಾರಾ ಮಿಲಿಟರಿ ಪಡೆಗಳನ್ನು ನಿಯೋಜನೆ ಮಾಡಿಸಬೇಕು. ಜಾತಿ, ತೋಳ್ಬಲಕ್ಕೆ ಕಡಿವಾಣ ಹಾಕಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications