ಮೈಸೂರು ನಗರದ ಹಲವೆಡೆ ಸಂವಿಧಾನ ಶಿಲ್ಪಿಯ ಸ್ಮರಣೆ
ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ 126ನೇ ಜಯಂತಿಯನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಮೈಸೂರು, ಏಪ್ರಿಲ್ 14 : ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ 126ನೇ ಜಯಂತಿಯನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜಯಂತಿಯನ್ನು ಆಚರಿಸಲಾಯಿತು.

ಮೈಸೂರಿನ ಪುರಭವನದ ಎದುರು ಇರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮಾಲಾರ್ಪಣೆಗೈದರು. ಬಳಿಕ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನು ರಚಿಸಿದ ಮಹಾನ್ ವ್ಯಕ್ತಿ. ಅವರ ಜೀವನಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಅವರು ಪುರಭವನದಲ್ಲಿ ಅಮೃತಶಿಲೆಯಲ್ಲಿ ನಿರ್ಮಿಸುತ್ತಿರುವ ಮಂಟಪವನ್ನು ಈ ತಿಂಗಳ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು ಎಂದರು. ಅಲ್ಲದೇ ಅರಸು ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನದ ಮೊದಲ ಹಂತದ ಕಾಮಗಾರಿ ಮುಗಿದಿದ್ದು, ಮುಂದಿನ ಕಾಮಗಾರಿಯನ್ನು ಆದಷ್ಟು ಶೀಘ್ರದಲ್ಲಿ ಮುಗಿಸಲಾಗುವುದು ಎಂದು ತಿಳಿಸಿದರು.
ಹಲವು ಸಂಸ್ಥೆಗಳಿಂದ ಸಂವಿಧಾನ ಶಿಲ್ಪಿಯ ಸ್ಮರಣೆ
ಅಂಬೇಡ್ಕರ್ ಜಯಂತಿ ಹಿನ್ನೆಲೆ ಹೆಚ್.ವಿ.ರಾಜೀವ್ ಸ್ನೇಹ ಬಳಗದ ವತಿಯಿಂದ ಮೈಸೂರಿನ ಅಶೋಕಪುರಂ ಬಡಾವಣೆಯಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ನು ಮೈಸೂರು ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರ, ಮಾನಸಗಂಗೋತ್ರಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿಶೇಷ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126 ನೇ ವರ್ಷದ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಯಂತಿ ಹಿನ್ನಲೆಯಲ್ಲಿ 'ಭಾರತದ ಪ್ರಸ್ತುತ ಸಮಸ್ಯೆಗಳು: ಅಂಬೇಡ್ಕರ್ ಚಿಂತನೆ' ವಿಶೇಷ ಉಪನ್ಯಾಸ ಹಾಗೂ ಪಿ.ಎಚ್.ಡಿ.ಪದವೀಧರರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಕೂಡ ನಡೆಯಿತು.












Click it and Unblock the Notifications