ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟ ಜೆಡಿಎಸ್; ಸೋಲು-ಗೆಲುವಿನ ಲೆಕ್ಕಾಚಾರ
ಮೈಸೂರು: ವಿಧಾನ ಪರಿಷತ್ನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ಚುನಾವಣೆ ಚಟುವಟಿಕೆ ಗರಿಗೆದರಿದೆ.
ಮೊದಲಿನಿಂದಲೂ ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್ನ ಭದ್ರಕೋಟೆಯಾಗಿತ್ತು. ನಾಲ್ಕು ಬಾರಿ ಮರಿತಿಬ್ಬೇಗೌಡ ಅವರನ್ನು ಈ ಕ್ಷೇತ್ರದಿಂದ ಗೆಲ್ಲುತ್ತಾ ಬರುತ್ತಿದ್ದಾರೆ. 2000 ಇಸವಿಯಲ್ಲಿ ಮರಿತಿಬ್ಬೇಗೌಡ ಅವರು ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದಿದ್ದರು. ನಂತರ 2006ರಲ್ಲಿ ಪಕ್ಷೇತರವಾಗಿ ನಿಂತಿದ್ದರು. 2012 ಹಾಗೂ 2018ರಲ್ಲಿ ಜೆಡಿಎಸ್ನಿಂದ ಭರ್ಜರಿ ಗೆಲುವು ಸಾಧಿಸಿದ್ದರು.

ಕಾಂಗ್ರೆಸ್ ಸೇರ್ಪಡೆ
ಈಗಾಗಲೇ ಮರಿತಿಬ್ಬೇಗೌಡ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೊತೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಇದ್ದ ಕಾರಣ ಯಾರಿಗೆ ಟಿಕೆಟ್ ಸಿಗುತ್ತದೆ ಎಂಬ ಕುತೂಹಲ ಮೂಡಿತ್ತು. ಇದೀಗ ಜೆಡಿಎಸ್ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲಾಗಿದೆ.
ಆಕಾಂಕ್ಷಿಗಳಿಗೆ ನಿರಾಸೆ
ಬಿಜೆಪಿ ಮತ್ತು ಜೆಡಿಎಸ್ ಆಕಾಂಕ್ಷಿಗಳ ದಂಡೇ ಇತ್ತು. ದಕ್ಷಿಣ ಪದವೀಧರ ಕ್ಷೇತ್ರದಿಂದ ಎರಡು ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಕೆ.ಟಿ. ಶ್ರೀಕಂಠೇಗೌಡ ಅವರು ಕಳೆದ ಬಾರಿ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರಲಿಲ್ಲ. ಲೋಕಸಭೆಗೆ ಸ್ಪರ್ಧಿಸುವ ಇರಾದೆ ಹೊಂದಿದ್ದರು. ಆದರೆ, ಟಿಕೆಟ್ ಸಿಗಲಿಲ್ಲ. ಇದೀಗ ಮೈತ್ರಿ ಪರಿಣಾಮ ದಕ್ಷಿಣ ಶಿಕ್ಷಕರ ಕ್ಷೇತ್ರವೂ ಕೈ ತಪ್ಪಿದೆ. ಮತ್ತೊಬ್ಬ ಆಕಾಂಕ್ಷಿ ಅರಣ್ಯ ವಸತಿ ಹಾಗೂ ವಿಹಾರಧಾಮದ ಮಾಜಿ ಅಧ್ಯಕ್ಷ ವಿವೇಕಾನಂದ ಅವರೂ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೂ ನಿರಾಸೆ ಆಗಿದೆ.
ಈ.ಸಿ.ನಿಂಗರಾಜ್ ಗೌಡಗೆ ಟಿಕೆಟ್
ಮೂಲತಃ ಮಂಡ್ಯದ ಪಾಂಡವಪುರ ತಾಲೂಕಿನ ಈರೇಗೌಡನ ಕೊಪ್ಪಲು ಗ್ರಾಮದವರಾದ ಡಾ.ಈ.ಸಿ.ನಿಂಗರಾಜ್ ಗೌಡ ಮೈಸೂರು ನಗರದ ಶ್ರೀರಾಂಪುರದಲ್ಲಿ ನೆಲೆಸಿದ್ದಾರೆ. ಬಿಎಸ್ಸಿ ಪದವಿಯೊಂದಿಗೆ ಹಲವು ವಿಷಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪಿಎಚ್.ಡಿ ಪದವಿ ಕೂಡ ಪಡೆದಿದ್ದಾರೆ.
ಕಳೆದ ಮೂರು ದಶಕಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಎಬಿವಿಪಿ, ಅಖಿಲ ಭಾರತ ಸಾಹಿತ್ಯ ಪರಿಷತ್ ಸೇರಿದಂತೆ ಪರಿವಾರ ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಾ ಬಂದಿರುವ ನಿಂಗರಾಜ್ ಗೌಡ ಅವರು, ಕ್ಷೇತ್ರ ವ್ಯಾಪ್ತಿಯಲ್ಲಿ ಪದವೀಧರರು ಮತ್ತು ಶಿಕ್ಷಕರ ನಡುವೆ ಹೆಚ್ಚು ಒಡನಾಟ ಹೊಂದಿದ್ದಾರೆ. ಮೈಸೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿ ಅಧ್ಯಾಪಕರ ಸಮಸ್ಯೆಗಳನ್ನು ಬಗೆಹರಿಸಲು ಕೆಲಸ ಮಾಡಿದ್ದಾರೆ.












Click it and Unblock the Notifications