ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಜಯದೇವದ ಡಾ. ಸಿ.ಎನ್. ಮಂಜುನಾಥ್
ಮೈಸೂರು, ಅಕ್ಟೋಬರ್ 10: ಪ್ರಸಕ್ತ ಸಾಲಿನ ಮೈಸೂರು ದಸರಾ ಉದ್ಘಾಟನೆಗೆ ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಸಿ.ಎನ್.ಮಂಜುನಾಥ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಮೈಸೂರಿನ ಪೌರ ಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್, ಪೊಲೀಸ್ ಕಾನ್ ಸ್ಟೆಬಲ್ ಕುಮಾರ್ ಪಿ., ಸಾಮಾಜಿಕ ಕಾರ್ಯಕರ್ತರಾದ ಆಯೂಬ್ ಅಹಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಸಚಿವರು ತಿಳಿಸಿದರು.

ತಜ್ಞರ ವರದಿ ಪ್ರಕಾರ ದಸರಾ ಆಚರಣೆ
ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆಯನ್ನು ಮಾಡಲಾಗುವುದು. ಇದರಲ್ಲಿ ಯಾವುದೇ ವ್ಯತ್ಯಾಸ ಇರದು. ತಂಡದ ಶಿಫಾರಸಿನನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.

ಚಾಮುಂಡಿ ಬೆಟ್ಟದಲ್ಲಿ 300 ಜನ
ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ 300 ಜನ ಸೇರಿದಂತೆ ಯಾವೆಲ್ಲ ನಿಯಮಗಳನ್ನು ವಿಧಿಸಲಾಗಿದೆಯೋ ಅದರಂತೆಯೇ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಕೊರೊನಾ ನಿಯಮಾವಳಿಗಳ ಪ್ರಕಾರ ಕಾರ್ಯಕ್ರಮ ನಿರ್ವಹಣೆಗೆ ಪೊಲೀಸ್ ಆಯುಕ್ತರು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಕಳೆದ ಬಾರಿಯಂತೆಯೇ ದೀಪಾಲಂಕಾರ
ದೀಪಾಲಂಕಾರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಇದು ಹೈಪವರ್ ಕಮಿಟಿಯಲ್ಲಿ ತೀರ್ಮಾನವಾಗಿದೆ. ಕಳೆದ ಬಾರಿ ಯಾವ ರೀತಿ ಇತ್ತೋ ಅದೇ ರೀತಿ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿತ್ತು. ಹೀಗಾಗಿ ನೂರಾರು ಕಿ.ಮೀ. ದೂರ ಇರುವ ವ್ಯಾಪ್ತಿಯನ್ನು ಕಡಿತಗೊಳಿಸಿ 50 ಕಿಲೋ ಮೀಟರ್ ಗೆ ಸೀಮಿತಗೊಳಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಪಾರ್ಕಿಂಗ್ ಗೆ ಎಲ್ಲಾ ಕಡೆ ಅನುಮತಿ ಇಲ್ಲ
ಕೊರೋನಾ ಹಿನ್ನೆಲೆ ಪಾರ್ಕಿಂಗ್ ಗೆ ಎಲ್ಲ ಕಡೆ ಅನುಮತಿ ಕೊಡುವುದಿಲ್ಲ. ಜೊತೆಗೆ ಕೊರೊನಾ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಏನೆಲ್ಲಾ ಕಾರ್ಯಗಳನ್ನು ಕೈಗೊಳ್ಳಬೇಕೋ, ಏನೆಲ್ಲಾ ಕ್ರಮಗಳನ್ನು ಅನುಸರಿಸಬೇಕೋ ಎಲ್ಲವನ್ನೂ ತೆಗೆದುಕೊಳ್ಳಲಾಗುವುದು. ಈ ಕುರಿತು ಮಾಹಿತಿಗಳನ್ನು ಕಲೆ ಹಾಕುತ್ತೇನೆ ಎಂದು ಸಚಿವರು ಹೇಳಿದರು.












Click it and Unblock the Notifications