ಸಾಂಸ್ಕೃತಿಕ ನಗರಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖ!
ಮೈಸೂರು, ಏಪ್ರಿಲ್ 26: ಮೈಸೂರಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುತ್ತಿದ್ದ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.
ಸಾಮಾನ್ಯವಾಗಿ ಪ್ರವಾಸಿಗರು ಸಾಂಸ್ಕೃತಿಕ ನಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಆದರೆ ಈ ಬಾರಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾದ ಕಾರಣ ಪ್ರವಾಸೋದ್ಯಮವನ್ನೇ ನಂಬಿಕೊಂಡಿರುವ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದೆಡೆ ಕಳೆದ ಸಾಲಿಗಿಂತ ಈ ಬಾರಿ ಬಿಸಿಲಿನ ತಾಪ ಹೆಚ್ಚಿದೆ.
ಮೈಸೂರು ಜಿಲ್ಲೆಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನ ಈ ಬಾರಿ 39 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇದರಿಂದ ಸ್ಥಳೀಯರು ಮನೆಯಿಂದ ಹೊರಬರಲು ಮುಂದಾಗುತ್ತಿಲ್ಲ. ಅಲ್ಲದೇ ನೀರಿರುವ ಪ್ರವಾಸಿ ತಾಣಕ್ಕಷ್ಟೇ ತಮ್ಮ ಪ್ರವಾಸವನ್ನು ಸೀಮಿತಗೊಳಿಸುತ್ತಿದ್ದಾರೆ.

ಮೈಸೂರು ಅರಮನೆಗೆ ಸಾಮಾನ್ಯವಾಗಿ ದಿನವೊಂದಕ್ಕೆ 8 ರಿಂದ 9 ಸಾವಿರ ಪ್ರವಾಸಿಗರು, ರಜೆಯ ದಿನದಲ್ಲಿ 13 ರಿಂದ 15 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ ಮಾರ್ಚ್ ನಿಂದ ಏಪ್ರಿಲ್ ತಿಂಗಳಲ್ಲಿ ಸಾಮಾನ್ಯ ದಿನಗಳಲ್ಲಿ 5 ರಿಂದ 6 ಸಾವಿರ, ರಜಾ ದಿನಗಳಲ್ಲಿ 11 ರಿಂದ 12ಸಾವಿರ ಪ್ರವಾಸಿಗರಷ್ಟೇ ಭೇಟಿ ನೀಡುತ್ತಿದ್ದಾರೆ.
ಇನ್ನು ಚಾಮರಾಜ ಮೃಗಾಲಯಕ್ಕೂ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಯಾವ ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಿದ್ದಾರೋ, ಅದೇ ಪ್ರಮಾಣದಲ್ಲಿ ಭೇಟಿ ನೀಡಿದ್ದಾರೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ತಿಳಿಸಿದ್ದಾರೆ.
ಈ ಕುರಿತು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಪ್ರತಿಕ್ರಿಯಿಸಿ, ಮಾರ್ಚ್ ತಿಂಗಳಿಂದ ಪ್ರವಾಸೋದ್ಯಮ ಶೇ.ಐವತ್ತರಷ್ಟು ಕಡಿಮೆಯಾಗಿದೆ. ಶನಿವಾರ - ಭಾನುವಾರ ದಲ್ಲಿ ಮಾತ್ರ ಸ್ವಲ್ಪ ಪ್ರಮಾಣದಲ್ಲಿ ಪ್ರವಾಸಿಗರು ಮೈಸೂರಿಗೆ ಬರುತ್ತಿದ್ದಾರೆ. ಉಳಿದ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ಏಪ್ರಿಲ್ 23ರ ನಂತರವಷ್ಟೇ ಬೇರೆ ಬೇರೆ ಜಿಲ್ಲೆಗಳ ಜನರು ಮೈಸೂರಿನತ್ತ ಬರುವ ನಿರೀಕ್ಷೆ ಇದೆ ಎನ್ನುತ್ತಾರೆ.












Click it and Unblock the Notifications