ಡಿ. 14ರಂದು ಮೈಸೂರು ಚಾಮುಂಡೇಶ್ವರಿ ದೇವಸ್ಥಾನ ಪೂಜೆ ಸ್ಥಗಿತಕ್ಕೆ ಚಿಂತನೆ
ಮೈಸೂರು, ಡಿಸೆಂಬರ್ ೦4 : ರಾಜ್ಯ ಸರ್ಕಾರ ಹಾಗೂ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದ ನೌಕರರ ನಡುವಿನ ಜಟಾಪಟಿಯಿಂದಾಗಿ ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಪೂಜೆಗೆ ಕತ್ತರಿ ಬೀಳುವ ಕಾಲ ಸನ್ನಿಹಿತವಾಗಿದೆ.
ಬೆಟ್ಟದ ಚಾಮುಂಡೇಶ್ವರಿ ದೇಗುಲದಲ್ಲಿನ ನೌಕರರು ಪ್ರತಿಭಟನೆಗೆ ಮುಂದಾಗಿದ್ದು, ಇದೇ ಡಿಸೆಂಬರ್ 14ರಂದು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕರ್ತವ್ಯ ಸ್ಥಗಿತಗೊಳಿಸಲು ಮುಂದಾಗಿದ್ದಾರೆ. ಪುರೋಹಿತರು ಮತ್ತು ದೇವಾಲಯದ ಇತರೆ ನೌಕರರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಡಿಸೆಂಬರ್ 14ರ ನಂತರ ಧಾರ್ಮಿಕ ಕೈಂಕರ್ಯಗಳಿಗೆ ತೊಂದರೆ ಆಗಲಿದೆ.
6 ನೇ ವೇತನ ಆಯೋಗದ ನಿಯಮಾನುಸಾರ ಶೇ. 30 ರಷ್ಟು ವೇತನ ಹೆಚ್ಚಿಸಬೇಕು, ಹೆಚ್ಚುವರಿ ತುಟ್ಟಿಭತ್ಯೆ ಆದಾಗ ಮಂಜೂರು ಮಾಡಿಕೊಳ್ಳಲು ಖಾಯಂ ಆದೇಶ ನೀಡಬೇಕು ಎಂದು ಆಗ್ರಹಿಸಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬೀಗ ಹಾಕಲು ಶ್ರೀ ಚಾಮುಂಡೇಶ್ವರಿ ದೇಗುಲ ಹಾಗೂ ಸಮೂಹ ದೇವಾಲಯಗಳ ನೌಕರರ ಸಂಘ ನಿರ್ಧರಿಸಿದೆ.

ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಆದೇಶವಿದ್ದರೂ ನಮಗೆ ಬೋನಸ್ ಸಿಕ್ಕಿಲ್ಲ. ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದರೂ, ಸುಮಾರು 70 ಕ್ಕೂ ಹೆಚ್ಚು ನೌಕರರನ್ನು ಖಾಯಂ ಮಾಡಿಕೊಳ್ಳಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶ್ರೀ ಚಾಮುಂಡೇಶ್ವರಿ ಸಮೂಹ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ 220 ನೌಕರರೂ ಕರ್ತವ್ಯ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಪೂಜೆ, ಅರ್ಚನೆ, ಹರಕೆ, ಹೋಮ-ಹವನ ಸೇರಿದಂತೆ ಯಾವೊಂದು ಧಾರ್ಮಿಕ ಕಾರ್ಯಕ್ರಮಗಳೂ ನಡೆಯುವುದಿಲ್ಲ. ಭಕ್ತರಿಗೆ ಆಗುವ ಅನಾನುಕೂಲಕ್ಕೆ ಸರ್ಕಾರವೇ ಹೊಣೆ ಎಂದು ಪುರೋಹಿತರು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications