ಅ.17ರಿಂದ ಮೈಸೂರಿನ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ
ಮೈಸೂರು, ಅಕ್ಟೋಬರ್ 14: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ನಾಡಹಬ್ಬ ದಸರಾ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮೈಸೂರಿನಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸುಮಾರು 900 ಮಂದಿ ಮೃತಪಟ್ಟಿದ್ದಾರೆ. 6800ಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈ ಪರಿಸ್ಥಿತಿಯಲ್ಲಿ ಪ್ರವಾಸಿಗರು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದು ಸೂಕ್ತವಲ್ಲ ಎಂದರು.
ಕಳೆದ ವರ್ಷ ದಸರಾ ವೇಳೆ ಲಕ್ಷಾಂತರ ಮಂದಿ ಮೈಸೂರಿಗೆ ಭೇಟಿ ನೀಡಿದ್ದಾರೆ. ಈ ವರ್ಷ ಸೋಂಕು ಹರಡುತ್ತಿರುವುದರಿಂದ, ಹೆಚ್ಚಿನ ಜನರು ಮೈಸೂರಿಗೆ ಬಂದರೆ ಸೋಂಕಿನ ಪ್ರಮಾಣವೂ ಹೆಚ್ಚಾಗಬಹುದು ಎಂಬ ಉದ್ದೇಶದಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ಅಕ್ಟೋಬರ್ 14ರಿಂದ ಹಾಗೂ ಮೈಸೂರು ಅರಮನೆ, ಮೃಗಾಲಯ, ನಂಜನಗೂಡು ನಂಜುಂಡೇಶ್ವರ ದೇವಾಲಯದ ಪ್ರವೇಶವನ್ನು ಅಕ್ಟೋಬರ್ 17 ರಿಂದ ನವೆಂಬರ್ 1ರವರೆಗೆ ನಿರ್ಬಂಧಿಸಲಾಗಿದೆ. ಮೈಸೂರಿಗೆ ಸಮೀಪದ ಪ್ರವಾಸಿ ತಾಣವಾದ ಕೃಷ್ಣರಾಜ ಸಾಗರ, ರಂಗನತಿಟ್ಟು ಪಕ್ಷಿಧಾಮ, ಶ್ರೀರಂಗಪಟ್ಟಣ, ನಿಮಿಷಾಂಬಕ್ಕೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲು ಅಲ್ಲಿನ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದರು.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್ಪಿ ಸಿ.ಬಿ.ರಿಷ್ಯಂತ್, ಜಿಪಂ ಸಿಇಒ ಡಿ.ಭಾರತಿ, ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಎಡಿಸಿ ಬಿ.ಎಸ್. ಮಂಜುನಾಥ್ಸ್ವಾಮಿ, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.












Click it and Unblock the Notifications