ಸರ್ಕಾರ, ಗುಪ್ತಚರ ಇಲಾಖೆ ವೈಫಲ್ಯವೇ ಕಾರಣ; ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಆರೋಪ
ಮೈಸೂರು, ಫೆಬ್ರವರಿ 28: "ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಮತ್ತು ಕೋಮುಗಲಭೆಗೆ ಸರ್ಕಾರ ಮತ್ತು ಗುಪ್ತಚರ ಇಲಾಖೆ ವೈಫಲ್ಯವೇ ಕಾರಣ" ಎಂದು ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆರೋಪಿಸಿದರು.
ನಗರದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಾರ್ವಜನಿಕ ಬದುಕಿನಲ್ಲಿ ಇರುವವರು ಪ್ರಚೋದನಕಾರಿ ಹೇಳಿಕೆ ನೀಡುವುದು ಶೋಭೆತರುವ ವಿಷಯವಲ್ಲ. ಅಲ್ಲದೇ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿ ಪ್ರಜಾಪ್ರಭುತ್ವವನ್ನು ಯಶಸ್ವಿಯಾಗಿ ಮುನ್ನಡೆಸುವುದು ಎಲ್ಲರ ಕರ್ತವ್ಯ ಮತ್ತು ಜವಾಬ್ದಾರಿ. ಆಡಳಿತದಲ್ಲಿರುವವರು ಈ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಮತ್ತು ಕಾಳಜಿ ವಹಿಸಿ ಕೆಲಸ ಮಾಡಬೇಕು. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವುದು ನಿಜಕ್ಕೂ ನೋವಿನ ಸಂಗತಿ" ಎಂದು ವಿಷಾದ ವ್ಯಕ್ತಪಡಿಸಿದರು.
ಈಶಾನ್ಯ ದೆಹಲಿ ಹೊತ್ತಿ ಉರಿದರೂ ಜನ ಮಾನವೀಯತೆ ಮರೆತಿಲ್ಲ
ಸ್ವಾತಂತ್ರ್ಯ ಹೋರಾಟಕ್ಕೆ ಕಪ್ಪುಚುಕ್ಕೆ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, "ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸ ತಿಳಿಯದ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ ಜನರು ಇಂತಹ ಹೇಳಿಕೆ ನೀಡಿರುವುದು ನಿಜಕ್ಕೂ ದುರದೃಷ್ಟಕರ. ಈ ಬಗ್ಗೆ ಕಾಂಗ್ರೆಸ್ ಈಗಾಗಲೇ ಹೋರಾಟ ನಡೆಸಿದ್ದು, ಇಂತಹ ಹೇಳಿಕೆಗಳು ಸ್ವಾತಂತ್ರ್ಯ ಹೋರಾಟಕ್ಕೆ ಕಪ್ಪುಚುಕ್ಕೆ ಎಂದು ಬೇಸರ ವ್ಯಕ್ತಪಡಿಸಿದರು.