ಮೈಸೂರು; ನಕಲಿ ನಂದಿನಿ ತುಪ್ಪ ತಯಾರಿಕೆ, 4 ಜನರ ಬಂಧನ
ಮೈಸೂರು, ಡಿಸೆಂಬರ್ 28; ಸಾಂಸ್ಕೃತಿಕ ನಗರಿ ಮೈಸೂರಿಗರು ಸೇರಿದಂತೆ ನಂದಿನಿ ತುಪ್ಪ ಬಳಕೆ ಮಾಡುವ ಗ್ರಾಹಕರಲ್ಲಿ ಆತಂಕ ಮೂಡಿಸಿದ್ದ ನಕಲಿ ನಂದಿನಿ ತುಪ್ಪ ತಯಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಡಿಸೆಂಬರ್ 15ರಂದು ಮೈಸೂರು ತಾಲೂಕಿನ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಘಟಕದ ಮೇಲೆ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಸುಮಿತ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿತ್ತು.
ಇದೀಗ ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಮಂಗಳವಾರ ಹೇಳಿದ್ದಾರೆ.

"ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ನಾಲ್ವರು ಆರೋಪಿಗಳ ಪೈಕಿ ಇಬ್ಬರ ಹೆಸರು ಎಫ್ಐಆರ್ನಲ್ಲಿ ಉಲ್ಲೇಖವಾಗಿತ್ತು. ಈ ಕುರಿತಂತೆ ಇನ್ನಷ್ಟು ತನಿಖೆ ಮುಂದುವರೆದಿದ್ದು, ಆರೋಪಿಗಳು ನೀಡುವ ಸುಳಿವಿನ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ಆರ್. ಚೇತನ್ ತಿಳಿಸಿದರು.
"ಆರೋಪಿಗಳು ಬಹಳ ವರ್ಷಗಳಿಂದ ಮೈಸೂರಿನಲ್ಲೇ ನೆಲೆಸಿದ್ದಾರೆಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದುವರೆಗಿನ ತನಿಖೆ ಪ್ರಕಾರ ಕೆಎಂಎಫ್ ಸಿಬ್ಬಂದಿ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಾಗಂತ ಈಗಲೇ ನಿರ್ಧಾರ ಕೈಗೊಳ್ಳಲಾಗುವುದಿಲ್ಲ ದಾಳಿ ವೇಳೆ 10 ಟನ್ ನಕಲಿ ನಂದಿನಿ ತುಪ್ಪ ಪತ್ತೆಯಾಗಿತ್ತು" ಎಂದು ಎಸ್ಪಿ ಹೇಳಿದ್ದಾರೆ.
ಸಿಬಿಐ ತನಿಖೆಗೆ ವಹಿಸಿ; ನಂದಿನಿ ತುಪ್ಪ ಕಲಬೆರೆಕೆ ಹಗರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಡಿಸೆಂಬರ್ 30ರಂದು ಪ್ರತಿಭಟನೆ ನಡೆಸಲು ರಾಜ್ಯ ರೈತ ಸಂಘ ಕರೆ ನೀಡಿದೆ. ಅಂದು ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಯಲಿದೆ.
"ನಂದಿನಿ ತುಪ್ಪ ಕಲಬೆರಕೆ ಆಗಿರೋದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಹಗರಣದಲ್ಲಿ ಮೈಮುಲ್ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ಇದೆ. ಹಾಗಾಗಿ ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು" ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಆಗ್ರಹಿಸಿದ್ದಾರೆ.
"ಜನವರಿ 1ರಿಂದ ಡೈರಿಗಳಲ್ಲಿ ಸ್ಥಳೀಯ ಕಚ್ಚಾ ಹಾಲು ಮಾರಾಟಕ್ಕೆ ನಿಷೇಧ ಮಾಡಿರುವುದು ಖಂಡನೀಯ. ಇದರಿಂದ ಹಾಲು ಉತ್ಪಾದಕರಿಗೆ ಹೊಡೆತ ಬೀಳಲಿದೆ. ಹಾಗಾಗಿ ಈ ಎಲ್ಲಾ ವಿಚಾರಗಳ ಕುರಿತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ" ಎಂದು ಅವರು ಹೇಳಿದ್ದಾರೆ.
ದಾಳಿ ನಡೆದಿತ್ತು; ನಕಲಿಯಾಗಿ ತುಪ್ಪ ತಯಾರಿಸಿ ನಂದಿನಿ ಉತ್ಪನ್ನದ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತಿತ್ತು. ತುಪ್ಪ ತಯಾರಿಸುವ ಗೋಡೌನ್ ಮೇಲೆ ದಾಳಿ ಮಾಡಿದಾಗ ಕಳೆದ ನಾಲ್ಕು ತಿಂಗಳಿನಿಂದ ತುಪ್ಪವನ್ನು ನಗರದಾದ್ಯಂತ ವಿತರಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿತ್ತು.
ಈ ಪ್ರಕರಣ ಮೈಸೂರು ಸೇರಿದಂತೆ ಕರ್ನಾಟಕದಲ್ಲಿ ಸಂಚಲನ ಮೂಡಿಸಿತ್ತು. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜನರು ಒತ್ತಾಯಿಸಿದ್ದರು. ಕೆಎಂಎಫ್ನ ಅಧಿಕಾರಿಗಳು ಸಹ ಇದರಲ್ಲಿ ಭಾಗಿಯಾಗಿದ್ದಾರೆಯೇ? ಎಂದು ಸಹ ತನಿಖೆಯಾಗಬೇಕು ಎಂದು ಆಗ್ರಹಿಸಲಾಗಿತ್ತು.
ನೈಟ್ ಕರ್ಫ್ಯೂ ಜಾರಿಗೆ ಸಿದ್ಧತೆ; "ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ನಾವು 13 ಚೆಕ್ ಪೋಸ್ಟ್ ಸಿದ್ದಪಡಿಸಿದ್ದೇವೆ. ಆ ಮೂಲಕ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಿದ್ದು, ಜನರ ಆರೋಗ್ಯದ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದೇವೆ" ಎಂದು ಆರ್. ಚೇತನ್ ಹೇಳಿದ್ದಾರೆ.
"ರೆಸಾರ್ಟ್ ಹಾಗೂ ಹೋಟೆಲ್ಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಈ ಬಗ್ಗೆ ಈಗಾಗಲೇ ರೆಸಾರ್ಟ್ ಹಾಗೂ ಹೋಟೆಲ್ ಗಳ ಮಾಲೀಕರಿಗೆ ಸಭೆ ನಡೆಸಿ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ್ದೇವೆ. ಅಲ್ಲದೇ ಸಾರ್ವಜನಿಕರು ಸಹ ನೈಟ್ ಕರ್ಫ್ಯೂ ನಿಯಮವನ್ನು ಉಲ್ಲಂಘಿಸದೆ ಕೋವಿಡ್ ನಿಯಮಗಳನ್ನು ತಪ್ಪದೇ ಪಾಲಿಸಿಬೇಕು" ಎಂದು ಎಸ್ಪಿ ಚೇತನ್ ಮನವಿ ಮಾಡಿದರು.












Click it and Unblock the Notifications