Get Updates
Get notified of breaking news, exclusive insights, and must-see stories!

ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ

ಸ್ವಾಭಿಮಾನಿ, ನಿಷ್ಕಳಂಕ, ಪ್ರಾಮಾಣಿಕ ರಾಜಕಾರಣಿ ಎಂದೇ ಜನಜನಿತರಾಗಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದು ಸೋಮವಾರ ಭಾವಪೂರ್ಣ ವಿದಾಯ ಸಲ್ಲಿಸಿದರು.

ಮೈಸೂರಿನ ನಗರದ ಜಯಲಕ್ಷ್ಮಿಪುರಂನಲ್ಲಿರುವ 'ಭೀಮ ಸದನ' ನಿವಾಸಕ್ಕೆ ವಿ.ಶ್ರೀನಿವಾಸ ಪ್ರಸಾದ್ ಅವರ ಪಾರ್ಥಿವ ಶರೀರವನ್ನು ತರಲಾಯಿತು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಾಹಿತಿ ದೇವನೂರ ಮಹದೇವ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೇರಿದಂತಿ ಗಣ್ಯರು ಅಂತಿಮ ನಮನ ಸಲ್ಲಿಸಿದರು.

Fans Mourn Passing of Former Union Minister V Srinivas Prasad

ಬಳಿಕ ಭೀಮ ಸದನದಿಂದ ವಿ.ಶ್ರೀನಿವಾಸ ಪ್ರಸಾದ್ ಅವರ ಪಾರ್ಥಿವ ಶರೀರ ಹೊರಟಾಗ ಅಭಿಮಾನಿಗಳು ಕಣ್ಣೀರು ಸುರಿಸಿದರು. ರಸ್ತೆಯುದ್ದಕ್ಕೂ ಪುಷ್ಪವೃಷ್ಠಿ ಸುರಿಸಿ ನಮನ ಸಲ್ಲಿಸಿದ ಸಾರ್ವಜನಿಕರು, ಶೋಕ ಸಾಗರದಲ್ಲಿ ಮುಳುಗಿದರು. 'ಮತ್ತೆ ಪ್ರಸಾದ್ ಅಣ್ಣ ಬರಲಿ' ಎಂಬ ಘೋಷಣೆಗಳನ್ನು ಮೊಳಗಿಸಿದರು. ಅಭಿಮಾನಿಗಳು ಭಾರವಾದ ಹೆಜ್ಜೆಗಳನ್ನಿಡುತ್ತಾ ಅಂತಿಮ ಯಾತ್ರೆಗೆ ಸಾಕ್ಷಿಯಾದರು.

ಅಂತಿಮ ಯಾತ್ರೆ ಸಾಗಿದ ಮಾರ್ಗದುದ್ದಕ್ಕೂ ಮಳಿಗೆದಾರರು ಸ್ವಯಂಪ್ರೇರಿತವಾಗಿ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಗೌರವ ಸಲ್ಲಿಸಿದರು. ಪಾರ್ಥಿವ ಶರೀರ ಹೊತ್ತ ವಾಹನ ಸಾಗಿದ ರಸ್ತೆಯುದ್ದಕ್ಕೂ ಎರಡೂ ಬದಿಯ ಕಟ್ಟಡಗಳ ಮೇಲೆ ನಿಂತ ಅಭಿಮಾನಿಗಳು, ಸಾರ್ವಜನಿಕರು ಅಂತಿಮ ದರ್ಶನ ಪಡೆದುಕೊಂಡರು. ಜೀರೋ ಟ್ರಾಫಿಕ್‌ನಲ್ಲೇ ಭೀಮಸದನದಿಂದ ಅಶೋಕಪುರಂವರೆಗೆ ಪಾರ್ಥಿವ ಶರೀರವನ್ನು ತರಲಾಯಿತು.

ಪಾರ್ಥಿವ ಶರೀರವಿದ್ದ ವಾಹನವು ಅಶೋಕಪುರಂ ಪ್ರವೇಶಿಸುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಪುಷ್ಪವೃಷ್ಠಿ ಸುರಿಸಿ ಕಂಬನಿ ಮೀಡಿದರು. ಎಂಟಿಎಂ ಶಾಲೆಯ ಸುತ್ತ ಸಾವಿರಾರು ಮಂದಿ ಜಮಾಯಿಸಿದ್ದರಿಂದ ಶಾಲೆಯ ಆವರಣ ಜನರಿಂದಲೇ ಭರ್ತಿಯಾಗಿತ್ತು. ಪಾರ್ಥಿವ ಶರೀರ ಹೊತ್ತು ಸಾಗಿದ ವಾಹನವನ್ನು ವಿಶೇಷ ಹೂ ಹಾಗೂ ತುಳಸಿ ಮಾಲೆಗಳಿಂದ ಅಲಂಕರಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಏ. 30ರಂದು ಬೆಳಗ್ಗೆ 10 ಗಂಟೆಗೆ ಅಶೋಕಪುರಂನಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ನಗರದ ಸಿಲ್ಕ್‌ ಫ್ಯಾಕ್ಟರಿ ಬಳಿಯಲ್ಲಿರುವ ಶ್ರೀನಿವಾಸಪ್ರಸಾದ್ ಅವರ ಡಾ.ಬಿ.ಆರ್.ಅಂಬೇಡ್ಕರ್ ಎಜುಕೇಷನ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಶ್ರೀನಿವಾಸ ಪ್ರಸಾದ್ ಬೌದ್ಧಧರ್ಮದ ಅನುಯಾಯಿ ಆಗಿದ್ದರಿಂದ ಅಹಿಂಸೆ, ಸತ್ಯದ ಸಂದೇಶದ ಮೂಲಕ ವಿಧಿವಿಧಾನವನ್ನು ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸಂಸದ ವಿ. ಶ್ರೀನಿವಾಸಪ್ರಸಾದ್ ಅವರ ನಿಧನದ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲ ಸರಕಾರಿ ಕಚೇರಿ, ಶಾಲಾ ಕಾಲೇಜುಗಳಿಗೂ (ಪೂರ್ವ ನಿಗದಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ), ಅನುದಾನ ಪಡೆಯುವ ಎಲ್ಲ ವಿದ್ಯಾ ಸಂಸ್ಥೆಗಳಿಗೂ ಏ. 30ರಂದು ಸಾರ್ವಜನಿಕ ರಜೆ ಘೋಷಿಸಿ ಸರಕಾರ ಆದೇಶ ಹೊರಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+