ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ರೈತ ಮುಖಂಡ ಬಡಗಲಪುರ ನಾಗೇಂದ್ರ
ಮೈಸೂರು, ಆಗಸ್ಟ್ 11: ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದರು.
ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ; ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ
"ಆಗಸ್ಟ್ 8ರಂದು, ಭೂಮಿ ಮಾರಾಟಕ್ಕಿಲ್ಲ ಎಂದು ಶಪಥ ಮಾಡಿ ನಮ್ಮ ಭೂಮಿ ನಮ್ಮ ಹಕ್ಕು, ಅನ್ಯರಿಗೆ ಮಾರಾಟವಿಲ್ಲ ಎಂಬ ನಾಮಫಲಕಗಳನ್ನು ಊರಿನ ಮುಂದೆ ಹಾಕುವ ಮೂಲಕ ನಮ್ಮೂರಿಗೆ ಬರಬೇಡಿ ತೊಲಗಿ ಎಂದು ಹೇಳುವ ಕಾರ್ಯಕ್ರಮ ಆರಂಭವಾಗಿದೆ. ಇದರ ಮುಂದುವರಿದ ಭಾಗವಾಗಿ ಆಗಸ್ಟ್ 14ರ ಮಧ್ಯರಾತ್ರಿ 12 ಗಂಟೆಗೆ ಬೆಂಗಳೂರಿನಲ್ಲಿ ತಮಟೆ ಚಳವಳಿ ಮತ್ತು ಪಂಜಿನ ಮೆರವಣಿಗೆ ನಡೆಸಲಾಗುವುದು. ಆಗಸ್ಟ್ 29ರಂದು ಜನ ಜಾಗೃತಿಗಾಗಿ ವಿಚಾರ ಸಂಕಿರಣ ನಡೆಸಲಾಗುವುದು" ಎಂದು ತಿಳಿಸಿದರು.
"ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಜನ ಸಂಪರ್ಕ ಸಭೆಗಳನ್ನು ಏರ್ಪಡಿಸಿ ಚಳವಳಿಯನ್ನು ತೀವ್ರಗೊಳಿಸಲಾಗುವುದು. ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂಪೂರ್ಣ ಜನವಿರೋಧಿಯಾಗಿದೆ. ಇದರ ವಿರುದ್ಧ ಸಂಘಟಿತ ಹೋರಾಟ ಮಾಡಲಾಗುವುದು. ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು" ಎಂದು ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಆಕ್ರೋಶ ವ್ಯಕ್ತಪಡಿಸಿದರು.
"ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ರಾಜ್ಯ ಸರ್ಕಾರಗಳು ನಡೆದುಕೊಳ್ಳುತ್ತಿವೆ. ಸುಗ್ರೀವಾಜ್ಞೆ ಹೊರಡಿಸುವ ಮೂಲಕ ನೂತನ ಕಾಯ್ದೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಜನ ವಿರೋಧಿ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನ ನಡೆದಿದೆ. ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ನಿರಂತರ ಹೋರಾಟ ನಡೆಸಲಾಗುವುದು" ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಕೂಡ ಎಚ್ಚರಿಕೆ ನೀಡಿದರು.