ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ಪ್ರತಿಭಟನೆ
ಮೈಸೂರು, ಮೇ 27: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಮೈಸೂರಿನಲ್ಲಿ ಇಂದು ಮೌನ ಪ್ರತಿಭಟನೆ ನಡೆಯಿತು.
ಮೈಸೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಇಂದು ಸಾಮಾಜಿಕ ಅಂತರ ಕಾಯ್ದುಕೊಂಡು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮಾತನಾಡಿ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ನಮ್ಮ ವಿರೋಧವಿದೆ ಎಂದ ಅವರು, ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು. ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ರೈತರು, ಕೃಷಿ ಕಾರ್ಮಿಕರ ಸಮಸ್ಯೆ ಆಲಿಸಿ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಎಪಿಎಲ್, ಬಿಪಿಎಲ್ ಕಾರ್ಡ್ ಎಂಬ ತಾರತಮ್ಯವಿಲ್ಲದೆ ಪ್ರತಿ ವ್ಯಕ್ತಿಗೆ 15 ಕೆ.ಜಿ ಅಕ್ಕಿ ಹಾಗೂ ಅವಶ್ಯಕ ರೇಷನ್ ನೀಡಬೇಕು. ಸ್ತ್ರೀ ಶಕ್ತಿ ಹಾಗೂ ಸಹಕಾರಿ ಸಂಘಗಳ ಸಾಲ ವಸೂಲಾತಿ ನಿಲ್ಲಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಮತ್ತು ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಭರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.












Click it and Unblock the Notifications