ಕೇಂದ್ರ ಸರ್ಕಾರ ವಿರುದ್ಧ ರೈತರ ಹೋರಾಟ: ಇಂದು ರಾಜ್ಯಾದ್ಯಂತ ಪಂಜಿನ ಮೆರವಣಿಗೆ
ಮೈಸೂರು, ಡಿಸೆಂಬರ್ 31: ದೆಹಲಿ ಗಡಿಯಲ್ಲಿ ದೇಶದ ರೈತರ ಒಳಿತಿಗಾಗಿ ಉಪವಾಸ ನಡೆಸುತ್ತಿರುವ ಜಗಜಿತ್ ಸಿಂಗ್ ದಲೆವಾಲ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಇಂದು ಡಿಸೆಂಬರ್ 31ರಂದು ಸಂಜೆ 6 ಗಂಟೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು.
ಮೈಸೂರು ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಕೇಂದ್ರ ಸರ್ಕಾರದ ಭಿಕ್ಷೆ ಕೇಳುತ್ತಿಲ್ಲ. ನಮ್ಮ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಮಾಡಬೇಕೆಂದು ಕೇಳುತ್ತ ಹೋರಾಟ ಮಾಡುತ್ತಿದ್ದೇವೆ. ಈ ಬಗ್ಗೆ ಗಂಭೀರತೆ ತೋರದ ಕೇಂದ್ರ ಸರ್ಕಾರ ಯಾರೂ ಕೇಳದೆ ಇರುವ ಒಂದು ದೇಶ ಒಂದು ಚುನಾವಣೆ, ಒಂದು ದೇಶ ಒಂದು ಜಿಎಸ್ಟಿ, ಒಂದು ದೇಶ ಒಂದು ಪಡಿತರ ಕಾರ್ಡ್ ಜಾರಿಗೆ ತರುತ್ತಿದೆ.

ದೇಶದಲ್ಲಿ ಶೇ.80ರಷ್ಟು ಇರುವ ರೈತರು ಕೇಂದ್ರ ಸರ್ಕಾರಕ್ಕೆ ಮತ ನೀಡಿದ್ದಾರೆ. ರೈತರು ಕೇಳುತ್ತಿರುವ ಒತ್ತಾಯಕ್ಕೆ ಕೇಂದ್ರ ಸರ್ಕಾರ ಯಾಕೆ ನಿರಾಸಕ್ತಿ ತೋರುತ್ತಿದೆ? ಇದನ್ನು ನಾವು ಆಯ್ಕೆ ಮಾಡಿದ ಲೋಕಸಭಾ ಸದಸ್ಯರು ನಿದ್ರೆ ಮಾಡದೆ ಈ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು. ಇಲ್ಲದಿದ್ದರೆ ಹಳ್ಳಿಗಳಿಗೆ ಬಂದರೆ ನಿಮ್ಮನ್ನು ಹೊರಗಿಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ರೈತ ನಾಯಕ ದಲೆವಾಲ ೩೩ ದಿನದಿಂದ ಉಪವಾಸ ಕುಳಿತಿರುವುದು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ರೈತರ ಪಾಲಿಗೆ ಸರ್ಕಾರ ಸತ್ತು ಹೋಗಿದೆಯೇ? ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ ಮೇಣದ ಬತ್ತಿ ಪ್ರತಿಭಟನೆ ಮಾಡಿ ರೈತರ ಆಕ್ರೋಶ ವ್ಯಕ್ತಪಡಿಸಲಾಗಿದೆ. ವಿದೇಶಗಳಿಗೆ ಹೋಗಿ ಯಾವುದೇ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ಹಿತವಚನ ಹೇಳುವ ಪ್ರಧಾನಿ ಮೋದಿ ಅವರಿಗೆ ದೇಶದ ರೈತರು ನ್ಯಾಯಕ್ಕಾಗಿ ತಿಂಗಳುಗಟ್ಟಲೆ ಉಪವಾಸ ಮಾಡುತ್ತಿರುವುದು ಕಾಣುತ್ತಿಲ್ಲವೆ ಎಂದು ಪ್ರಶ್ನಿಸಿದರು.
33 ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಜಗಜಿತ್ ಸಿಂಗ್ ದಲೆವಾಲ ಅವರನ್ನು ಆಸ್ಪತ್ರೆಗೆ ರವಾನಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದ್ದರೂ ಇನ್ನೂ ಪಾಲಿಸಿಲ್ಲ. ಈ ಕುರಿತು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಪಂಜಾಬ್ ಸರ್ಕಾರಕ್ಕೆ ಎಚ್ಚರಿಸಿದೆ. ಬೇರೆ ಬೇರೆ ರಾಜ್ಯಗಳ ರೈತರು ಕನೂರಿ ಬಾರ್ಡರ್ಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ ಆಗುತ್ತಿದ್ದಾರೆ. ಕರ್ನಾಟಕ ರೈತರ ತಂಡ ಸದ್ಯದಲ್ಲಿಯೇ ದೆಹಲಿ ಕಡೆ ಹೋಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ಪರಶಿವಮೂರ್ತಿ, ಅಂಬಳೆ ಮಂಜುನಾಥ್, ಸೂರಿ ಉಪಸ್ಥಿತರಿದ್ದರು.












Click it and Unblock the Notifications