ಮೈಸೂರಿನಲ್ಲಿ ಚುನಾವಣಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ : ಫ್ಲೆಕ್ಸ್ ತೆರವು
ಮೈಸೂರು, ಮಾರ್ಚ್ 29 : ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಮಂಗಳವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಮೈಸೂರಿನ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್ ಗಳನ್ನು ಪಾಲಿಕೆಯ ಸಿಬ್ಬಂದಿ ತೆರವುಗೊಳಿಸಿದರು.
ಜಾಹೀರಾತು ಫಲಕ, ಸರ್ಕಾರದ ಯೋಜನೆಗಳ ದೃಶ್ಯವನ್ನು ಹೊಂದಿರುವ ಪ್ಲೆಕ್ಸ್ ಗಳನ್ನು ತೆರವುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಆವರಣ, ತಾಲ್ಲೂಕು ಕಚೇರಿ ಆವರಣ, ಆರ್ಟಿಒ ಕಚೇರಿ ಆವರಣ, ನ್ಯಾಯಾಲಯದ ಮುಂಭಾಗ, ಜಿಪಂ ಕಚೇರಿ ಆವರಣ ಹಾಗೂ ಪ್ರಮುಖ ಸ್ಥಳಗಳಲ್ಲಿ ಅಳವಡಿಸಿದ್ದ ಸರ್ಕಾರಿ ಜಾಹೀರಾತುಗಳ ಫಲಕಗಳನ್ನು ತೆರವುಗೊಳಿಸಿದ್ದು, ಕೆಲವು ಜಾಹೀರಾತು ಫಲಕಗಳ ಮೇಲೆ ಅಂಟಿಸಿದ್ದ ಪೋಸ್ಟರ್ ಗಳನ್ನು ಕಿತ್ತು ಹಾಕಲಾಗಿದೆ.
ಪಾಲಿಕೆ ಅಭಯ ಕ್ಷಿಪ್ರ ಪಡೆ ಕಾರ್ಯಾಚರಣೆ ನಡೆಸಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿದ್ದ ಪ್ಲೆಕ್ಸ್ ಗಳ ಜತೆಗೆ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದೆ.
ಶಸ್ತ್ರಾಸ್ತ್ರ ಒಪ್ಪಿಸಲು ಮನವಿ:
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮೇ 12ರಂದು ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶಸ್ತ್ರಾಸ್ತ್ರ ಕಾಯ್ದೆಯಡಿ ಶಸ್ತ್ರಾಸ್ತ್ರ ರಹದಾರಿ ಹೊಂದಿರುವವರು ಚುನಾವಣಾ ಪಕ್ರಿಯೆ ಮುಗಿಯುವವರೆಗೆ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಒಪ್ಪಿಸುವಂತೆ ಜಿಲ್ಲಾ ದಂಡಾಧಿಕಾರಿಯೂಆದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ