ಸಿಎಂ ಬದಲಾದ್ರೆ ಅಜೆಂಡಾ ಬದಲಾಗುತ್ತಾ?: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಮೈಸೂರು, ಜುಲೈ 28: "ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದ್ದಿದ್ದು, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಹಾಗೆಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ?,'' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, "ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ? ಕೋಮುವಾದ ಹೊರಟು ಹೋಗುತ್ತಾ? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ? ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ಯಾವತ್ತಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ,'' ಎಂದರು.
"ಬಿಜೆಪಿ ಸರ್ಕಾರದಿಂದ ಯಾವುದೇ ನಿರೀಕ್ಷೆ ಮಾಡುವುದಿಲ್ಲ. ಆದರೆ ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಅವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಒಳ್ಳೆಯ ಆಡಳಿತ ನೀಡಲಿ,'' ಎಂದು ಹೇಳಿದರು.

"ಅಲ್ಲದೇ ತಂದೆ ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಮಹಾತ್ಮಾ ಗಾಂಧಿಯ ಮಗ ಮಹಾತ್ಮನಾಗಲಿಲ್ಲ. ಅದೇ ರೀತಿ ಬೊಮ್ಮಾಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ,'' ಎಂದು ಹೇಳಿದರು.
"ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾ? ಎಂದು ಪ್ರಶ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಹೆಸರನ್ನು ಸೂಚಿಸಿರುವುದು ಯಡಿಯೂರಪ್ಪ, ಸರ್ಕಾರದ ಮೇಲೆ ಬಿಎಸ್ವೈ ಸಹಜವಾಗಿ ಹಿಡಿತ ಹೊಂದಿರುತ್ತಾರೆ. ಹೀಗಿರುವಾಗ ಬೊಮ್ಮಾಯಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾ?,'' ಎಂದರು.
"ಆದರೆ ಈ ಕ್ಷಣದಲ್ಲೆ ನಾನು ಬೊಮ್ಮಯಿ ಬಗ್ಗೆ ಏನು ಹೇಳುವುದಿಲ್ಲ. ಅವರ ಆಡಳಿತವನ್ನು ಕಾದು ನೋಡೋಣ. ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ,'' ಎಂದು ಹೇಳಿದರು.












Click it and Unblock the Notifications