ಇಂಗ್ಲಿಷ್ ಶಿಕ್ಷಣ ಜಾರಿಗೆ ನನ್ನ ಸ್ಪಷ್ಟ ವಿರೋಧವಿದೆ
ಮೈಸೂರು, ಮೇ 22 : ರಾಜ್ಯದಲ್ಲಿ ಕನ್ನಡ ಶಾಲೆಗಳು ಮುಚ್ಚುತ್ತಿದ್ದು, ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಕನ್ನಡ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಪೋಷಕರಿಗೆ ಇಂಗ್ಲಿಷ್ ಮಾಧ್ಯಮದ ವ್ಯಾಮೋಹ ಇದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಆರ್ಥಿಕವಾಗಿ ಹಿಂದುಳಿದವರು ತಮ್ಮ ಮಕ್ಕಳು ಇಂಗ್ಲಿಷ್ ಶಾಲೆಯಲ್ಲಿ ಕಲಿಯಲಿ ಎಂದು ಆಸೆ ಪಡುತ್ತಾರೆ. ಕನ್ನಡ ಭಾಷೆ ಬೇರೆ, ಮಾಧ್ಯಮ ಬೇರೆ. ಇಂಗ್ಲಿಷ್ ಅನ್ನು ಭಾಷೆಯನ್ನಾಗಿ ಕಲಿಯಲು ಯಾರ ವಿರೋಧವೂ ಇಲ್ಲ. ಆದರೆ ಇಂಗ್ಲಿಷ್ ಮಾಧ್ಯಮ ಬೇಡ ಎನ್ನುತ್ತಿದ್ದೇವೆ. ಈ ಬಗ್ಗೆ ಕೆಲವರಿಗೆ ಗೊಂದಲ ಇದೆ. ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತರೆ ನಿರರ್ಗಳವಾಗಿ ಮಾತನಾಡಬಹುದು. ಆದರೆ ಅದು ಹೃದಯದ ಭಾಷೆ ಆಗಲಾರದು ಎಂದರು.
ಕನ್ನಡ ಭಾಷೆ, ನೆಲ, ಜಲದ ವಿಚಾರದಲ್ಲಿ ರಾಜಿ ಆಗಲ್ಲ. ನಾವು ಕಾಮನ್ ಮಿನಿಮಮ್ ಪ್ರೋಗ್ರಾಂ ಮಾಡಿಕೊಂಡಿದ್ದೇವೆ. ಅದರಲ್ಲಿ ಈ ವಿಚಾರ ಇಲ್ಲ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಭೋದನೆಗೆ ನನ್ನ ವಿರೋಧವಿದೆ. ಆದ್ದರಿಂದ ಮುಖ್ಯಮಂತ್ರಿಯವರೊಂದಿಗೆ ನಾನು ಮಾತನಾಡುತ್ತೇನೆ ಎಂದು ತಿಳಿಸಿದರು. ಸಾಮಾಜಿಕ, ಶೈಕ್ಷಣಿಕ ವ್ಯವಸ್ಥೆ ಸುಧಾರಣೆ ಆಗಬೇಕಾದರೆ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು ಎಂದರು.

ಮಾತೃ ಭಾಷೆಯಲ್ಲಿ ಶಿಕ್ಷಣ ಪಡೆಯಬೇಕಾದರೆ ಸಂವಿಧಾನ ಬದಲಾವಣೆ ಆಗಲೇಬೇಕು. ಸುಪ್ರೀಂಕೋರ್ಟ್ ಮಕ್ಕಳ ವಿದ್ಯಾಭ್ಯಾಸ ನೀಡುವುದು ಅವರ ಪೋಷಕರಿಗೆ ಬಿಟ್ಟ ವಿಚಾರ ಎಂದಿದೆ. ಹಾಗಾಗಿ ಸಂವಿಧಾನ ಬದಲಾವಣೆಯಿಂದ ಮಾತ್ರ ಸರಿಪಡಿಸಲು ಸಾಧ್ಯ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಣ ಜಾರಿಗೆ ತರಲು ನನ್ನ ಸ್ಪಷ್ಟ ವಿರೋಧವಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಅಧಿಕಾರ ಇದ್ದರೂ - ಹೋದರೂ ನಾನು ಇದರ ಪರವಾಗಿ ಇರುತ್ತೇನೆ. ಈ ವಿಚಾರದಲ್ಲಿ ರಾಜಿಯಿಲ್ಲ ಎಂದರು.












Click it and Unblock the Notifications