ಸಂಸದ ಶ್ರೀನಿವಾಸ ಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಚಿವ
ಮೈಸೂರು, ಡಿಸೆಂಬರ್ 23: ""ನಂಜನಗೂಡು ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಸಚಿವ ಎಚ್.ಸಿ ಮಹದೇವಪ್ಪ ಕಾರಣ'' ಎಂದು ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಇತ್ತೀಚಿಗೆ ಟೀಕಿಸಿದ್ದರು.
ಇದಕ್ಕೆ ಟ್ವಿಟ್ಟರ್ ನಲ್ಲಿ ಮಾಜಿ ಸಚಿವ ಎಚ್.ಸಿ ಮಹದೇವಪ್ಪ ತಿರುಗೇಟು ನೀಡಿದ್ದು, ""ಬಾಬಾ ಸಾಹೇಬರ ಮಾತಿಗೆ ಅನುಸಾರವಾಗಿ ರಾಜಕೀಯ ಅಧಿಕಾರವನ್ನು ಸಮರ್ಥವಾಗಿ ಬಳಸಿಕೊಂಡು ರಾಜ್ಯದ ಏಳಿಗೆಗೆ ಶ್ರಮಿಸಿದ್ದೇವೆ ಎಂದು ನಾವು ಗರ್ವದಿಂದ ಹೇಳುತ್ತೇವೆ. ಹೀಗೆ ಹೇಳುವ ನೈತಿಕತೆ ಕೋಮುವಾದಿಗಳ ಜೊತೆ ಸೇರಿಕೊಂಡಿರುವ ಶ್ರೀನಿವಾಸ್ ಪ್ರಸಾದ್ ಅವರಲ್ಲಿ ಉಳಿದಿದೆಯೇ'' ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ಮತ್ತೆ ವಾಗ್ದಾಳಿ
ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಚ್.ಸಿ ಮಹದೇವಪ್ಪ, ""ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಲೋಕಸಭಾ ಚುನಾವಣೆಯಲ್ಲಿ ಗೆದ್ದ ಮೇಲೆ ಅಭಿವೃದ್ಧಿಯಲ್ಲಿ ಶೂನ್ಯ ಸಂಪಾದನೆ ಮಾಡಿರುವ ಶ್ರೀನಿವಾಸ್ ಪ್ರಸಾದ್ ಅವರು ಕೇವಲ ಒಣ ರಾಜಕೀಯ ಮಾಡುವುದರಲ್ಲಿ ಮಗ್ನರಾಗಿದ್ದು, ಬಾಬಾ ಸಾಹೇಬರ ಶ್ರಮದಿಂದ ದೊರೆತ ಅಧಿಕಾರದ ಉದ್ದೇಶ ಹಾಗೂ ಅದರ ಮಹತ್ವವನ್ನು ಹಾಳು ಮಾಡುತ್ತಿದ್ದಾರೆ'' ಎಂದು ಕಿಡಿಕಾರಿದ್ದಾರೆ.
ನಂಜನಗೂಡು ಉಪ ಚುನಾವಣೆಯಲ್ಲಿ ನಾನು ಮತ್ತು ಸಿದ್ದರಾಮಯ್ಯ ಸೇರಿ ಅವರನ್ನು ಸೋಲಿಸಿದೆವು ಎಂದು ಪ್ರಸಾದ್ ಹೇಳಿದ್ದಾರೆ. ಹಾಗಿದ್ದರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬಿಟ್ಟು, ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಶ್ರೀನಿವಾಸ್ ಪ್ರಸಾದ್ ಅವರನ್ನು ಗೆಲ್ಲಿಸಬೇಕಾಗಿತ್ತೇ ಎಂದು ಪ್ರಶ್ನಿಸಿದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಒಂದು ಯಶಸ್ವಿ ಸರ್ಕಾರವನ್ನು ಉರುಳಿಸಲು ಮತ್ತು ಶೋಷಿತರ ಹಾಗೂ ಅಹಿಂದ ವರ್ಗಗಳ ಕೈಯಿಂದ ಅಧಿಕಾರವನ್ನು ಕಿತ್ತುಕೊಳ್ಳಲು ಯಾರೆಲ್ಲಾ ಸಂಚು ಮಾಡಿದ್ದಾರೆಂದು ನನಗೂ ಗೊತ್ತಿದೆ. ಈ ಬಗ್ಗೆ ಸಂಸದ ಶ್ರೀನಿವಾಸ್ ಪ್ರಸಾದ್ ಅವರಿಗೂ ಸಹ ನಿಖರವಾದ ಮಾಹಿತಿ ಇರಬಹುದು ಲೇವಡಿ ಮಾಡಿದ್ದಾರೆ.