"ಲಾಭದ ಕಡೆ ವಲಸೆ ಹೋಗೋ ಹಳ್ಳಿ ಹಕ್ಕಿ ವಿಶ್ವನಾಥ್": ಸಾರಾ ಮಹೇಶ್ ವ್ಯಂಗ್ಯ
ಮೈಸೂರು, ಆಗಸ್ಟ್ 5: "ವಿಶ್ವನಾಥ್ ರಾಜಕಾರಣದ ವ್ಯಭಿಚಾರಿ. ಆಮಿಷಕ್ಕೊಳಗಾಗಿ ಪಕ್ಷ ಬದಲಿಸುವುದು ರಾಜಕಾರಣದ ವ್ಯಭಿಚಾರ" ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ವಿರುದ್ಧ ಮಾಜಿ ಸಚಿವ ಸಾ.ರಾ ಮಹೇಶ್ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿಶ್ವನಾಥ್ ಅವರನ್ನು ನಾನೇ ಜೆಡಿಎಸ್ ಗೆ ಕರೆ ತಂದು ನಮ್ಮ ಪಕ್ಷಕ್ಕೆ ವಿಷ ಹಾಕಿಬಿಟ್ಟೆ. ಸದನದಲ್ಲಿ ನಾನು ಅವರ ವಿರುದ್ಧ ಮಾತಾಡಿದ್ದಕ್ಕೆ ಈಗಲೂ ಬದ್ಧನಾಗಿದ್ದೇನೆ. ಅವರ ಜೊತೆ ಚರ್ಚೆಗೆ ಬರಲು, ದೇವಸ್ಥಾನಕ್ಕೆ ಹೋಗಲು ನಾನು ಸದಾ ಸಿದ್ಧ. ಅವರ ಜೊತೆಯೇ ಕೂತು ಅವರ ಇನ್ನಷ್ಟು ಚರಿತ್ರೆ ಬಿಚ್ಚಿಡುತ್ತೇನೆ. ಹಕ್ಕಿ ಒಂದೊಂದು ಋತುವಿನಲ್ಲಿ ಒಂದೊಂದು ಗೂಡು ಸೇರುತ್ತದೆ. ಒಂದು ಋತುವಿನಲ್ಲಿ ವಲಸೆ ಹೋಗುತ್ತದೆ. ಲಾಭ ಎಲ್ಲಿರುತ್ತೋ ಅಲ್ಲಿಗೆ ವಲಸೆ ಹೋಗುತ್ತದೆ. ಹಾಗೇ ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಕೂಡ" ಎಂದರು.
"ನನ್ನ ಕೆಲಸವೇ ರಿಯಲ್ ಎಸ್ಟೇಟ್ ಉದ್ಯಮ. ಆದರೆ ವರ್ಗಾವಣೆಯಲ್ಲಿ ಹಣ ಮಾಡಿಲ್ಲ. ರಾಹುಲ್ ಗಾಂಧಿ ಅವರ ಸಭೆಗೆ ಆಗಮಿಸುವಂತೆ ವಿಶ್ವನಾಥ್ ಅವರನ್ನು ನಾನೇ ಕರೆದೆ. ಆಗ ನಾನು ಸಿದ್ದರಾಮಯ್ಯ ಇರುವ ಸಭೆಗೆ ಬರುವುದಿಲ್ಲ ಎಂದು ವಿಶ್ವನಾಥ್ ಅವರೇ ಹೇಳಿದ್ದರು. ಅಲ್ಲದೆ, ವಿಶ್ವನಾಥ್ ಅವರು ತಾವು ಯಾವುದೇ ಆಸೆ, ಆಮೀಷಕ್ಕೆ ಬಲಿ ಆಗಲಿಲ್ಲ ಎಂದು ತಾಯಿ ಚಾಮುಂಡಿ ಮುಂದೆ ಪ್ರಮಾಣ ಮಾಡಲಿ. ನೀವು ಯಾವುದೇ ಆಮಿಷಕ್ಕೊಳಗಾಗಿ ರಾಜೀನಾಮೆ ನೀಡಿಲ್ಲ ಎಂದಾದರೆ, ನಾನು ಇವತ್ತೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಾರ್ವಜನಿಕ ಜೀವನದಿಂದ ದೂರ ಸರಿಯುತ್ತೇನೆ" ಎಂದು ಸಾ.ರಾ.ಮಹೇಶ್ ಅವರು ವಿಶ್ವನಾಥ್ ಅವರಿಗೆ ಸವಾಲು ಹಾಕಿದರು.

"ನಮ್ಮ ಪಕ್ಷದವರೇ ನನ್ನನ್ನು ವಿರೋಧಿಸಿದರೂ ಕೆ.ಆರ್ ನಗರ ಕ್ಷೇತ್ರದ ಜನತೆ ನನ್ನನ್ನು ಗೆಲ್ಲಿಸಿದರು. ದೇವೇಗೌಡರಿಗೆ, ಜೆಡಿಎಸ್ ಗೆ ವಿಷ ಹಾಕಿದವರು ಬಹಳ ಜನ ಇದ್ದಾರೆ. ಅದನ್ನೆಲ್ಲ ಜೀರ್ಣಿಸಿಕೊಳ್ಳುವ ಶಕ್ತಿ ನಮ್ಮ ನಾಯಕರಿಗೆ, ಪಕ್ಷಕ್ಕೆ ಇದೆ. ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಬೇಕಾದರೂ ಬರ್ತಿನಿ. ಬಹಿರಂಗ ಚರ್ಚೆಗೂ ನಾನು ಸಿದ್ಧ. ನಾನು ಯಾವುದೇ ಆಸೆ ಆಮಿಷಕ್ಕೆ ಒಳಗಾಗಿಲ್ಲ. ಪಕ್ಷಕ್ಕೆ ಮೋಸ ಮಾಡಿ ಹೋಗಿಲ್ಲ. ತಾಯಿ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡ್ತೀರಾ? ನಿಮಗೆ ಆ ಧೈರ್ಯ ಇದ್ದರೆ ಬನ್ನಿ ಪ್ರಮಾಣ ಮಾಡಿ" ಎಂದರು.
ಮಾಜಿ ಸಚಿವ ಸಾರಾ ಮಹೇಶ್ ಹಾಗೂ ಅನರ್ಹ ಶಾಸಕ, ಮಾಜಿ ಸಚಿವ ಎಚ್.ವಿಶ್ವನಾಥ್ ಆರೋಪ-ಪ್ರತ್ಯಾರೋಪ ರಾಜಕೀಯ ಮತ್ತೊಂದು ತಿರುವು ಪಡೆದಿದ್ದು, ಇದು ಎಲ್ಲಿಗೆ ಎಳೆದುಕೊಂಡು ಹೋಗಲಿದೆ ಎಂಬುದನ್ನು ಕಾದುನೋಡಬೇಕಿದೆ.












Click it and Unblock the Notifications