ಮೋದಿ ಸಮಾವೇಶಕ್ಕಾಗಿ ರಾಮದಾಸ್ ಪಾದಯಾತ್ರೆ
ಮೈಸೂರು, ನ.11: ಬೆಂಗಳೂರಿನಲ್ಲಿ ನ.17ರಂದು ನಡೆಯಲಿರುವ 'ಭಾರತ ಗೆಲ್ಲಿಸಿ' ನರೇಂದ್ರ ಮೋದಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಸಾವಿರಾರು ಕಾರ್ಯಕರ್ತರೊಂದಿಗೆ ನ.12ರಂದು ಪಾದಯಾತ್ರೆ ಮೂಲಕ ತೆರಳುತ್ತಿರುವುದಾಗಿ ಮಾಜಿ ಸಚಿವ ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಸುಳಿವು ನೀಡಿದ್ದಾರೆ.
ಕಳೆದ ಮೇ ತಿಂಗಳಿನಲ್ಲಿ ಕೃಷ್ಣರಾಜ ಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಮಾಜಿ ಸಚಿವ ರಾಮದಾಸ್ ಅವರು ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿಲ್ಲ. ಆದರೆ, ನಮ್ಮ ಬಳಿ ಸಶಕ್ತ ನಾಯಕ(ಮೋದಿ) ರಿದ್ದಾರೆ ಎಂದರು. ಮೈಸೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ರಾಮದಾಸ್ ಅವರ ಹೆಗಲ ಮೇಲಿದೆ ಎಂಬುದನ್ನು ಮರೆಯುವಂತಿಲ್ಲ.
ಒಂದು ವೇಳೆ ಕೆಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಮೈಸೂರಿನಿಂದ ಸ್ಪರ್ಧಿಸಿದರೆ ನಿಮ್ಮ ಬೆಂಬಲ ಸಿಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ರಾಮದಾಸ್, ಕಾಂಗ್ರೆಸ್ ಉಸ್ತುವಾರಿ ಹಾಗೂ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರನ್ನು ನಿಲ್ಲಿಸಿದರೂ ಅವರ ಪರ ಪ್ರಚಾರಕ್ಕಾಗಿ ಹೋಗುತ್ತೇನೆ ಎನ್ನುವ ಮೂಲಕ ಪಕ್ಷ ನಿಷ್ಠೆ ಮೆರೆದಿದ್ದಾರೆ.

"ಇಂದು ದೇಶಕ್ಕೆ ಸಮರ್ಥ ನಾಯಕತ್ವದ ಅವಶ್ಯಕತೆಯಿದೆ. ದುರ್ಬಲ ಆಡಳಿತದಿಂದಾಗಿ ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳು ಹೆಚ್ಚಾಗತೊಡಗಿವೆ. ಪಾಕಿಸ್ತಾನ, ಚೀನಾ ಹಾಗೂ ಬಾಂಗ್ಲಾದೇಶದಂಥ ರಾಷ್ಟ್ರಗಳು ಭಾರತದ ಗಡಿ ಉಲ್ಲಂಘಿ ಯುದ್ಧಕ್ಕೆ ಪ್ರಚೋದನೆ ನೀಡುತ್ತಿವೆ. ಪಾಕಿಸ್ತಾನ ಪ್ರಚೋದಿತ ಉಗ್ರಗಾಮಿಗಳು ಪದೇ ಪದೇ ದೇಶದ ಮೇಲೆ ದಾಳಿ ಮಾಡುವ ಮೂಲಕ ದುಷ್ಕೃತ್ಯಗಳನ್ನು ನಡೆಸುತ್ತಿದ್ದಾರೆ. ಉಗ್ರರ ದಾಳಿಯನ್ನು ಹತ್ತಿಕ್ಕುವುದಕ್ಕೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ" ಎಂದು ಅವರು ಆರೋಪಿಸಿದರು.
ಈ ಹಿನ್ನಲೆಯಲ್ಲಿ ದೇಶಕ್ಕೆ ನರೇಂದ್ರ ಮೋದಿ ಅವರ ನಾಯಕತ್ವ ಅನಿವಾರ್ಯವಾಗಿದೆ. ಸದೃಢ ಭಾರತ ನಿರ್ಮಾಣಕ್ಕೆ ಮೋದಿ ಅವರ ಅವಶ್ಯಕತೆ ಎದ್ದು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ದೇಶದ ಎಲ್ಲೆಡೆ ಮೋದಿ ಅವರ ಸಮಾವೇಶಕ್ಕೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ.
ಬೆಂಗಳೂರಿನಲ್ಲಿ ನ.17ರಂದು ನಡೆಯಲಿರುವ ಭಾರತ ಗೆಲ್ಲಿಸಿ ಸಮಾವೇಶದಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದಾರೆ.
ಈ ಸಮಾವೇಶಕ್ಕೆ ಮೈಸೂರಿನಿಂದ ಸಾವಿರಾರು ಮಂದಿ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಬೆಂಗಳೂರಿಗೆ ತೆರಳುತ್ತಿರುವುದಾಗಿ ತಿಳಿಸಿದ ಅವರು, ನ.12ರಂದು ಬೆಳಿಗ್ಗೆ 9ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಪಾದಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ ಎಂದರು.
ಬಿಜೆಪಿಯ 1500ಕ್ಕೂ ಅಧಿಕ ಕಾರ್ಯಕರ್ತರು ಮೋದಿ ಬೆಂಬಲಿತ 1500 ಹೊಸ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರಿನಿಂದ ಎಲಿಯೂರು, ನಿಡಗಟ್ಟ, ರಾಮನಗರ ಜೈನ ದೇಗುಲ, ಕೆಂಗೇರಿ ಮಾರ್ಗವಾಗಿ ಬೆಂಗಳೂರಿಗೆ ಪಾದಯಾತ್ರೆ ಸಾಗಲಿದೆ.












Click it and Unblock the Notifications