ಮಾಜಿ ಶಾಸಕ ಶಂಕರಲಿಂಗೇಗೌಡ ಇನ್ನಿಲ್ಲ
ಮೈಸೂರು, ಏ.7 : ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಅವರು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಪೀಡಿತರಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಅವರು ಮೃತಪಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ಯಕೃತ್ತು ಸಮಸ್ಯೆಯಿಂದ ಬಳಲುತ್ತಿದ್ದ ಶಂಕರಲಿಂಗೇಗೌಡ (67) ಅವರು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯ ಸುಧಾರಿಸದ ಹಿನ್ನಲೆಯಲ್ಲಿ ಶನಿವಾರ ಅವರನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ರಾತ್ರಿ 9.40ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ.
ಶಂಕರಲಿಂಗೇಗೌಡ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತೆಗೆದುಕೊಂಡು ಬರಲಾಗಿದ್ದು, ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಲ್ಲಿರುವ ಶಂಕರಲಿಂಗೇಗೌಡರ ವೃದ್ಧಾಶ್ರಮದಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬವರ್ಗದವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರಾಜಕೀಯ ಜೀವನ : 1983ರಲ್ಲಿ ಮೈಸೂರು ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದ ಶಂಕರಲಿಂಗೇಗೌಡರು 1988ರಲ್ಲಿ ಮೈಸೂರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದರು. 1994ರಲ್ಲಿ ಮೊದಲ ಬಾರಿಗೆ ಚಾಮರಾಜ ಕ್ಷೇತ್ರದಿಂದ ಬಿಜೆಪಿ ಸದಸ್ಯರಾಗಿ ವಿಧಾನಸಭೆಗೆ ಆಯ್ಕೆಯಾದ ಅವರು ನಂತರ 2008ರವರೆಗೆ ಸತತ ನಾಲ್ಕು ಬಾರಿ ಅದೇ ಕ್ಷೇತ್ರದಿಂದ ಜಯಗಳಿಸಿದ್ದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವ ಸ್ಥಾನ ಪಡೆಯಬೇಕು ಎಂಬ ಅವರ ಪ್ರಯತ್ನ ಫಲ ನೀಡಿರಲಿಲ್ಲ. ಆದ್ದರಿಂದ, 2013ರ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡು, ಚಾಮರಾಜ ಕ್ಷೇತ್ರದಿಂದಕಲೇ ಕಣಕ್ಕಿಳಿದಿದ್ದರು. ಆದರೆ, ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.
ಯಡಿಯೂರಪ್ಪ ಕಾರಣ : "ಶಂಕರಲಿಂಗೇಗೌಡರ ಸಾವಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರಣ ಎಂದು ಗೌಡರ ಸಹೋದರ ಚಂದ್ರಶೇಖರ್ ಆರೋಪಿಸಿದ್ದಾರೆ. 40 ವರ್ಷ ರಾಜಕಾರಣ ಮಾಡಿದ ಶಂಕರಲಿಂಗೇಗೌಡರಿಗೆ ಯಡಿಯೂರಪ್ಪ ಸೂಕ್ತ ಸ್ಥಾನ ನೀಡಲಿಲ್ಲ. ಯಡಿಯೂರಪ್ಪ ಅವರನ್ನು ನನ್ನ ಅಣ್ಣ ನಂಬಿಕೊಂಡಿದ್ದರು. ಆದರೆ, ಅವರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಯಿತು. ಇದರಿಂದ ಅವರು ಬಹಳ ನೊಂದಿದ್ದರು" ಎಂದು ಚಂದ್ರಶೇಖರ್ ಹೇಳಿದ್ದಾರೆ.