ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಉಚಿತ ಸರ್ಕಾರಿ ಬಸ್ ಸೌಲಭ್ಯ
ಮೈಸೂರು, ಜೂ.28: ಎರಡು ವರ್ಷದ ಬಳಿಕ ಆಷಾಢ ಮಾಸದ ಶುಕ್ರವಾರಗಳಂದು ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನನುಕೂಲ ಆಗದ ರೀತಿಯಲ್ಲಿ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕೈಗೊಳ್ಳಲಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ.ಸೋಮಶೇಖರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಆಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ಮೋತ್ಸವದ ಪ್ರಯುಕ್ತ ಕೈಗೊಳ್ಳಬೇಕಾದ ಅಗತ್ಯ ವ್ಯವಸ್ಥೆಗಳ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಚಿವರು, ಆಷಾಢ ಮಾಸದ ನಾಲ್ಕು ಶುಕ್ರವಾರಗಳು (ಜುಲೈ 1,8,15,22) ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆ ದಿನಗಳಂದು ಸರ್ಕಾರಿ ಬಸ್ಗಳಿಂದ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದರು.
ಭಕ್ತರ ಅನುಕೂಲಕ್ಕಾಗಿ 50 ಬಸ್ ವ್ಯವಸ್ಥೆ:
ಲಲಿತ್ ಮಹಲ್ ಪಕ್ಕದಲ್ಲಿರುವ 18 ಎಕರೆ ಪ್ರದೇಶದಿಂದ ಬಸ್ ಗಳು ಸಂಚರಿಸಲಿವೆ. ಭಕ್ತರ ಅನುಕೂಲಕ್ಕಾಗಿ 50 ಬಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗುವುದು. ಮೈಸೂರು ನಗರದ ನಾನಾ ಭಾಗಗಳಿಂದ ಕೂಡ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

ಬೆಟ್ಟಕ್ಕೆ ಆಗಮಿಸುವವರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು ಅಥವಾ 72 ಗಂಟೆಗಳ ಮುಂಚಿನ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಬಸ್ ನಿಲ್ದಾಣ, ಪಾರ್ಕಿಂಗ್ ಸ್ಥಳ ಸೇರಿದಂತೆ ನಾನಾ ಕಡೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ವರದಿ ಪರಿಶೀಲಿಸಲಿದ್ದಾರೆ ಎಂದರು.
ದಾನಿಗಳಿಂದ ಊಟದ ವ್ಯವಸ್ಥೆ:
ಬೆಳಗ್ಗೆ 5.30 ರಿಂದ ರಾತ್ರಿ 8.30ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಒಂದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಮಳೆ ಹಿನ್ನೆಲೆಯಲ್ಲಿ ಪೆಂಡಾಲ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಬೆಟ್ಟದ ಮೇಲ್ಭಾಗದಲ್ಲಿ ದಾನಿಗಳಿಂದ ಊಟದ ವ್ಯವಸ್ಥೆ ಇರಲಿದೆ. ಸ್ವಚ್ಛತೆ ಕಾಪಾಡಲು ಪೌರಕಾರ್ಮಿಕರನ್ನು ನಿಯೋಜಿಸುವಂತೆ ಸೂಚಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಬೆಟ್ಟದ ಸುತ್ತಮುತ್ತ ಸಿಸಿಟಿವಿ ಅಳವಡಿಸಲಾಗುವುದು. ಅಧಿಕಾರಿಗಳು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಶಾಸಕರುಗಳಾದ ರಾಮದಾಸ್, ನಾಗೇಂದ್ರ, ಜಿ.ಟಿ.ದೇವೇಗೌಡ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಸುನಂದಾ ಪಾಲನೇತ್ರಾ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications