ಕೋವಿಡ್ನಿಂದ ಅನಾಥರಾದ ಮಕ್ಕಳಿಗೆ ಮೈಸೂರು ವಿವಿಯಲ್ಲಿ ಉಚಿತ ಸೀಟ್
ಮೈಸೂರು, ಮೇ 29: ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ವಿದ್ಯಾಭ್ಯಾಸ ಮಾಡಲು ಅಶಕ್ತರಾದವರಿಗೆ 'ಉಚಿತ ಸೀಟು' ನೀಡುವ ಮಹತ್ವದ ತೀರ್ಮಾನವನ್ನು ಮೈಸೂರು ವಿಶ್ವವಿದ್ಯಾನಿಲಯ ತೆಗೆದುಕೊಂಡಿದೆ.
ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಯಿತು.
ಕೋವಿಡ್-19 ವೈರಾಣು 2ನೇ ಆಲೆಯಿಂದ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಸಾವು- ನೋವು ಉಂಟಾಗಿ ಅನೇಕರು ತಂದೆ -ತಾಯಿ ಹಾಗೂ ಮಕ್ಕಳನ್ನು ಕಳೆದುಕೊಂಡಿದ್ದಾರೆ. ಕೆಲವು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಂದೆ ಅಥವಾ ತಾಯಿಯನ್ನು ಕಳೆದುಕೊಂಡು ವಿದ್ಯಾರ್ಜನೆ ಮುಂದುವರಿಸಲು ಕಷ್ಟ-ಸಾಧ್ಯವಾಗಿದೆ.

ಈ ಜಾಗತಿಕ ಸಂಕಷ್ಟದ ಸಮಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯ, ಈ ರೀತಿ ತಂದೆ- ತಾಯಂದಿರನ್ನು ಅಥವಾ ಕುಟುಂಬದ ಜವಾಬ್ದಾರಿಯನ್ನು ವಹಿಸಿಕೊಂಡ ಮುಖ್ಯಸ್ಥರನ್ನು ಕಳೆದುಕೊಂಡು ವಿದ್ಯಾರ್ಜನೆ ಮುಂದುವರೆಸಲು ಸಾಧ್ಯವಾಗದಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರಿಸಲು ಹಾಗೂ ಅವರ ಬದುಕಿನ ಭವಿಷ್ಯವನ್ನು ರೂಪಿಸಲು ಪ್ರಸ್ತಾವನೆಯನ್ನು ತಯಾರಿಸಿರುವುದನ್ನು ಸಭೆಯ ಮುಂದೆ ಮಂಡಿಸಲಾಯಿತು.
ಸುದೀರ್ಘವಾದ ಚರ್ಚೆ ನಡೆದ ಬಳಿಕ ಕೋವಿಡ್ನಿಂದ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ನಿಧನ ಹೊಂದಿದ ಪೋಷಕರ ಮಕ್ಕಳಿಗೆ ಮೈಸೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಲ್ಲಿ ಅಂದರೆ ಮಹಾರಾಜ ಕಾಲೇಜು, ಯುವರಾಜ ಕಾಲೇಜು, ವಿಶ್ವವಿದ್ಯಾನಿಲಯ ಸಂಜೆ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಲಲಿತ ಕಲೆಗಳ ಕಾಲೇಜುಗಳಲ್ಲಿ ತಲಾ ಐದು ಸೀಟುಗಳನ್ನು ಮೀಸಲಿರಿಸಲು ನಿರ್ಧರಿಸಲಾಯಿತು.
ಇನ್ನು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರಗಳಾದ ಮೈಸೂರಿನ ಮಾನಸಗಂಗೋತ್ರಿ, ಮಂಡ್ಯದ ಸರ್.ಎಂ ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ಹಾಸನದ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರ ಮತ್ತು ಚಾಮರಾಜನಗರದ ಡಾ.ಬಿ.ಆರ್ ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರಗಳಲ್ಲಿ ತಲಾ ಮೂರು ಸೀಟುಗಳ ಪ್ರವೇಶಾತಿಯನ್ನು ಅರ್ಹ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.












Click it and Unblock the Notifications