ಆಗಸ್ಟ್ 12 ರ ಗಜಪಯಣಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಿದ್ಧ
ಮೈಸೂರು, ಆಗಸ್ಟ್ 11: ಹುಣಸೂರಿನ ಗುರುಪುರ ಗ್ರಾಮ ಪಂಚಾಯಿತಿಯ ನಾಗಾಪುರ ಗಿರಿಜನ ಆಶ್ರಮ ಶಾಲೆಯ ಆವರಣದಲ್ಲಿ ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಗಜ ಪಯಣ ನಡೆಯಲಿದೆ.
ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ವಿಧ್ಯುಕ್ತ ಚಾಲನೆ ನೀಡುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಹೆಚ್.ಪಿ. ಮಂಜುನಾಥ್ ಅವರು ಅಧ್ಯಕ್ಷತೆ ವಹಿಸುವರು.

ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ರವಿಕುಮಾರ್ ಎಂ.ಜೆ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಗಜಪಯಣವನ್ನು ಕಣ್ತುಂಬಿಸಿಕೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದಿಂದ ಪುನರ್ವಸತಿಗೊಂಡ 280 ಗಿರಿಜನ ಕುಟುಂಬಗಳಿಗೆ ಕೃಷಿ ಭೂಮಿ ನೀಡಬೇಕು, ಜತೆಗೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗಜಪಯಣದ ಎದುರು ಮೌನ ಪ್ರತಿಭಟನೆ ನಡೆಸುವುದಾಗಿ ನಾಗಾಪುರದ ನಾಗರಹೊಳೆ ಗಿರಿಜನರ ಪುನರ್ವಸತಿ ಕೇಂದ್ರದ ಆದಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಆಗಸ್ಟ್ 12 ಗಜಪಯಣ ಈ ಎಲ್ಲ ಅಡೆತಡೆಗಳನ್ನು ಮೀರಿ ನಡೆಯಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.












Click it and Unblock the Notifications