ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ ಪ್ರಿಯಕರ; ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ
ಮೈಸೂರು, ಫೆಬ್ರವರಿ 13: ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕು ಮೆಲ್ಲಹಳ್ಳಿ ಗ್ರಾಮದಲ್ಲಿ ಘಟನೆ.
ಮೇಘನಾ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪ್ರಿಯಕರ ಮಣಿಕಂಠನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಕೆಲವು ದಿನಗಳಿಂದ ಮೇಘನಾ ಹಾಗೂ ಮಣಿಕಂಠ ಪ್ರೀತಿಸುತ್ತಿದ್ದು, ಅಂತರಜಾತಿ ಹಿನ್ನೆಲೆ ಮೇಘನಾ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು.
ನಂತರ ಮೇಘನಾ ಪೋಷಕರು ಇಬ್ಬರಿಗೂ ಬುದ್ಧಿವಾದ ಹೇಳಿ ಕಳಿಸಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಮೇಘನಾ ಒಪ್ಪಿಗೆ ಪಡೆದು ಮತ್ತೊಬ್ಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿದ್ದರು ಮನೆಯವರು.

ಆದರೆ ಈ ವಿಚಾರ ತಿಳಿದು ಮಣಿಕಂಠ ನಿಶ್ಚಿತಾರ್ಥ ಮಾಡಿಕೊಂಡ ಹುಡುಗನಿಗೆ ಇವರಿಬ್ಬರ ಪ್ರೀತಿ ವಿಚಾರವನ್ನು ತಿಳಿಸಿದ್ದ. ಅಷ್ಟೇ ಅಲ್ಲದೆ ತನ್ನ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ಮೇಘನಾಗೆ ಆಗಾಗ್ಗೆ ಒತ್ತಾಯಿಸಿದ್ದಾನೆ. ಇಬ್ಬರೂ ಒಟ್ಟಿಗೆ ಇರುವ ಫೋಟೋವನ್ನು ಕಳಿಸಿ ಬೆದರಿಕೆಯೂ ಹಾಕಿದ್ದ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಾಕುವ ಬೆದರಿಕೆಯನ್ನೂ ಒಡ್ಡಿದ್ದ.
ಈ ಎಲ್ಲಾ ಬೆಳವಣಿಗೆಯಿಂದ ನೊಂದ ಮೇಘನಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಕಂಠ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಮೇಘನಾ ತಂದೆ ಮಹದೇವಯ್ಯ ದೂರು ಸಲ್ಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮಣಿಕಂಠ ನಾಪತ್ತೆಯಾಗಿದ್ದಾನೆ.












Click it and Unblock the Notifications