ಗೃಹಲಕ್ಷ್ಮಿ ಯೋಜನೆ: ಮೈಸೂರಿನಲ್ಲಿ ಮಹಿಳೆಯರು ಅರ್ಜಿ ಸಲ್ಲಿಸಬಹುದಾದ ಸಮಯ, ಕ್ರಮವೇನು?
ಮೈಸೂರು, ಜುಲೈ 19: ಗೃಹ ಲಕ್ಷ್ಮಿ ಯೋಜನೆಗೆ ಮುಖ್ಯ ಮಂತ್ರಿ ಸಿದ್ದರಾಮಯ ಅವರು ಇಂದು ಬ್ಯಾಂಕ್ವೆಟ್ ಹಾಲ್ನಲ್ಲಿ ಚಾಲನೆ ನೀಡಲಿದ್ದು, ಮೈಸೂರು ಜಿಲ್ಲೆಯಲ್ಲಿಯೂ ಈ ಯೋಜನೆಯವ ಪರಿಣಾಮಕಾರಿ ಅನುಷ್ಠಾನಕ್ಕೆ ಮುತುವರ್ಜಿಯಿಂದ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 256 ಬಾಪುಜಿ ಸೇವಾ ಕೇಂದ್ರಗಳು, 222 ಗ್ರಾಮ ಓನ್ ಕೇಂದ್ರಗಳು ಹಾಗೂ 30 ಕರ್ನಾಟಕ ಒನ್ ಕೇಂದ್ರಗಳು ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯ 9 ವಲಯ ಕಚೇರಿಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿಯೂ ಸಮರ್ಪಕವಾಗಿ ಕೆಲಸ ಆಗಬೇಕು ಎಂದು ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಲು ಯಾವುದೇ ಕೊನೆ ದಿನಾಂಕ ನಿಗದಿಯಾಗಿರುವುದಿಲ್ಲ. ಮಹಿಳೆಯರು ನಿರಾತಂಕವಾಗಿ ಅವರಿಗೆ ಮೆಸೇಜ್ ಬಂದಾಗ ನಿಗದಿಪಡಿಸಿದ ದಿನಾಂಕದಂದು ಹತ್ತಿರದ ಕೇಂದ್ರಗಳಿಗೆ ಆಧಾರ್ ಕಾರ್ಡ್, ಗಂಡನ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಮುಖಪುಟದ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಹೋಗಿ ನೋಂದಾಯಿಸಿಕೊಳ್ಳಬೇಕು ಎಂದರು.
ಒಂದು ವೇಳೆ ಆ ಸಮಯದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ, ಮುಂದಿನ ದಿನದ ಸಂಜೆ 5 ರಿಂದ 7 ಗಂಟೆಯವರೆಗೆ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ನೋಂದಾಯಿಸಿಕೊಳ್ಳಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಮಾಹಿತಿ ನೀಡಿದರು.
ಈಗಾಗಲೇ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಪ್ರಜಾ ಪ್ರತಿನಿಧಿಗಳ ಆಯ್ಕೆ ಪೂರ್ಣಗೊಳಿಸಿ. ನೋಂದಾವಣೆ ಪ್ರಕ್ರಿಯೆಯಲ್ಲಿ ಜನಪ್ರತಿನಿಧಿಗಳು ದುಡ್ಡು ತೆಗೆದುಕೊಳ್ಳುವಂತಿಲ್ಲ. ಆ ರೀತಿ ಕಂಡುಬಂದಲ್ಲಿ ಕ್ರಮ ಜರುಗಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಮ್ ಗಾಯತ್ರಿ, ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಮ್, ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ರೂಪ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಡಿ.ಬಸವರಾಜು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹ ನಿರ್ದೇಶಕರಾದ ಟಿ.ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.












Click it and Unblock the Notifications