ಜಿ.ಟಿ.ಡಿಗೆ ಒಲಿಯಲಿದೆಯೇ ಮೈಸೂರು ಉಸ್ತುವಾರಿ ಸಚಿವ ಸ್ಥಾನ?
ಮೈಸೂರು, ಮೇ 23 : ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಗುರುವಾರ ಸದನದಲ್ಲಿ ಬಹುಮತ ಸಾಬೀತುಪಡಿಸಲಿದ್ದಾರೆ. ಆ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಜತೆಗೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಹೊಣೆಗಾರಿಕೆಯೂ ನಿಗದಿಯಾಗಲಿದೆ.
ಮೈಸೂರು ಜಿಲ್ಲೆಯಿಂದ ಸಂಭವನೀಯ ಸಚಿವರ ಪಟ್ಟಿಯಲ್ಲಿ ಹಿರಿಯ ಶಾಸಕ ರಾದ ಅಡಗೂರು ಎಚ್.ವಿಶ್ವ ನಾಥ್, ಜಿ.ಟಿ.ದೇವೇಗೌಡ, ಸಾ.ರಾ. ಮಹೇಶ್, ತನ್ವೀರ್ ಸೇಠ್ ಅವರ ಹೆಸರು ಕೇಳಿ ಬರುತ್ತಿವೆ. ಇದರಲ್ಲಿ ಎ.ಎಚ್. ವಿಶ್ವನಾಥ್, ಜಿ.ಟಿ.ದೇವೇಗೌಡ, ತನ್ವೀರ್ ಸೇಠ್ ಅವರುಗಳು ಜಿಲ್ಲಾ ಉಸ್ತುವಾರಿ ಸಚಿವರುಗಳಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಎ.ಎಚ್. ವಿಶ್ವನಾಥ್ ಅವರು ಎಸ್. ಎಂ.ಕೃಷ್ಣ ಸರ್ಕಾರವಿದ್ದಾಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೆ, ಜಿ.ಟಿ.ದೇವೇಗೌಡ ಅವರು ಎಚ್.ಡಿ. ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.

ಧರಂಸಿಂಗ್ ಮುಖ್ಯಮಂತ್ರಿಯಾಗಿದ್ದಾಗ ತನ್ವೀರ್ ಸೇಠ್ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಇದರಲ್ಲಿ ಜಿ.ಟಿ.ದೇವೇಗೌಡರ ಪರ ಹೆಚ್ಚು ಒಲವು ವ್ಯಕ್ತವಾಗಿದೆ. ಜಿ.ಟಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಸೋಲಿಸಿರುವುದು ಅವರಿಗೆ ಪ್ಲಸ್ ಪಾಯಿಂಟ್ ಆಗಲಿದೆ.
ಚುನಾವಣೆ ಪ್ರಚಾರ ಸಂದರ್ಭ ಎಚ್.ಡಿ.ಕುಮಾರಸ್ವಾಮಿ ಅವರು, ಮುಖ್ಯಮಂತ್ರಿಯನ್ನು ಸೋಲಿಸಿದರೆ, ನಿಮಗೆ ಅನ್ಯಾಯವಾಗುವುದಿಲ್ಲ. ಅಷ್ಟೇ ಪ್ರಬಲವಾದ ಜಿಲ್ಲಾ ಉಸ್ತುವಾರಿ ಸಚಿವರು ನಿಮಗೆ ದೊರೆಯುತ್ತಾರೆ. ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುತ್ತಾರೆ ಎಂದಿದ್ದರು.
ಹೀಗಾಗಿ ಜಿ.ಟಿ.ದೇವೇಗೌಡ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.












Click it and Unblock the Notifications