ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ; ದೇವೇಗೌಡರ ಸ್ಪೋಟಕ ಹೇಳಿಕೆ!
ಮೈಸೂರು, ಡಿಸೆಂಬರ್ 11 : ಕರ್ನಾಟಕದಲ್ಲಿ 2018ರ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಈ ಸರ್ಕಾರ ರಚನೆ ಬಗ್ಗೆ ಎರಡೂ ಪಕ್ಷಗಳಲ್ಲಿ ಇಂದಿಗೂ ಚರ್ಚೆ ನಡೆಯುತ್ತಿದೆ.
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಮೈತ್ರಿ ಸರ್ಕಾರ ರಚನೆ ಬಗ್ಗೆ ಶುಕ್ರವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ. "ಜೆಡಿಎಸ್ ಪಕ್ಷವು ಕಾಂಗ್ರೆಸ್ ಜೊತೆ ಕೈ ಜೋಡಿಸುವಾಗ ಶಾಸಕರ ಅಭಿಪ್ರಾಯ ಕೇಳಿರಲಿಲ್ಲ" ಎಂದು ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಕಾಂಗ್ರೆಸ್ ಜತೆ ಸೇರಿ ಎಚ್. ಡಿ. ಕುಮಾರಸ್ವಾಮಿ ಅವರ ಹೆಸರು ಕೆಟ್ಟಿದೆ ಎಂದು ನನಗೆ ಅನ್ನಿಸುತ್ತಿಲ್ಲ. ಕುಮಾರಸ್ವಾಮಿ ಅವರು ಯಾವ ಅರ್ಥದಲ್ಲಿ ಆ ಮಾತು ಹೇಳಿದ್ದಾರೋ? ನನಗೆ ಗೊತ್ತಿಲ್ಲ" ಎಂದರು.
"ಎಚ್.ಡಿ.ದೇವೇಗೌಡರು, ಕುಮಾರಸ್ವಾಮಿ ಅವರು ಸೇರಿಕೊಂಡು ಕಾಂಗ್ರೆಸ್ ಜತೆ ಸೇರುವ ತೀರ್ಮಾನ ಮಾಡಿದ್ದರು. ಹಿಂದೆ ಧರ್ಮಸಿಂಗ್ ಅವರ ಜೊತೆ ಸಮ್ಮಿಶ್ರ ಸರ್ಕಾರ ಮಾಡುವಾಗ ನಮ್ಮ ಅಭಿಪ್ರಾಯ ಕೇಳಿದ್ದರು. ಈ ಬಾರಿ ಆ ರೀತಿ ಅಭಿಪ್ರಾಯ ಕೇಳಲಿಲ್ಲ" ಎಂದು ದೇವೇಗೌಡರು ಹೇಳಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ಇತ್ತು
ಜಿ. ಟಿ. ದೇವೇಗೌಡರು ಮಾತನಾಡಿ, "ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಚಿವರ ಜೊತೆ ಹೊಂದಾಣಿಕೆ ಇತ್ತು. ಕುಮಾರಸ್ವಾಮಿ ಅವರಿಗೆ ಆಗಿರುವ ಕಹಿ ಅನುಭವ ನನಗೆ ಗೊತ್ತಿಲ್ಲ. ಸರ್ಕಾರವಿದ್ದಾಗ ಕುಮಾರಸ್ವಾಮಿ ಒಳ್ಳೆ ಕೆಲಸವನ್ನೇ ಮಾಡಿದ್ದಾರೆ. ಅವರ ಹೆಸರು ಹೇಗೆ ಕೆಡುತ್ತೆ?" ಎಂದು ಪ್ರಶ್ನಿಸಿದರು.

ಸರ್ಕಾರ ಸುಭದ್ರವಾಗಿದೆ
"ಪ್ರಸ್ತುತ ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಸರ್ಕಾರ ಅಲ್ಲಾಡುತ್ತದೆ, ಬೀಳುತ್ತದೆ ಎನ್ನುವುದು ರಾಜಕೀಯ ಅಪ್ರಬುದ್ಧತೆ ಆಗುತ್ತದೆ" ಎಂದು ಜಿ. ಟಿ. ದೇವೇಗೌಡರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದರು.

ಸರ್ಕಾರ ಬೀಳಿಸಲು ಸಾಧ್ಯವಿಲ್ಲ
"ಪ್ರಧಾನಿ ನರೇದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯದಲ್ಲಿ ಸದೃಢವಾಗಿದೆ. ಇನ್ನೂ 5 ವರ್ಷ ಎರಡು ಕಡೆ ಬಿಜೆಪಿ ಸರ್ಕಾರ ಬೀಳಿಸಲು ಯಾರಿಂದಲೂ ಸಾಧ್ಯವಿಲ್ಲ" ಎಂದು ಜಿ. ಟಿ. ದೇವೇಗೌಡರು ಹೇಳಿದರು.

ಜೆಡಿಎಸ್ನಿಂದ ದೂರ
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಜಿ. ಟಿ. ದೇವೇಗೌಡರು ಉನ್ನತ ಶಿಕ್ಷಣ ಸಚಿವರಾಗಿದ್ದರು. ಸರ್ಕಾರ ಪತನಗೊಂಡ ಬಳಿಕ ಅವರು ಜೆಡಿಎಸ್ನಿಂದ ದೂರವಾಗುತ್ತಿದ್ದಾರೆ. ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹಬ್ಬಿದೆ.












Click it and Unblock the Notifications