ಲೋಕಸಭಾ ಚುನಾವಣೆಗೆ ದೇವೇಗೌಡರ ಸ್ಪರ್ಧೆ ಬಗ್ಗೆ ಜಿಟಿಡಿ ಪ್ರತಿಕ್ರಿಯೆ
ಮೈಸೂರು, ಫೆಬ್ರವರಿ 4:ಮೈಸೂರು-ಕೊಡಗು ಜಿಲ್ಲಾ ಲೋಕಸಭಾ ಕ್ಷೇತ್ರದಿಂದ ಕಾರ್ಯಕರ್ತರು ಎಚ್.ಡಿ. ದೇವೇಗೌಡ ಅವರನ್ನು ಸ್ಪರ್ಧಿಸುವಂತೆ ಒತ್ತಾಯಿಸುತ್ತಿರುವುದಿರಂದ ನಮ್ಮ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳಿಲ್ಲ ಎಂದು ಸಚಿವ ಜಿ.ಟಿ ದೇವೇಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಎಚ್ ಡಿ ದೇವೇಗೌಡರು ನಿಲ್ಲುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳಿಲ್ಲ. ಮೂರೂ ತಿಂಗಳ ಹಿಂದೆಯೇ ನನ್ನ ಮಗ ಹರೀಶ್ ಗೌಡರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದರು. ಆದರೆ ಹರೀಶ್ ಗೌಡ ಸ್ಪರ್ಧಿಸುವುದಿಲ್ಲ ಎಂದರು.
2006ರಲ್ಲಿ ಬಿಜೆಪಿಯವರ ಜೊತೆ 20 ತಿಂಗಳ ಅಧಿಕಾರ ಚೆನ್ನಾಗಿತ್ತು ಎಂದು ಸಚಿವ ಸಿಎಸ್ ಪುಟ್ಟರಾಜು ನೀಡಿರುವ ಹೇಳಿಕೆ ಕುರಿತು ಮಾತನಾಡಿದ ಜಿಟಿಡಿ ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಎಂದೂ ಅಧಿಕಾರಕ್ಕೆ ಬಂದಿರಲಿಲ್ಲ. ಜೆಡಿಎಸ್ - ಬಿಜೆಪಿ ಮೈತ್ರಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದರು. ಯಡಿಯೂರಪ್ಪ ಡಿಸಿಎಂ ಆಗಿದ್ದರು.

ಆಗ ಕುಮಾರಸ್ವಾಮಿ ಅವರು ತೆಗೆದುಕೊಂಡ ನಿರ್ಣಯಗಳು ಅಂತಿಮವಾಗಿರುತ್ತಿದ್ದವು. ಸದ್ಯ ಕಾಂಗ್ರೆಸ್ ನಲ್ಲಿ ಹಿರಿಯ ರಾಜಕಾರಣಿಗಳು ಮುತ್ಸದ್ದಿಗಳಿದ್ದಾರೆ. ಅವರು ಹೆಚ್ಚು ಹೆಚ್ಚು ಅನುದಾನಕ್ಕೆ ಬೇಡಿಕೆ ಇಡುತ್ತಿದ್ದಾರೆ. ಅಲ್ಲದೆ ಎಲ್ಲಾ ಕಾರ್ಪೊರೇಷನ್ ಮಂಡಳಿಗಳನ್ನು ಅವರ ಹತೋಟಿಗೆ ತೆಗೆದುಕೊಂಡಿದ್ದಾರೆ. ನಾವು ಜೆಡಿಎಸ್ ನವರು ಯಾವುದೇ ಮಂಡಳಿಗಳನ್ನು ತೆಗೆದುಕೊಂಡಿಲ್ಲ. ಹಾಗಾಗಿ ನಮಗೆ ಹೆಚ್ಚು ಅವಕಾಶಗಳು ಸಿಗುತ್ತಿಲ್ಲ ಎಂಬ ಅರ್ಥದಲ್ಲಿ ಹೇಳಿದ್ದಾರೆ ಎಂದರು.












Click it and Unblock the Notifications